Andolana originals

ನಾಳೆ ಜಂಬೂಸವಾರಿಯ ವೈಭವ

ಮೈಸೂರು: ನಾಡಿನ ಸಂಸ್ಕೃತಿ, ಸಂಪ್ರದಾಯ, ಪರಂಪರೆಯ ಅಡಿಯಲ್ಲಿ ರೂಪುಗೊಂಡಿರುವ ‘ಮೈಸೂರು ದಸರೆ ’ಯ ಪ್ರಮುಖ ಆಕರ್ಷಣೆಯಾಗಿ ಶನಿವಾರ ನಡೆಯಲಿರುವ ವಿಜಯದಶಮಿ ಜಂಬೂಸವಾರಿಯ ವೈಭವ ಅನಾವರಣಕ್ಕೆ ಕ್ಷಣಗಣನೆ ಆರಂಭವಾಗಿದೆ.

ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಒಳಗೊಂಡ ನವರಾತ್ರಿಯ ಚಲನಚಿತ್ರೋತ್ಸವ, ದಸರಾ ಕುಸ್ತಿಪಂದ್ಯಾವಳಿ, ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟ, ಪುಸ್ತಕ ಮೇಳ, ಮಹಿಳಾ ದಸರಾ, ರೈತ ದಸರಾ, ಮಕ್ಕಳ ದಸರಾ, ನವರಾತ್ರಿ ಜಾನಪದ ರಂಗ ಉತ್ಸವ, ಯುವ ದಸರಾ ಸಂಭ್ರಮದಿಂದ ಸಂಪನ್ನಗೊಂಡಿದೆ. ಆಹಾರ ಮೇಳ, ಫಲ ಪುಷ್ಪ ಪ್ರದರ್ಶನಕ್ಕೆ ಶುಕ್ರವಾರ ತೆರೆ ಬೀಳಲಿದೆ.

ದಸರೆಯ ಪ್ರಮುಖ ಘಟ್ಟವಾಗಿರುವ ಜಂಬೂ ಸವಾರಿ, ಪಂಜಿನ ಕವಾಯತುಗೆ ಸಿದ್ಧತೆಗಳು ಭರದಿಂದ ನಡೆದಿವೆ. ಒಂದಿಷ್ಟು ಹಳತು, ಒಂದಿಷ್ಟು ಹೊಸತನ ತುಂಬಿಕೊಂಡಿದ್ದ ಈ ಬಾರಿಯ ನವರಾತ್ರಿ ಉತ್ಸವದ ಸೌಂದರ್ಯ, ಸಡಗರ ಒಂದು ತೂಕವಾದರೆ, ವಿಜಯದಶಮಿಯ ಜಂಬೂಸವಾರಿ ಮೆರವಣಿಗೆ ಅಂದ-ಚೆಂದ, ಬೆಡಗು-ಬಿನ್ನಾಣದ ತೂಕ ಇನ್ನೊಂದು. ವಿಜಯದಶಮಿ ಜಂಬೂಸವಾರಿ ಮೆರವಣಿಗೆಯು ಈ ಬಾರಿ ಇನ್ನಷ್ಟು ಹೊಳಪು, ರಂಗು ತುಂಬಿಕೊಳ್ಳಲಿದೆ. ವಿಜಯದಶಮಿ ವೈಭವ: ಅ. ೧೨ ರಂದು ಶನಿವಾರ ಮಧ್ಯಾಹ್ನ ೧. ೪೧ ರಿಂದ ೨. ೧೦ ಗಂಟೆಯೊಳಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಮನೆ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಅರಮನೆ ಆವರಣದಲ್ಲಿ ನಾಡದೇವತೆ ಚಾಮುಂಡೇಶ್ವರಿ ವಿಗ್ರಹ ಹೊತ್ತ ಚಿನ್ನದ ಅಂಬಾರಿಗೆ ಸಂಜೆ ೪ರಿಂದ ೪. ೩೦ರೊಳಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಯದುವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಉಪಸ್ಥಿತರಿದ್ದು ಪುಷ್ಪಾರ್ಚನೆಗೈಯ್ಯುವರು. ಪ್ರತಿ ಬಾರಿ ಅಂಬಾರಿ ಆನೆಯನ್ನು ಒಡೆಯರ್ ನಿವಾಸದ ಆವರಣದಿಂದ ಅರಮನೆ ಮುಂಭಾಗಕ್ಕೆ ಕರೆತಂದು ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ. ಆ ನಂತರ ಜಂಬೂಸವಾರಿ ಮೆರವಣಿಗೆಯು ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸಾಗುತ್ತದೆ. ಆದರೆ, ಈ ಬಾರಿ ಅಂಬಾರಿ ಕಟ್ಟಿದ ನಂತರ ಆನೆಯು ದಕ್ಷಿಣ ಭಾಗದಲ್ಲಿರುವ ಶ್ರೀ ಶ್ವೇತವರಾಹ ಸ್ವಾಮಿ ದೇವಸ್ಥಾನ ಬಳಿಯಿಂದ ಎಡಕ್ಕೆ ತಿರುಗಿ ಅರಮನೆಯ ಮುಖ್ಯ ದ್ವಾರವಾದ ಜಯಮಾರ್ತಾಂಡ ದ್ವಾರದ ಬಳಿಗೆ ಆಗಮಿಸಿ ಅಲ್ಲಿಂದ ಅರಮನೆ ಮುಂಭಾಗದ ಪುಷ್ಪಾರ್ಚನೆ ಜಾಗಕ್ಕೆ ಆಗಮಿಸಲಿದೆ. ಈ ನೂತನ ಮಾರ್ಗವು ೪೦೦ ಮೀ. ಆಗಲಿದ್ದು, ಈ ಮಾರ್ಗದಲ್ಲಿ ಆಸನಗಳನ್ನು ವ್ಯವಸ್ಥೆ ಮಾಡಿ ಜಂಬೂ ಸವಾರಿ ವೀಕ್ಷಣೆಗೆ ಅನುವು ಮಾಡಿಕೊಡಲಾಗುತ್ತದೆ.

ಆಕರ್ಷಕ ಪಂಜಿನ ಕವಾಯತು: ದಸರೆಯ ಅಂತಿಮ ಘಟ್ಟವಾದ ಆಕರ್ಷಕ ಪಂಜಿನ ಕವಾಯತು (ಟಾರ್ಚ್‌ಲೈಟ್‌ಪರೇಡ್) ಸಂಜೆ ೭ ಕ್ಕೆ ಬನ್ನಿಮಂಟಪ ಮೈದಾನದಲ್ಲಿ ನಡೆಯುವ ಮೂಲಕ ದಸರಾ ಸಂಭ್ರಮಕ್ಕೆ ತೆರೆ ಬೀಳಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪಂಜಿನ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಪಾಲ್ಗೊಳ್ಳುವರು.

೧೨೦ಕ್ಕೂ ಹೆಚ್ಚು ಕಲಾತಂಡಗಳು: ಜಂಬೂಸವಾರಿಯ ಮೆರವಣಿಗೆಯಲ್ಲಿ ೧೨೦ಕ್ಕೂ ಹೆಚ್ಚು ಕಲಾತಂಡಗಳು ಹಾಗೂ ೫೦ ಸ್ತಬ್ಧ ಚಿತ್ರಗಳು ಪಾಲ್ಗೊಂಡು ಮೆರುಗು ನೀಡಲಿವೆ. ೩೧ ಜಿಲ್ಲೆಗಳಿಂದ ಆಯಾ ಜಿಲ್ಲೆಗಳ ಪರಂಪರೆ, ಇತಿಹಾಸ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾ ತಂಡಗಳು ಹಾಗೂ ತಲಾ ಒಂದೊಂದು ಸ್ತಬ್ಧ ಚಿತ್ರದೊಂದಿಗೆ ಭಾರತೀಯ ರೈಲ್ವೆ, ಸಿಎ-ಟಿಆರ್‌ಐ ಪ್ರವಾಸೋದ್ಯಮ ಇಲಾಖೆ, ವಾರ್ತಾ ಇಲಾಖೆ, ಕಾವೇರಿ ನೀರಾವರಿ ನಿಗಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಸ್ತಬ್ಧಚಿತ್ರ ಉಪಸಮಿತಿ ಸ್ತಬ್ಧ ಚಿತ್ರಗಳು ಸೇರಿಕೊಂಡಿವೆ.

 

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

10 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

10 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

10 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

11 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

12 hours ago