ಉಮೇಶ್ ಹಲಗೂರು
ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ
ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು
ಹಲಗೂರು: ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಹಾಗೂ ಪುರಾಣ ಪ್ರಸಿದ್ಧ ಮುತ್ತತ್ತಿಯಲ್ಲಿ ಜಿಲ್ಲಾಡಳಿತ ವಿಧಿಸಿರುವ ನಿಷೇಧವನ್ನು ಉಲ್ಲಂಘಿಸಿ ಪ್ರವಾಸಿಗರು ಕಾವೇರಿ ನದಿಗೆ ಇಳಿದು ನೀರಿನಲ್ಲಿ ಆಟವಾಡುವುದು ಮುಂದುವರಿದಿದ್ದು, ಅನಾಹುತ ಸಂಭವಿಸುವ ಮುನ್ನ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಎಚ್ಚರಿಕೆ ಫಲಕಗಳಿದ್ದರೂ ನಿರ್ಲಕ್ಷ್ಯ : ಮುತ್ತತ್ತಿಯ ಕಾವೇರಿ ನದಿಯಲ್ಲಿ ಅಪಾಯಕಾರಿ ಸುಳಿಗಳು, ಆಳವಾದ ನೀರು ಹಾಗೂ ಮೊಸಳೆಗಳ ಹಾವಳಿ ಇರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನದಿಯಲ್ಲಿ ಆಟವಾಡುವುದನ್ನು ನಿಷೇಽಸಿದೆ. ಪ್ರವಾಸಿಗರ ಸುರಕ್ಷತೆಗಾಗಿ ವಿವಿಧೆಡೆ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದ್ದು, ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ. ಆದರೂ ಕೆಲ ಪ್ರವಾಸಿಗರು ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ನದಿಗೆ ಇಳಿದು ಆಟವಾಡುವುದು ಕಂಡುಬರುತ್ತಿದೆ.
ಮುತ್ತತ್ತಿಗೆ ಪ್ರತಿನಿತ್ಯ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಆಗಮಿಸುತ್ತಾರೆ. ಅದರಲ್ಲೂ ಶ್ರಾವಣ ಮಾಸದ ಶನಿವಾರ ಹಾಗೂ ಜಾತ್ರೆಯ ಸಂದರ್ಭದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುತ್ತದೆ. ಕೆಲವರು ಮದ್ಯಪಾನ ಮಾಡಿ ನದಿಗೆ ಇಳಿಯುತ್ತಿರುವುದು ಮತ್ತಷ್ಟು ಅಪಾಯಕ್ಕೆ ಕಾರಣವಾಗುತ್ತಿದೆ. ನೀರಿನ ಸೆಳೆತ, ಆಳ ಹಾಗೂ ಸುಳಿಗಳಿಗೆ ಸಿಲುಕಿ ಜೀವ ಕಳೆದುಕೊಂಡಿರುವ ಘಟನೆಗಳು ನಡೆದಿರುವುದರಿಂದ ಮುನ್ನೆಚ್ಚರಿಕೆ ಅಗತ್ಯವಾಗಿದೆ.
ಇತ್ತೀಚೆಗೆ ಒಂದೇ ಕುಟುಂಬದ ನಾಲ್ವರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹಾಗೂ ಸ್ಥಳೀಯ ಶಾಸಕ, ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರು ಸ್ಥಳಕ್ಕೆ ಭೇಟಿ ನೀಡಿ, ಸುರಕ್ಷತಾ ಕ್ರಮಗಳ ಜತೆಗೆ ಸ್ನಾನಘಟ್ಟ ನಿರ್ಮಿಸುವ ಭರವಸೆ ನೀಡಿದ್ದರು. ಅಽಕಾರಿಗಳಿಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಆದರೂ ನಿಷೇಧಿತ ಪ್ರದೇಶಗಳಲ್ಲಿ ಪ್ರವಾಸಿಗರು ನದಿಗೆ ಇಳಿಯುತ್ತಿರುವುದು ಅಧಿಕಾರಿಗಳ ನಿಗಾ ವ್ಯವಸ್ಥೆ ಬಗ್ಗೆ ಪ್ರಶ್ನೆ ಮೂಡಿಸಿದೆ. ವಿಶೇಷವಾಗಿ ವಾರಾಂತ್ಯ ಹಾಗೂ ಜಾತ್ರೆಯ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ, ನದಿಗೆ ಇಳಿಯುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ದೇವಸ್ಥಾನದಿಂದಲೂ ಜಾಗೃತಿ ಅಗತ್ಯ: ಮುತ್ತತ್ತಿಯ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ದೇವಸ್ಥಾನದ ಧ್ವನಿವರ್ಧಕಗಳ ಮೂಲಕ ಕಾವೇರಿ ನದಿಗೆ ಇಳಿಯದಂತೆ ಹಾಗೂ ಮದ್ಯಪಾನದಿಂದ ದೂರವಿರುವಂತೆ ಆಗಿಂದಾಗ್ಗೆ ಸೂಚನೆಗಳನ್ನು ನೀಡಬೇಕು. ಇಲ್ಲಿನ ದೇವಸ್ಥಾನ ಆಡಳಿತ ಮಂಡಳಿಯೂ ಪ್ರವಾಸಿಗರ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇದೇ ವೇಳೆ ದೇವಸ್ಥಾನದಲ್ಲಿ ವಿಶೇಷ ದರ್ಶನಕ್ಕೆ ೧೦೦ ರೂ. ಶುಲ್ಕ ಹಾಗೂ ಕಾಯಿ ಒಡೆದು ಪೂಜೆ ಸಲ್ಲಿಸುವುದೂ ಸೇರಿದಂತೆ ವಿವಿಧ ಸೇವೆಗಳಿಗೆ ಹಣ ವಸೂಲಿ ಮಾಡಲಾಗುತ್ತಿರುವ ಕುರಿತು ಕೆಲ ಭಕ್ತರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ವಿವಿಧ ಸೇವೆಗಳ ಶುಲ್ಕದ ಬಗ್ಗೆ ಸ್ಪಷ್ಟ ಮಾಹಿತಿ ಹಾಗೂ ಪಾರದರ್ಶಕತೆ ಕಾಪಾಡಬೇಕು ಎಂಬುದು ಭಕ್ತರ ಒತ್ತಾಯವಾಗಿದೆ.
ಮುತ್ತತ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್, ಅರಣ್ಯ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸಮನ್ವಯದಿಂದ ಸುರಕ್ಷತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿ, ನಿಷೇಧ ಉಲ್ಲಂಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಜೀವಹಾನಿ ಸಂಭವಿಸಿದ ನಂತರ ಕ್ರಮ ಕೈಗೊಳ್ಳುವ ಬದಲು ಮುನ್ನೆಚ್ಚರಿಕೆಯೇ ಮುಖ್ಯ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಕರೆ ಸ್ವೀಕರಿಸದ ತಹಸಿಲ್ದಾರ್: ಮುತ್ತತ್ತಿಯ ಕಾವೇರಿ ನದಿಗೆ ಪ್ರವಾಸಿಗರು ಇಳಿಯದಂತೆ ಮತ್ತು ಈಜಲು ತೆರಳದಂತೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆಯಲು ತಾಲ್ಲೂಕು ದಂಡಾಽಕಾರಿಗಳಾದ ಲೋಕೇಶ್ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು‘ಆಂದೋಲನ’ ದಿನಪತ್ರಿಕೆ ವರದಿಗಾರರು ಎರಡು ದಿನಗಳು ಪ್ರಯತ್ನಿಸಿದರೂ ಅವರು ಕರೆಯನ್ನು ಸ್ವೀಕರಿಸಲಿಲ್ಲ.
” ಪ್ರಮುಖ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರವಾಗಿರುವ ಮುತ್ತತ್ತಿಯಲ್ಲಿ ಮದ್ಯಪಾನ ಹಾಗೂ ಕಾವೇರಿ ನದಿಗೆ ಇಳಿಯುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಪ್ರವಾಸಿಗರು ಜಿಲ್ಲಾಡಳಿತದ ಆದೇಶಗಳನ್ನು ಉಲ್ಲಂಸದೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ದೇವಸ್ಥಾನದಲ್ಲಿ ದೇವರ ದರ್ಶನ ಹಾಗೂ ಪೂಜೆಗೆ ತಂದಿರುವ ತೆಂಗಿನಕಾಯಿ ಒಡೆಯಲು ಹಣ ಪಡೆಯುತ್ತಿರುವುದು ಸರಿಯಲ್ಲ. ದೇವಸ್ಥಾನದ ಆವರಣದಲ್ಲಿಯೂ ವಿವಿಧ ರೀತಿಯಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದು ಅನ್ಯಾಯವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳಬೇಕು.”
ನಂಜುಂಡಸ್ವಾಮಿ, ಬಿಎಸ್ಪಿ ತಾಲ್ಲೂಕು ಅಧ್ಯಕ್ಷ
” ಮುತ್ತತ್ತಿಯಲ್ಲಿ ಕಾವೇರಿ ನದಿಗೆ ಇಳಿಯದಂತೆ ಸುರಕ್ಷತಾ ಫಲಕಗಳನ್ನು ಅಳವಡಿಸಿದ್ದರೂ ಪ್ರವಾಸಿಗರು ನದಿಗೆ ಇಳಿದು ಆಟವಾಡುತ್ತಾರೆ. ಪ್ರವಾಸಿಗರ ನಿಯಂತ್ರಣಕ್ಕೆ ಹೋಂಗಾರ್ಡ್ಗಳನ್ನು ನಿಯೋಜಿಸಿದ್ದರೂ ನಿಯಮ ಉಲ್ಲಂಘನೆಯಾಗುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ದೇವಸ್ಥಾನದಲ್ಲಿ ದೇವರ ದರ್ಶನ ಹಾಗೂ ಪೂಜೆಗೆ ಹಣ ವಸೂಲಿ ಮಾಡುತ್ತಿರುವುದನ್ನು ತಡೆಯಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು.”
ಕೆ.ಎನ್.ಗಿರೀಶ್ ಕುಮಾರ್, ಪ್ರವಾಸಿಗ




