ಅಕ್ರಮ ಮದ್ಯ ಮಾರಾಟ, ಇಸ್ಪೀಟ್ ದಂಧೆಗೆ ಕಡಿವಾಣ ಹಾಕಲು ಸಾರ್ವಜನಿಕರ ಆಗ್ರಹ
ಮಹಾದೇಶ್ ಎಂ. ಗೌಡ
ಹನೂರು: ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಭಕ್ತಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಮಹದೇಶ್ವರ ಬೆಟ್ಟಕ್ಕೆ ಕ್ಷೇತ್ರಕ್ಕೆ ಇತ್ತೀಚಿನ ದಿನಗಳಲ್ಲಿ ಜಾತ್ರಾ ಮಹೋತ್ಸವ, ಹಬ್ಬ ಹರಿದಿನಗಳು, ರಜಾ ದಿನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭೇಟಿ ನೀಡುತ್ತಿದ್ದಾರೆ. ಇಂತಹ ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಕಡಿವಾಣ ಹಾಕುತ್ತಿಲ್ಲ ಎನ್ನುವುದು ಹಲವರ ಆರೋಪ.
ಮ. ಬೆಟ್ಟದಲ್ಲಿ ಮದ್ಯಪಾನ, ಮಾಂಸಾಹಾರ, ಧೂಮಪಾನ ಸೇರಿದಂತೆ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುವ ಎಲ್ಲ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ. ಆದರೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ. ಮ. ಬೆಟ್ಟದ ಪುದೂರು ಗ್ರಾಮದ ನಿವಾಸಿ ಮಣಿಕಂಠ ಅಲಿಯಾಸ್ ಮಣಿ ಎಂಬವರ ಮೇಲೆ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಮ. ಬೆಟ್ಟ ಪೊಲೀಸ್ ಠಾಣೆಯಲ್ಲಿ ೮ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇವರನ್ನು ಗಡಿಪಾರು ಮಾಡುವಂತೆ ಪೊಲೀಸ್ ಇಲಾಖೆಯವರು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಆದರೆ ರಾಜಕೀಯ ಒತ್ತಡದಿಂದ ಗಡೀಪಾರು ಮಾಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಈ ಕುರಿತು ಪೊಲೀಸರಿಗೆ ಮಾಹಿತಿ ಇದ್ದರೂ ಕರ್ತವ್ಯ ಲೋಪ ಎಸಗಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಇಬ್ಬರು ಸಿಬ್ಬಂದಿಯನ್ನು ಅಮಾನತ್ತು ಮಾಡಿದ್ದರು. ಆದರೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ.
ಮ. ಬೆಟ್ಟದ ಖಾಸಗಿ ಲಾಡ್ಜ್ನಲ್ಲಿ ಕೆಲವರು ಭಾನುವಾರ ರಾತ್ರಿ ಇಸ್ಪೀಟ್ ದಂಧೆಗೆ ಕುಮ್ಮಕ್ಕು ನೀಡಿ ಒಂದು ದಿನಕ್ಕೆ ೮ ಸಾವಿರ ರೂ. ಬಾಡಿಗೆ ಪಡೆದು ಅಕ್ರಮ ಜೂಜಾಟಕ್ಕೆ ಸಾಥ್ ನೀಡಿದ್ದಾರೆ ಎಂಬ ಆರೋಪವೂ ಇದೆ. ಈ ಸಂಬಂಧ ಜಿಲ್ಲಾ ಅಪರಾಧ ವಿಭಾಗದ ತಂಡ ಅಕ್ರಮ ಜೂಜಾಟದಲ್ಲಿ ತೊಡಗಿದ್ದ ೧೪ ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದು, ಪಣಕ್ಕಿಟ್ಟಿದ್ದ ೩. ೦೯ ಲಕ್ಷ ರೂ. , ೧೪ ಮೊಬೈಲ್ಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದೆ.
೩ ದಿನಗಳ ಹಿಂದೆ ಅಪ್ರಾಪ್ತೆಯೊಬ್ಬಳನ್ನು ಮ. ಬೆಟ್ಟದ ಲಾಡ್ಜ್ ಒಂದಕ್ಕೆ ಕರೆತಂದಿದ್ದ ಜಿಲ್ಲಾ ವ್ಯಾಪ್ತಿಯ ಗ್ರಾಮದ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲು ಮಾಡಿದ್ದಾರೆ. ಒಟ್ಟಾರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಆರೋಪದಡಿ ಒಂದು ವಾರದಲ್ಲಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನು ತೆರೆಮರೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಪತ್ತೆ ಹಚ್ಚುವುದು ಯಾವಾಗ? ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡಿದ್ದಾರೆ.
ಕೌದಳ್ಳಿ ಗ್ರಾಮದ ಕೆಲವರು ಮಹದೇಶ್ವರ ಬೆಟ್ಟಕ್ಕೆ ಬಂದು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದ್ದು, ಇವರುಗಳ ಮೇಲೆ ನಿಗಾವಹಿಸಿದರೆ ಅಕ್ರಮ ಮದ್ಯ ಸರಬರಾಜು ತಡೆಗಟ್ಟಬಹುದಾಗಿದೆ ಎನ್ನುವುದು ಕೆಲವರ ಸಲಹೆಯಾಗಿದೆ.
ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಲಾಗಿದೆ. ಈಗಾಗಲೇ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ಮೇಲೆ ಪ್ರಕರಣ ದಾಖಲಿಸುತ್ತಿದ್ದು, ಶೀಘ್ರದಲ್ಲಿಯೇ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು. -ಡಾ. ಬಿ. ಟಿ. ಕವಿತಾ, ಎಸ್ಪಿ, ಚಾ. ನಗರ
ಮ. ಬೆಟ್ಟದಲ್ಲಿ ಮದ್ಯ ಅಕ್ರಮ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಮತ್ತೆ ತಮ್ಮ ಹಳೆ ಚಾಳಿ ಮುಂದುವರಿಸಿದ್ದಾರೆ. ಕ್ಷೇತ್ರದಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ನಡೆಯುತ್ತಿರುವುದರಿಂದ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಶಾಶ್ವತವಾಗಿ ಮದ್ಯ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಬೇಕು. -ಚಂದ್ರು, ಗ್ರಾಪಂ ಸದಸ್ಯ, ಮ. ಬೆಟ್ಟ.
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…
ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.…
ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…
ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…