Mysore
21
clear sky

Social Media

ಶುಕ್ರವಾರ, 13 ಮಾರ್ಚ್ 2026
Light
Dark

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ

ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಪ್ರತಿನಿತ್ಯ ಚಿರತೆ ಕಾಣಿಸಿಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ವಾಹನ ಸವಾರರು, ಭಕ್ತಾದಿಗಳು ಆರೋಪಿಸಿದ್ದಾರೆ.

ತಾಳಬೆಟ್ಟ-ಮಲೆ ಮಹದೇಶ್ವರ ಬೆಟ್ಟ ಮಾರ್ಗ ಮಧ್ಯದ ರಂಗಸ್ವಾಮಿ ಒಡ್ಡು, ಆನೆ ತಲೆದಿಂಬ ಹಾಗೂ ಇನ್ನಿತರ ಕಡೆಗಳಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಲೇ ಇದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ವೈರಲ್ ಆಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮೌನವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಮ.ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ವೇಳೆ ರಂಗಸ್ವಾಮಿ ಒಡ್ಡಿನ ಸಮೀಪ ಮಂಡ್ಯ ಜಿಲ್ಲೆಯ ಪ್ರವೀಣ್ ಎಂಬವರ ಮೇಲೆ ದಾಳಿ ನಡೆಸಿ ಕೊಂದುಹಾಕಿತ್ತು. ನಂತರ ಅರಣ್ಯ ಇಲಾಖೆಯವರು ಎಚ್ಚೆತ್ತು ಮೂರು ದಿನಗಳ ಕಾಲ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಪಾದಯಾತ್ರಿಕರ ಸಂಚಾರವನ್ನು ನಿರ್ಬಂಧಿಸಿ ಒಂದು ಚಿರತೆಯನ್ನು ಸೆರೆಹಿಡಿದಿದ್ದರು. ಇದಾದ ಎರಡು ದಿನಗಳ ನಂತರ ಮತ್ತೊಂದು ಚಿರತೆ ರಂಗಸ್ವಾಮಿ ಒಡ್ಡಿನ ಸಮೀಪವೇ ಕಾಣಿಸಿಕೊಂಡಿರುವುದನ್ನು ವಾಹನ ಸವಾರರು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ನಂತರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸಂಬಂಧ ಫೆ.೧೦ರಂದು ಪಾದಯಾತ್ರೆಯ ಮೂಲಕ ಬೆಟ್ಟಕ್ಕೆ ತೆರಳುತ್ತಿದ್ದ ಶ್ರೇಯಸ್ ಎಂಬ ಬಾಲಕನಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪೂರ್ಣಗೊಂಡು ಒಂದು ತಿಂಗಳು ಕಳೆಯುತ್ತಿದ್ದರೂ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಂಡಿಲ್ಲ. ಇದರಿಂದ ಪ್ರತಿನಿತ್ಯ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು ವಾಹನ ಸವಾರರು ಆತಂಕದಲ್ಲಿಯೇ ಮ.ಬೆಟ್ಟಕ್ಕೆ ತೆರಳುತ್ತಿದ್ದಾರೆ.

೩ ದಿನಗಳ ಹಿಂದೆ ರಾತ್ರಿ ವೇಳೆ ಆನೆ ತಲೆ ದಿಂಬದಲ್ಲಿ ಚಿರತೆ ಕಾಣಿಸಿಕೊಂಡರೆ, ಅದಾದ ಮರುದಿನವೇ ಬಂಡೆಕಲ್ಲಿನ ಮೇಲೆ ಚಿರತೆ ಕುಳಿತಿರುವುದನ್ನು ವಾಹನ ಸವಾರರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕೂಡಲೇ ಚಿರತೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

” ಮೂರು ತಿಂಗಳಿನಿಂದ ಮ.ಬೆಟ್ಟ ಮಾರ್ಗ ಮಧ್ಯದಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಒಬ್ಬ ಪಾದಯಾತ್ರಿಕರ ಬಲಿ ತೆಗೆದುಕೊಂಡಿದೆ. ರಸ್ತೆ ಮಧ್ಯದಲ್ಲಿಯೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೇ ಮ.ಬೆಟ್ಟ ತಲುಪಿ ಮಹದೇಶ್ವರ ದರ್ಶನ ಪಡೆಯಬೇಕಿದೆ. ಇನ್ನು ಮುಂದಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು.”

ಚಿರಂಜೀವಿ, ಮಲೆ ಮಹದೇಶ್ವರ ಬೆಟ್ಟ ನಿವಾಸಿ

” ಮ.ಬೆಟ್ಟ ರಸ್ತೆ ಮಾರ್ಗ ಮಧ್ಯದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ನಮ್ಮ ಸಿಬ್ಬಂದಿ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಡ್ರೋನ್ ಮುಖಾಂತರ ಸರ್ವೆ ಮಾಡಲು ಮನವಿ ಮಾಡಲಾಗಿತ್ತು. ಇದೀಗ ಡ್ರೋನ್ ಸಿಬ್ಬಂದಿ ಆಗಮಿಸಲಿದ್ದಾರೆ. ಸಿಸಿಎಫ್ ರವರ ಜೊತೆ ಚರ್ಚೆ ನಡೆಸಿ ಚಿರತೆ ಸೆರೆಗೆ ಸೂಕ್ತ ಕ್ರಮ ವಹಿಸಲಾಗುವುದು.”

ಭಾಸ್ಕರ್, ಡಿಸಿಎಫ್, ಮಲೆ ಮಹದೇಶ್ವರ ವನ್ಯಧಾಮ

 

 

Tags:
error: Content is protected !!