kabini
ಕೆ.ಬಿ.ರಮೇಶನಾಯಕ
ಮೈಸೂರು: ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ನೀರುಣಿಸಲು ಸಾಧ್ಯವಾಗದೆ ಇದ್ದ ಕೊರಗನ್ನು ನೀಗಿಸಲು ಮುಂದಾಗಿರುವ ರಾಜ್ಯ ಸರ್ಕಾರವು ಐದು ವರ್ಷಗಳ ಸಮಗ್ರ ಯೋಜನೆ ರೂಪಿಸಿದ್ದು, ರೈತರ ೩ ಲಕ್ಷ ಎಕರೆ ಪ್ರದೇಶಗಳಿಗೆ ನೀರು ಸಿಗುವಂತೆ ಮಾಡುವ ಕಾಮಗಾರಿ ಶೀಘ್ರ ಆರಂಭವಾಗಲಿದೆ.
ಕಬಿನಿ ಜಲಾಶಯದ ಎಡ ಮತ್ತು ಬಲದಂಡೆ ನಾಲೆಯ ಅಚ್ಚುಕಟ್ಟು ಪ್ರದೇಶಕ್ಕೆ ಸೇರಿದ ಪ್ರದೇಶಗಳಿಗೆ ನೀರು ತಲುಪುವಂತೆ ಮಾಡಲು ೧೨೧೬.೯೭ ಕೋಟಿ ರೂ. ಮೊತ್ತದ ಯೋಜನೆಗೆ ಶೀಘ್ರ ಟೆಂಡರ್ ಪ್ರಕ್ರಿಯೆ ಶುರುವಾಗಲಿದ್ದು, ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗುವ ನಿರೀಕ್ಷೆ ಹೊಂದಲಾಗಿದೆ.
ವರುಣ ನಾಲೆಯನ್ನು ತಂದು ಕೊಟ್ಟು ಮೈಸೂರು ತಾಲ್ಲೂಕಿನ ಸಾವಿರಾರು ಎಕರೆ ಪ್ರದೇಶಗಳಿಗೆ ನೀರು ಒದಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಬಿನಿ ಭಾಗದ ರೈತರ ಹಲವು ವರ್ಷಗಳ ಬೇಡಿಕೆ ಮತ್ತು ತಮ್ಮ ಜಮೀನಿಗೆ ನೀರಿಲ್ಲ ಎನ್ನುವ ಕೊರಗನ್ನು ದೂರ ಮಾಡಿದ್ದಾರೆ.
ಕಬಿನಿ ಅಣೆಕಟ್ಟಿಗೆ ೫೦ ವರ್ಷ: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಸಮೀಪ ಕಪಿಲಾ ನದಿಗೆ ಅಣೆಕಟ್ಟನ್ನು ೧೯೭೪ರಲ್ಲಿ ನಿರ್ಮಿಸಲಾಗಿದ್ದು, ಡ್ಯಾಂ ಕಟ್ಟುವಾಗ ೩.೨ ಲಕ್ಷ ಎಕರೆ ಪ್ರದೇಶಗಳಿಗೆ ನೀರು ಒದಗಿಸುವಂತೆ ಅಚ್ಚುಕಟ್ಟು ನಿರ್ಮಿಸಲಾಗಿದೆ. ಈ ಅಣೆಕಟ್ಟೆಯಿಂದ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ವನ್ನು ಒದಗಿಸುವ ಜತೆಗೆ, ಬೆಂಗಳೂರು, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಮೀಸಲಿಡಲಾಗಿದೆ. ಕಬನಿ ಜಲಾಶಯದಿಂದ ಅಚ್ಚುಕಟ್ಟು ಪ್ರದೇಶಗಳಿಗೆ ೩.೪ ಲಕ್ಷ ಎಕರೆ ಪ್ರದೇಶಗಳಿಗೆ ನೀರು ಹರಿಸಬೇಕಿತ್ತಾದರೂ ಈತನಕ ೨.೧೬ ಲಕ್ಷ ಎಕರೆಗೆ ಮಾತ್ರ ನೀರು ಕೊಡಲಾಗುತ್ತಿದೆ. ೬೫ ಎಕರೆ ಪ್ರದೇಶಗಳಿಗೆ ನೀರು ಕೊಟ್ಟಿಲ್ಲದಿದ್ದರೆ, ೨೫ ಸಾವಿರ ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ಕೈಗಾರಿಕಾರಣ, ನಗರೀಕರಣ ಹಾಗೂಬೇರೆ ಬೇರೆ ಕಾರಣಗಳಿಂದ ನೀರು ಹರಿಸುತ್ತಿಲ್ಲ. ಹೀಗಾಗಿ, ಪ್ರತಿ ವರ್ಷ ನೀರು ಹರಿಸಿದರೂ ಕೊನೆಯ ಭಾಗಕ್ಕೆ ನೀರು ತಲುಪದ ಕಾರಣ ರೈತರು ಸಮಸ್ಯೆ ಎದುರಿಸುತ್ತಿರುವುದನ್ನು ಮನಗಂಡು ರಾಜ್ಯ ಸರ್ಕಾರ ಐದು ವರ್ಷಗಳ ಸಮಗ್ರ ಯೋಜನೆಯಡಿ ನೀರು ದೊರೆಯುವಂತೆ ಮಾಡಲು ಪ್ಲಾನ್ ಮಾಡಿದೆ. ಕಾವೇರಿ ನ್ಯಾಯಾಧಿಕರಣದ ತೀರ್ಪಿನಂತೆ ಕರ್ನಾಟಕಕ್ಕೆ ಲಭ್ಯವಾಗಿರುವ ನೀರನ್ನು ಬಳಸಿಕೊಳ್ಳಬೇಕಿದ್ದು, ಇದುವರೆಗೂ ನಾಲೆಗಳ ಆಧುನೀಕರಣ, ಪಿಕಪ್ ನಾಲೆಗಳ ಆಧುನೀಕರಣ ಮಾಡದೆ ಹಾಗೂ ನಾಲೆಗಳಲ್ಲಿ ಹೂಳು ತೆಗೆಸದೆ ಇರುವುದರಿಂದ ಮೊದಲ ಹಂತದಲ್ಲಿ ೧೨೧೬.೯೭ ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ಕೊಟ್ಟಿದೆ. ಸಚಿವ ಸಂಪುಟ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ದೊರೆತಿರುವ ಕಾರಣ ಶೀಘ್ರ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಕಾಮಗಾರಿ ಶುರು ಮಾಡಲು ಇಲಾಖೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ.
ಕೊಳ್ಳೇಗಾಲ, ಹನೂರು ಭಾಗಕ್ಕೆ ನೀರು: ಕೊಳ್ಳೇಗಾಲ, ಹನೂರು ಭಾಗದ ಪ್ರದೇಶಗಳಿಗೆ ನೀರು ತಲುಪಿಸಲು ರೂಪಿಸಿರುವ ಯೋಜನೆಗೆ ಒಪ್ಪಿಗೆ ದೊರೆತಿದೆ. ಕೊಳ್ಳೇಗಾಲ ತಾಲ್ಲೂಕಿನ ಗುಂಡಾಲ್ ಜಲಾಶಯ ಯೋಜನೆ, ಹನೂರು ತಾಲ್ಲೂಕಿನ ಉಡುತೊರೆಹಳ್ಳ ಯೋಜನೆ, ಗುಂಡಾಲ್ ನದಿಗೆ ಅಡ್ಡಲಾಗಿ ದುರ್ಗಿ ನದಿಗೆ ನಿರ್ಮಿಸಿರುವ ಅಣೆಕಟ್ಟೆಯಿಂದ ಎಂಟು ಕೆರೆಗಳಿಗೆ ನೀರು ಒದಗಿಸುವುದು ಸೇರಿದೆ. ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣ ವ್ಯಾಪ್ತಿಯ ಚಿಕ್ಕನಂದಿ ಏತ ನೀರಾವರಿ ಯೋಜನೆಯಿಂದ ಡಿ.ದೇವರಾಜ ಅರಸು ನಾಲೆಯ ಕೊನೆಯ ಭಾಗದ ಕೆರೆಗಳನ್ನು ತುಂಬಿಸಲು ಹೆಚ್ಚುವರಿ ನೀರನ್ನು ಹರಿವನ್ನು ಸರಿದೂಗಿಸಲು ಡಿ.ಡಿ. ಅರಸು ನಾಲೆಯ ಸರಪಳಿ ೭೪ ಕಿ.ಮೀ.ನಿಂದ ಮುಂದಕ್ಕೆ ರೀಮಾಡಲಿಂಗ್ ಮಾಡುವ ಕಾಮಗಾರಿಯು ನಡೆಯಲಿದೆ.
ಕಬಿನಿ ಅಣೆಕಟ್ಟು ದುರಸ್ತಿ ಭಾಗ್ಯ: ಕಬಿನಿ ಜಲಾಶಯ ನಿರ್ಮಾಣಗೊಂಡು ೫೦ ವರ್ಷಗಳು ಕಳೆದಿದ್ದು, ನೀರಿನ ರಭಸಕ್ಕೆ ಜಲಾಶಯದ ಕಲ್ಲಿನ ಕಟ್ಟಡದ ಗೋಡೆಗಳ ಜಾಯಿಂಟ್ಗಳು ಹಾನಿಗೊಳಗಾಗಿವೆ. ಹಲವು ಭಾಗಗಳಲ್ಲಿ ಕಲ್ಲು ಕಬ್ಬಿಣದ ಜಾಯಿಂಟ್ ಹಾಳಾಗಿರುವುದು ಮತ್ತು ಕಾಂಕ್ರೀಟ್ ಭಾಗಗಳಲ್ಲಿ ಬಿರುಕು ಬಿಟ್ಟಿರುವುದರಿಂದ ೩೨.೨೫ ಕೋಟಿ ವೆಚ್ಚದಲ್ಲಿ ದುರಸ್ತಿ ಕಾರ್ಯ ನಡೆಯಲಿದೆ.
” ಕಬಿನಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳ ಕೊನೆಯ ಭಾಗಕ್ಕೆ ನೀರು ಒದಗಿಸುವುದು ನಮ್ಮ ಕರ್ತವ್ಯ. ನಾಲೆಗಳ ಆಧುನೀಕರಣ, ಪಿಕಪ್ ನಾಳೆಗಳ ಆಧುನೀಕರಣ ಜತೆಗೆ ನಾಲೆಗಳ ಹೂಳು ತೆಗೆಸುವುದಕ್ಕೆ ಪ್ಲಾನ್ ಮಾಡಲಾಗಿದೆ. ೩ ಲಕ್ಷ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಒದಗಿಸಲು ನಿಗದಿಯಾಗಿದ್ದರೂ ನಾವು ಕೊಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಮೊದಲ ಹಂತದ ಯೋಜನೆಯಡಿ ಕಾಮಗಾರಿ ಶುರು ಮಾಡಲಾಗುತ್ತದೆ. ಇದರಿಂದಾಗಿ ಕೊನೆಯ ಭಾಗಕ್ಕೂ ನೀರು ತಲುಪಿಸಬಹುದು.”
-ಕೆ.ಮಹೇಶ್, ಅಧೀಕ್ಷಕ ಅಭಿಯಂತರ. ಕಬಿನಿ ಮತ್ತು ವರುಣ ನಾಲಾ ವೃತ್ತ.
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…
ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…
ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…