ಮಲೆ ಮಹದೇಶ್ವರ ಬೆಟ್ಟಗಳ ನಡುವಿನ ದುರ್ಗಮ ಕಾಡಿನೊಳಗೆ ಇರುವ ಮೆಂದಾರೆ ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲ. ಜೀವನ ನಡೆಸುವುದು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಬೇರೆಡೆಗೆ ಸ್ಥಳಾಂತರಿಸಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಮೆಂದಾರೆ ಪೋಡಿನ ಗಿರಿಜನರು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾ ನಾಗ್ ಅವರಲ್ಲಿ ಮನವಿ ಮಾಡಿಕೊಂಡರು.
ಡಿಸಿ, ಎಸ್ಟಿ ಪದ್ಮಿನಿ ಸಾಹು, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಚಿದಂಬರ, ಡಿವೈಎಸ್ಪಿ ಧರ್ಮೇಂದ್ರ ಹಾಗೂ ಇತರರೊಡನೆ ಮಲೆಮಹದೇಶ್ವರ ಬೆಟ್ಟದಿಂದ ಎಂಟು ಕಿ.ಮೀ, ದೂರದಲ್ಲಿರುವ ಇಂಡಿಗನತ್ತ ಗ್ರಾಮ ತಲುಪಿ ಅಲ್ಲಿಂದ 2 ಕಿ.ಮೀ.ದೂರ ನಡೆದುಕೊಂಡೇ ಮೆಂದಾರೆ ಗ್ರಾಮಕ್ಕೆ ಭೇಟಿ ನೀಡಿ ಆದಿವಾಸಿಗಳ ಅಹವಾಲು ಆಲಿಸಿದರು.
ಗ್ರಾಮದ ಗಿರಿಜನ ಮುಖಂಡ ಮಾದಯ್ಯ ಮಾತನಾಡಿ, ಮಲೆ ಮಹದೇಶ್ವರ ಬೆಟ್ಟದಿಂದ ಇಂಡಿಗನತ್ತ ಗ್ರಾಮಕ್ಕೆ ಜೀಪ್ಗಳಲ್ಲಿ ಆಗಮಿಸಿ ನಂತರ 2 ಕಿ.ಮೀ. ನಡೆದುಕೊಂಡೇ ಗ್ರಾಮಕ್ಕೆ ಹೋಗಬೇಕಿದೆ. ಇದರಿಂದ ನಮಗೆ ಸಾಕಾಗಿ ಹೋಗಿದೆ ಎಂದು ಜಿಲ್ಲಾಧಿಕಾರಿಗಳ ಮುಂದೆ ಅಹವಾಲು ತೋಡಿಕೊಂಡರು.
ಮನೆಗಳಿಗೆ ದಿನಸಿ ಪದಾರ್ಥಗಳನ್ನು ತರಬೇಕೆಂದರೂ ಬೆಟ್ಟಕ್ಕೆ ಹೋಗಲು ನಡೆದು ಹೋಗಬೇಕು. ಹಲವು ಬಾರಿ ಕಾಡಾನೆ, ಚಿರತೆಗಳು ಎದುರಾಗಿವೆ. ಯಾರಾದರೂ ಅನಾರೋಗ್ಯಕ್ಕೆ ಈಡಾದರೆ ಡೋಲಿ ಮೂಲಕ ಬೆಟ್ಟಕ್ಕೆ ಹೊತ್ತುಕೊಂಡು ಹೋಗಬೇಕಿದೆ. ವಿದ್ಯುತ್ ಸೌಲಭ್ಯವೂ ಇಲ್ಲ. ಮನೆಗಳಿಗೆ ಅಳವಡಿಸಿರುವ ಸೋಲಾರ್ ದೀಪಗಳು ಸರಿಯಾಗಿ ಉರಿಯುವುದಿಲ್ಲ. ನಮ್ಮ ಸ್ಥಿತಿ ಅತ್ಯಂತ ಶೋಚನೀಯವಾಗಿದೆ ಎಂದು ಅಲವತ್ತುಕೊಂಡರು.
ಮಂದಾರೆ ಪೋಡಿನಲ್ಲಿ ಸುಮಾರು 80 ಮನೆಗಳಿವೆ. ಒಬ್ಬರಿಗೂ ಸ್ವಂತ ಜಮೀನಿಲ್ಲ. ಎಲ್ಲರೂ ಕೂಲಿ ಮಾಡಿ, ಅರಣ್ಯದ ಕಿರು ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ ಮಾಡಿ ಬದುಕುತ್ತಿದ್ದೇವೆ. ಸುಮಾರು 60 ಕುಟುಂಬಗಳಿಗೆ ವೈಯಕ್ತಿಕ ಹಾಗೂ ಸಮುದಾಯ ಅರಣ್ಯ ಹಕ್ಕುಪತ್ರ ಸಿಕ್ಕಿದೆ. ಉಳಿದವರಿಗೆ ದೊರೆತಿಲ್ಲ. ನಮ್ಮ ಬದುಕು ಪ್ರಾಣಿಗಳಿಗಿಂತಲೂ ಕೀಳಾಗಿದೆ ಎಂದು ನೋವು ತೋಡಿಕೊಂಡರು.
ರಸ್ತೆ ಮತ್ತು ವಿದ್ಯುತ್ ಸಂಪರ್ಕವೇ ನಮಗೆ ಪ್ರಮುಖ ಸಮಸ್ಯೆಯಾಗಿದೆ. ಇಂತಹ ಕಷ್ಟದಲ್ಲಿ ಬದುಕು ನಡೆಸುವುದು ಬೇಡ ಎಂದು ತೀರ್ಮಾನಿಸಿದ್ದೇವೆ. ಆದ್ದರಿಂದ ನಮ್ಮನ್ನು ಅರಣ್ಯದಿಂದ ಹೊರಗೆ ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ಗಿರಿಜನರು ಪರಿಪರಿಯಾಗಿ ವಿನಂತಿಸಿಕೊಂಡರು.
ಸರಿಯಾದ ರಸ್ತೆಯಿಲ್ಲದ ಕಾರಣ ಗ್ರಾಮಕ್ಕೆ ಬಸ್ ಅಥವಾ ಇತರೆ ವಾಹನ ಸಂಚಾರವಿಲ್ಲ. ಆದ್ದರಿಂದ ನಮ್ಮ ಮಕ್ಕಳು ಸಹ ಹೈಸ್ಕೂಲ್, ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಅರಣ್ಯದಿಂದ ನಮ್ಮನ್ನು ಸ್ಥಳಾಂತರಿಸಿದರೆ ಸಾಕು ಎಂದು ಕೋರಿಕೊಂಡರು.
ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ: ಡಿಸಿ ಭರವಸೆ ಮಂದಾರೆ ಗಿರಿಜನರ ಮನವಿ ಆಲಿಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ಮೆಂದಾರೆಯನ್ನು ಸ್ಥಳಾಂತರ ಮಾಡಬೇಕಾದರೆ, ಅರಣ್ಯದಿಂದ ಹೊರಗೆ ಸರ್ಕಾರಿ ಭೂಮಿ ಗುರುತಿಸಬೇಕು. ಮೆಂದಾರೆಯಲ್ಲಿ ಎಷ್ಟು ಮನೆಗಳಿವೆ, ಅವರಿಗೆ ಹೊರಗಡೆ ಎಷ್ಟು ಭೂಮಿ ಅವಶ್ಯಕವಿದೆ ಎಂಬುದರ ಬಗ್ಗೆ ಸಂಪೂರ್ಣ ವರದಿ ತಯಾರಿಸಬೇಕು. ಪುನರ್ವಸತಿ ಕಲ್ಪಿಸಲು ಎಷ್ಟು ಜಾಗ, ಅನುದಾನ ಬೇಕೆಂಬ ಬಗ್ಗೆ ಸರ್ಕಾರಕ್ಕೆ ಅಂದಾಜು ಪಟ್ಟಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಗಿರಿಜನರ ಮನವಿಯಂತೆ ಆದಷ್ಟು ಬೇಗ ಅಂದಾಜುಪಟ್ಟಿ ತಯಾರಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮದ ಸಮಸ್ಯೆ ಬಗೆಹರಿಸಲು ಕ್ರಮ: ಕಳೆದ ಏಪ್ರಿಲ್ 26ರಂದು ನಡೆದ ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಇಂಡಿಗನತ್ತ ಗ್ರಾಮಸ್ಥರು ಮೆಂದಾರೆ ಗ್ರಾಮದವರ ಮೇಲೆ ಹಲ್ಲೆ ಮಾಡಿದ್ದರಿಂದ ಕೆಲವರು ಗಾಯಗೊಂಡಿದ್ದರು. ಇವರಿಗೆ ಮರುದಿನ ಚಿಕಿತ್ಸೆ ನೀಡಲಾಗಿತ್ತು. ಇದಲ್ಲದೆ ಗ್ರಾಮದಲ್ಲಿಯೇ ಎರಡು ಬಾರಿ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ‘ಆಂದೋಲನ’ ವರದಿ ಬಳಿಕ ಇದೀಗ ಮತ್ತೊಮ್ಮೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಅವರಿಗೆ ಧೈರ್ಯ ತುಂಬಿದಲ್ಲದೆ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ.
ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…
ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…
ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…
ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…
ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…