Andolana originals

ಡಿಸಿಗೆ ಮುಡಾ ಹೊಣೆ

ಅಧ್ಯಕ್ಷರಾಗಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರ ಸ್ವೀಕಾರ

ಮೈಸೂರು: ನಿವೇಶನಗಳ ಹಂಚಿಕೆ ಅಕ್ರಮ ಹಗರಣದಲ್ಲಿ ದೊಡ್ಡ ಸದ್ದು ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಸರಿದಾರಿಗೆ ತರಲು ಖಡಕ್ ಐಎಎಸ್ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಲಾಗುತ್ತದೆ ಎನ್ನುವ ನಿರ್ಧಾರದಿಂದ ರಾಜ್ಯ ಸರ್ಕಾರ ಹಿಂದೆ ಸರಿದಿದ್ದು, ಜಿಲ್ಲಾಧಿಕಾರಿಯನ್ನು ಅಧ್ಯಕ್ಷರಾಗಿ
ನೇಮಕ ಮಾಡಿದೆ.

ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ.ಮರೀಗೌಡ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳನ್ನೇ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರ ಅನ್ವಯ ಡಿಸಿ ಜಿ ಲಕ್ಷ್ಮೀಕಾಂತ್ ರೆಡ್ಡಿ ಮುಡಾ ಅಧ್ಯಕ್ಷರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿ ದಂತೆ ಇಡಿ, ಲೋಕಾಯುಕ್ತ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಡಿಸಿ ಹೆಗಲಿಗೆ ದೊಡ್ಡ ಜವಾಬ್ದಾರಿ ವಹಿಸಿದಂತಾಗಿದೆ.

ಮೈಸೂರು ಹೊರವಲಯದ ಕೆಸರೆ ಬಡಾವಣೆಯಲ್ಲಿ ಸಿಎಂ ಪತ್ನಿ ಪಾರ್ವತಿ ಅವರಿಗೆ ಬದಲಿ ನಿವೇಶನ ಕೊಡುವ ಬದಲಿಗೆ ವಿಜಯನಗರ ಬಡಾವಣೆಯಲ್ಲಿ 14 ನಿವೇಶನಗಳನ್ನು ಮಂಜೂರು ಮಾಡಿರುವ ವಿಚಾರ ದೊಡ್ಡ ಸದ್ದು ಮಾಡುತ್ತಿದ್ದಂತೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪ ಶುರುವಾಗಿತ್ತು.

ಹಗರಣದ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್‌ಗೆ ಉಚ್ಚನ್ಯಾಯಾಲಯ ಒಪ್ಪಿದ್ದರಿಂದ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾದರೆ, ಸ್ನೇಹಮಯಿ ಕೃಷ್ಣ ಅವರ ದೂರಿನ ಮೇಲೆ ಇಡಿಯಿಂದ ತನಿಖೆ ಶುರುವಾಗಿದೆ. ಈ ಎಲ್ಲ ಬೆಳವಣಿಗೆಗಳಿಗೂ ಕೆ. ಮರೀಗೌಡ ಅವರೇ ಕಾರಣವೆಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಇದಾದ ಕೆಲ ದಿನಗಳ ನಂತರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮುಡಾದಲ್ಲಿ ಹಲವಾರು ವರ್ಷಗಳಿಂದ ನಡೆದಿರುವ ಅಕ್ರಮಗಳನ್ನು ಹೊರತೆಗೆದು ಕಾನೂನುಬಾಹಿರವಾಗಿ ಬದಲಿ ನಿವೇಶನ, ಭೂ ಪರಿಹಾರ ಪಡೆದವರಿಗೆ ಬಿಸಿಮುಟ್ಟಿಸಲು ಖಡಕ್ ಐಎಎಸ್ ಅಧಿಕಾರಿಯನ್ನೇ ಆಡಳಿತಾಧಿಕಾರಿಯನ್ನಾಗಿ ನೇಮಿಸಲಾಗುತ್ತದೆ ಎನ್ನುವ ಮಾತು ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮೂವರು ಅಧಿಕಾರಿಗಳ ಹೆಸರನ್ನು ಪಡೆಯಲಾಗಿತ್ತು. ಆದರೆ, ದಿಢೀರನೆ ಆಡಳಿತಾಧಿಕಾರಿ ನೇಮಕದ ಚಿಂತನೆಯನ್ನು ಕೈ ಬಿಟ್ಟು ಜಿಲ್ಲಾಧಿಕಾರಿಗಳನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಅಧಿಕಾರ ಸ್ವೀಕಾರ: ಸರ್ಕಾರದ ಆದೇಶದಂತೆ ಮಂಗಳವಾರ ಮುಡಾ ಅಧ್ಯಕ್ಷರಾಗಿ ಜಿಲಕ್ಷ್ಮೀಕಾಂತ್ ರೆಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಧಿಕಾರದ ಕೆಲಸಕಾರ್ಯಗಳಿಗೆ ಸಂಬಂಧಪಟ್ಟಂತೆ ಹಾಗೂ ವೈಯಕ್ತಿಕವಾಗಿ ನನ್ನ ಗಮನಕ್ಕೆ ತರಬೇಕಾದಂತಹ ಅರೆಸರ್ಕಾರಿ ಪತ್ರಗಳು, ಗೌಪ್ಯಪತ್ರಗಳು ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬಹುದೆಂದು ಹೇಳಿದ್ದಾರೆ.

ಲೋಕಾಯುಕ್ತ ವಿಚಾರಣೆ ಚುರುಕು: ಮುಡಾ ನಿವೇಶನಗಳ ಹಗರಣ ಕುರಿತು ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ಮುಡಾ ಆಯುಕ್ತರು, ಕಾರ್ಯದರ್ಶಿ ಮತ್ತಿತರ ಅಧಿಕಾರಿಗಳನ್ನು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದರೆ, ಮತ್ತೊಂದು ಕಡೆ ಲೋಕಾಯುಕ್ತ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಜಿ. ಕುಮಾರನಾಯ್ಕ ಅವರನ್ನು ವಿಚಾರಣೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಅ.24ರಂದು ಮತ್ತೊಬ್ಬ ಐಎಎಸ್ ಎಸ್.ಪಾಲಯ್ಯ ಅವರನ್ನು ವಿಚಾರಣೆಗೆ ಕರೆದಿದ್ದಾರೆ.

ಮುಡಾ ಆಡಳಿತ ಮಂಡಳಿ ರದ್ದಾಗುವುದು ಅನುಮಾನ: ಮುಡಾ ಆಡಳಿತ ಮಂಡಳಿಯನ್ನು ರದ್ದುಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುವುದು ಅನುಮಾನವಾಗಿದೆ. ಆಡಳಿತಾಧಿಕಾರಿ ನೇಮಕ ಮಾಡಿದ್ದರೆ ಈ ಪ್ರಕ್ರಿಯೆಗೆ ಚಾಲನೆ ನೀಡುವ ಸಾಧ್ಯತೆ ಇತ್ತು. ಆದರೆ, ಈಗ ಅಧ್ಯಕ್ಷರನ್ನು ನೇಮಕ ಮಾಡಿರುವ ಸರ್ಕಾರ ಒಂದಿಷ್ಟು ದಿನಗಳ ಕಾಲ ಕಾದು ನೋಡುವ ಮೊರೆ ಹೋಗಿದೆ ಎಂದು ಮೂಲಗಳು ಹೇಳಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

4 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

4 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

4 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

4 hours ago