Andolana originals

ದಕ್ಷಿಣ ಶಿಕ್ಷಕರ ಕ್ಷೇತ್ರ: ಗೆಲುವಿಗೆ ‘ಮೈತ್ರಿ’ ಒಗ್ಗಟ್ಟಿನ ಮಂತ್ರ

ಮೈಸೂರು: ಮೇಲ್ಮನೆಯಲ್ಲಿ ಬಹುಮತ ಉಳಿಸಿಕೊಳ್ಳಲು ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಜಂಟಿ ಸಮರಕ್ಕಿಳಿದಿರುವ ಜಾದಳ-ಬಿಜೆಪಿ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದು, ನಾಲ್ಕು ಜಿಲ್ಲೆಗಳ ಹಾಲಿ-ಮಾಜಿ ಶಾಸಕರಿಗೆ ಚುನಾವಣಾ ಜವಾಬ್ದಾರಿ ಹೊರಿಸಿವೆ. ಶಿಕ್ಷಕರ ವಲಯದಲ್ಲಿ ತಮ್ಮದೇ ಆದ ಹಿಡಿತ, ವೈಯಕ್ತಿಕ ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಬಲ ಇರುವುದರಿಂದ ಈ ಚುನಾವಣೆಯಲ್ಲಿ ಮೈತ್ರಿಕೂಟದ ನಾಯಕರು ಗೆಲುವಿಗಾಗಿ ಸಾಕಷ್ಟು ಬೆವರಿಳಿಸುವಂತಾಗಿದೆ.

ಹೀಗಾಗಿಯೇ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಉಭಯ ಪಕ್ಷಗಳ ನಾಯಕರೂ ಜಂಟಿಯಾಗಿ ಪ್ರಚಾರ ಮಾಡಿ ಗೆಲುವಿಗಾಗಿ ಸದ್ದಿಲ್ಲದೆ ನಾನಾ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದ ಮುನ್ನಾ ದಿನವಾದ ಜೂ.3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷಗಳಾದ ಜಾ.ದಳ-ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿರುವುದರಿಂದ ದಿನದಿಂದ ದಿನಕ್ಕೆ ಪ್ರಚಾರದ ಕಾವೇರುತ್ತಿದೆ. ಮತದಾರರ ಮನವೊಲಿಕೆಗೂ ಕಸರತ್ತು ನಡೆಯುತ್ತಿದೆ.

ಒಗ್ಗಟ್ಟಿನ ಜಂಟಿ ಹೋರಾಟ: ಕಾಂಗ್ರೆಸ್ ವಿರುದ್ಧ ಗೆಲುವು ಸಾಧಿಸಲು ಜಾ.ದಳ ಬಿಜೆಪಿ ನಾಯಕರು ಜಂಟಿಸಮರಕ್ಕಿಳಿದಿದ್ದಾರೆ. ವಿಶೇಷವಾಗಿ ಮೈಸೂರು, ಮಂಡ್ಯ ಜಿಲ್ಲೆಗಳ ಮತದಾರರನ್ನು ಗಣನೀಯವಾಗಿ ಸೆಳೆಯಲು ಬೇಕಾದ ರಣತಂತ್ರ ರಚಿಸಿದ್ದಾರೆ. ಜಾ.ದಳದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ಸಾ.ರಾ.ಮಹೇಶ್, ಬಿಜೆಪಿಯ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಸಚಿವರ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ. ಬಿಜೆಪಿ ಮತ್ತು ಜಾ.ದಳದ ಹಾಲಿ-ಮಾಜಿ ಶಾಸಕರು ಇರುವ ಕ್ಷೇತ್ರಗಳಲ್ಲಿ ಮತದಾರರನ್ನು ಭೇಟಿ ಮಾಡಲು ತಂಡಗಳನ್ನು ರಚನೆ ಮಾಡಿರುವುದಲ್ಲದೆ, ಮತಗಟ್ಟೆಗೆ ಕರೆತಂದು ಮತ ಚಲಾಯಿಸುವಂತಹ ಹೊಣೆಯನ್ನೂ ನೀಡಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಕೆ.ಆರ್.ಕ್ಷೇತ್ರ ಮತ್ತು ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮತದಾರರು ಜಾಸ್ತಿ ಇರುವುದರಿಂದ ಕಾರ್ಯತಂತ್ರ ಹೆಣೆದು ಮತದಾರರನ್ನು ನೇರವಾಗಿ ತಲುಪುವುದಕ್ಕೆ ತಯಾರಿ ಮಾಡಲಾಗಿದೆ. ವಿಶೇಷವಾಗಿ ಜಾ.ದಳಕ್ಕಿಂತಲೂ ಬಿಜೆಪಿಯ ಮುಖಂಡರು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೂಚನೆ ಮೇರೆಗೆ ಬಹಳ ಉತ್ಸಾಹದಿಂದ ಓಡಾಡುತ್ತಿದ್ದರೆ, ಟಿಕೆಟ್ ಆಕಾಂಕ್ಷಿಯಾಗಿದ್ದ ಬಿ.ನಿರಂಜನಮೂರ್ತಿ ಸಾಥ್ ನೀಡುತ್ತಿದ್ದಾರೆ. ವೀರಶೈವ, ಬ್ರಾಹ್ಮಣ, ಒಕ್ಕಲಿಗ ಸಮುದಾಯಗಳ ಮತದಾರರನ್ನು ಜಾ.ದಳಕ್ಕೆ ಸೆಳೆಯುವ ಕೆಲಸ ಮಾಡುತ್ತಿದ್ದರೆ, ಮತ್ತೊಂದೆಡೆ ಮಂಡ್ಯ, ಹಾಸನ ಜಿಲ್ಲೆಗಳಲ್ಲೂ ಒಕ್ಕಲಿಗ ಮತದಾರರ ಮತಗಳು ಚದುರದಂತೆ ತಡೆಯಲು ಪ್ಲಾನ್ ಮಾಡಲಾಗುತ್ತಿದೆ.

ಮರಿತಿಬ್ಬೇಗೌಡರಿಗೆ ಸಿಎಂ, ಡಿಸಿಎಂ ಬಲ: ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಪ್ರಾಬಲ್ಯ ಉಳಿಸಿಕೊಂಡಿರುವ ಮರಿತಿಬ್ಬೇಗೌಡರಿಗೆ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್. ಸಿ.ಮಹದೇವಪ್ಪ ಸೇರಿದಂತೆ ಇತರೆ ಸಚಿವರ ಬಲವಿದೆ. 2000ರಲ್ಲಿ ಕಾಂಗ್ರೆಸ್, 2006ರಲ್ಲಿ ಪಕ್ಷೇತರ, 2012 ಮತ್ತು 2018ರಲ್ಲಿ ಜಾ.ದಳದಿಂದ ಸ್ಪರ್ಧಿಸಿ ಗೆಲುವು ಕಂಡಿರುವ ಮರಿತಿಬ್ಬೇಗೌಡರು ನಾಲ್ಕೂ ಜಿಲ್ಲೆಗಳ ನಾಡಿಮಿಡಿತವನ್ನು ಹೊಂದಿರುವುದಲ್ಲದೆ, ಶಿಕ್ಷಕರ ಜತೆಗೆ ನಿರಂತರ ಸಂಪರ್ಕ ಹೊಂದಿರುವುದರಿಂದ ಮಣಿಸುವುದು ಸುಲಭವಲ್ಲ ಎನ್ನುವುದು ಜಾ.ದಳ ನಾಯಕರನ್ನು ಕಾಡುತ್ತಿದೆ. ಒಕ್ಕಲಿಗ ಮತದಾರರ ಜತೆಗೆ ದಲಿತರು, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮತದಾರರ ಕ್ರೋಢೀಕರಣಕ್ಕೆ ಕಾಂಗ್ರೆಸ್ ನಾಯಕರು ಕೈ ಹಾಕಿದ್ದರೆ, ಮತ್ತೊಂದೆಡೆ ರಾಜ್ಯದಲ್ಲಿ ಇನ್ನೂ ನಾಲ್ಕು ವರ್ಷಗಳವರೆಗೆ ಸರ್ಕಾರ ಇರುವುದರಿಂದ ಇತರೆ ಬೇಡಿಕೆಗಳನ್ನು ಈಡೇರಿಸುವುದಕ್ಕೆ ಒತ್ತಡಹೇರಬಹುದೆಂಬ ಕಾರಣಕ್ಕಾಗಿ ಮರಿತಿಬ್ಬೇಗೌಡರನ್ನು ಗೆಲ್ಲಿಸಲು ಒಂದು ಟೀಮ್ ಆಂತರಿಕವಾಗಿ ಪ್ರಚಾರ ಮಾಡುತ್ತಿರುವುದನ್ನು ಗಮನಿಸಬಹುದಾಗಿದೆ.

ಮುಖ್ಯಮಂತ್ರಿಗೆ ಪ್ರತಿಷ್ಠೆಯ ಚುನಾವಣೆ!

ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯು ಲೋಕಸಭಾ ಚುನಾವಣೆಯಷ್ಟೇ ಪ್ರಮುಖವಾಗಿದ್ದು, ಅದಕ್ಕಾಗಿ ಅನೇಕ ಮುಖಂಡರ ಜತೆ ಸಮಾಲೋಚನೆ ನಡೆಸಿ ಕೆಲಸ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಅಭ್ಯರ್ಥಿ ಮರಿತಿಬ್ಬೇಗೌಡರ ಪರ ಪ್ರಚಾರ ಮಾಡುವುದರ ಜತೆಗೆ ಶಾಸಕರು ತಮ್ಮ ತಮ್ಮ ವ್ಯಾಪ್ತಿಯ ಮತದಾರರನ್ನು ಒಂದೆಡೆ ಸೇರಿಸಿ ಕಾಂಗ್ರೆಸ್ ಬೆಂಬಲಿಸುವಂತೆ ನೋಡಿಕೊಳ್ಳುವಂತೆ ಹೇಳಿದ್ದಾರೆ. ಹಲವು ವರ್ಷಗಳಿಂದ ಕಾಂಗ್ರೆಸ್ ಸೋಲು ಕಾಣುತ್ತಾ ಬಂದಿರುವ ಕಾರಣ ಈ ಬಾರಿ ಗೆದ್ದು ಎದುರಾಳಿಗಳಿಗೆ ಮುಖಭಂಗವನ್ನುಂಟು ಮಾಡಬೇಕು ಎನ್ನುವ ಖಡಕ್ ಸಂದೇಶ ರವಾನಿಸಿದ್ದಾರೆ. ಇದರಿಂದ ಎಚ್ಚೆತ್ತಿರುವ ಸ್ಥಳೀಯರು ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಪರ ಮತ ಹಾಕುವಂತೆ ಮನವೊಲಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.

ಕೆ.ಬಿ. ರಮೇಶ ನಾಯಕ

ಪ್ರಸ್ತುತ ಆಂದೋಲನ ದಿನಪತ್ರಿಕೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿರುವ ನಾನು ಮೂಲತಃ ಚಾಮರಾಜನಗರ ತಾಲ್ಲೂಕು ಮತ್ತು ಜಿಲ್ಲೆಯ ಕಣ್ಣೇಗಾಲ ಗ್ರಾಮದವನು. ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಪ್ರಾಥಮಿಕ,ಪ್ರೌಢಶಿಕ್ಷಣ, ಚಾಮರಾಜನಗರದಲ್ಲಿ ಪಿಯುಸಿ ವ್ಯಾಸಂಗ ಮಾಡಿದ ನಾನು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದೇನೆ. 1992ರಿಂದ 2002ರವರೆಗೆ ಮೈಸೂರು ಮಿತ್ರ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಸೇವೆ ಸಲ್ಲಿಸಿದ ಬಳಿಕ 2002ರಿಂದ 2012ರವರೆಗೆ ಸಂಯುಕ್ತ ಕರ್ನಾಟಕ ಮೈಸೂರು ಪ್ರಾದೇಶಿಕ ಕಚೇರಿಯಲ್ಲಿ ವರದಿಗಾರನಾಗಿ, 2013ರಿಂದ 2015ರವರೆಗೆ ಹಾಸನ ಮತ್ತು ಮೈಸೂರಿನಲ್ಲಿ ವಿಜಯ ಕರ್ನಾಟಕ ಹಿರಿಯ ವರದಿಗಾರನಾಗಿ, 2015ರಿಂದ 2017ರವರೆಗೆ ಸಂಯುಕ್ತ ಕರ್ನಾಟಕ ಮುಖ್ಯ ವರದಿಗಾರನಾಗಿ, 2017ರಿಂದ 2020 ಜೂನ್‌ವರಗೆ ವಿಶ್ವವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸಿದ್ದೇನೆ.

Recent Posts

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

6 mins ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

2 hours ago

ಚಿಕ್ಕಮಗಳೂರು| ತೋಟದಲ್ಲಿ ಕಾರ್ಮಿಕನನ್ನು ಕೊಂದು ಹಾಕಿದ ಕಾಡಾನೆ

ಚಿಕ್ಕಮಗಳೂರು: ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಚಿಕ್ಕಮಗಳೂರು ತಾಲ್ಲೂಕಿನ…

2 hours ago

ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್‌ಗೆ…

3 hours ago

ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್‌

ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಕೇಂದ್ರ ಸರ್ಕಾರದ ವಿರುದ್ಧ…

3 hours ago