Andolana originals

ಮೈಸೂರು ಬಂದ್‌ ಯಶಸ್ವಿ

  • ಬೆಳಿಗ್ಗೆಯಿಂದ ಸಂಜೆಯವರೆಗೆ ವಾಣಿಜ್ಯ ವಹಿವಾಟು ಬಂದ್
  • ಕಾರ್ಯಕರ್ತರ ಆಕ್ರೋಶಕ್ಕೆ ಬೆಚ್ಚಿ ಸಂಚಾರ ನಿಲ್ಲಿಸಿದ ನಗರ ಸಾರಿಗೆ
  • ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿ ರಸ್ತೆ ಬಂದ್

ಮೈಸೂರು: ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕುರಿತಾಗಿ ಅವಹೇಳನಕಾರಿ ಮಾತುಗಳನ್ನಾಡಿದ ಕೇಂದ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ, ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಸ್ವಯಂಪ್ರೇರಿತ ಮೈಸೂರು ಬಂದ್ ಯಶಸ್ವಿಯಾಯಿತು.

ಸದಾ ಪ್ರವಾಸಿಗರು, ಸಾರ್ವಜನಿಕರಿಂದ ತುಂಬಿರುತ್ತಿದ್ದ ವಾಣಿಜ್ಯ ರಸ್ತೆಗಳಲ್ಲಿರುವ ಮಳಿಗೆಗಳು ತಮ್ಮ ವಹಿವಾಟುಗಳನ್ನು ಬಂದ್ ಮಾಡಿದ್ದರೆ, ಕಾರ್ಯಕರ್ತರ ಆಕ್ರೋಶಕ್ಕೆ ಬೆಚ್ಚಿದ ನಗರ ಸಾರಿಗೆ ಬಸ್‌ಗಳು ಸಂಚಾರವನ್ನು ಸ್ಥಗಿತ ಗೊಳಿಸಿದ್ದರಿಂದ ಪ್ರಯಾಣಿಕರು ಪರದಾಡಿದರು. ಅಲ್ಲಲ್ಲಿ ತೆರೆದಿದ್ದ ಅಂಗಡಿಗಳ ಬಾಗಿಲನ್ನು ಬಲವಂತವಾಗಿ ಮುಚ್ಚಿಸಿದ್ದು, ಮಾತಿನ ಚಕಮಕಿ ನಡೆದಿದ್ದು ಬಿಟ್ಟರೆ ಉಳಿ ದಂತೆ ಬಂದ್ ಶಾಂತಿಯುತವಾಗಿ ನಡೆಯಿತು.

ಮೈಸೂರು ನಗರವನ್ನು ಸಂಪರ್ಕಿಸುವ ನಾಲ್ಕೂ ದಿಕ್ಕು ಗಳಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಹೋರಾಟಗಾರರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು. ರಸ್ತೆ ತಡೆ ನಡೆಸಿ ವಾಹನಗಳನ್ನು ತಡೆದರು. ಕೆಲವೆಡೆ ವರ್ತಕರು ಸ್ವಯಂ ಪ್ರೇರಣೆಯಿಂದ ವ್ಯಾಪಾರ ವಹಿವಾಟನ್ನು ಸ್ಥಗಿತ ಗೊಳಿಸಿದ್ದರು. ಹೋಟೆಲ್‌ಗಳು ಭಾಗಶಃ ಮುಚ್ಚಿದ್ದವು.

ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳಲ್ಲಿ ಬಾಗಿಲು ಹಾಕಿ ಕಾರ್ಯ ನಿರ್ವಹಿಸಿದರೆ, ನ್ಯಾಯಾಲಯದಲ್ಲಿ ಕಲಾಪ ದಿಂದ ದೂರ ಉಳಿದ ವಕೀಲರು ಗಾಂಧಿ ಪುತ್ತಳಿ ಬಳಿ ಪ್ರತಿಭಟಿಸಿದರು. ಗಾಂಧಿನಗರದ ಉರಿಲಿಂಗ ಪೆದ್ದೀಶ್ವರ ಮಠದ ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ಹೊರಟ ನೂರಾರು ಹೋರಾಟಗಾರರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಸಂಜೆಯವರೆಗೂ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಿಲ್ಲ. ನಗರ ಸಾರಿಗೆ ಬಸ್ ನಿಲ್ದಾಣದಲ್ಲಿಯೂ ಕೆಲವೇ ಬಸ್‌ಗಳಷ್ಟೆ ಇದ್ದವು. ಬಸ್ ಸಂಚಾರವಿಲ್ಲದೆ ನಗರದ ರಸ್ತೆಗಳು ನಿರ್ಜನವಾಗಿದ್ದವು. ದ್ವಿಚಕ್ರ ವಾಹನ ಮತ್ತು ಕಾರುಗಳ ಸಂಚಾರಕ್ಕೆ ಅಡಚಣೆ ಇರಲಿಲ್ಲ.

ಸಂಜೆ ೫ ಗಂಟೆಯ ನಂತರ ಬಸ್ ಸಂಚಾರ ಆರಂಭ ಗೊಂಡಿತು. ಬಂದ್ ಬಗ್ಗೆ ತಿಳಿಯದೆ ವಿವಿಧೆಡೆ ತೆರಳಲು ಆಗಮಿಸಿದ್ದ ಸಾರ್ವಜನಿಕರು ಬಸ್‌ಗಳಿಲ್ಲದೆ ತೊಂದರೆ ಅನುಭವಿಸಿದರು. ಕೆಲವರು ಆಟೋಗಳಲ್ಲಿ ದುಬಾರಿ ದರ ತೆತ್ತು ಪ್ರಯಾಣಿಸಿದ್ದು ಕಂಡು ಬಂದಿತು.

ನಗರದ ಹೃದಯ ಭಾಗದಲ್ಲಿ ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತವಾಗಿತ್ತು. ಬೈಕ್‌ಗಳಲ್ಲಿ ಮೆರವಣಿಗೆ ನಡೆಸುತ್ತಿದ್ದ ಹೋರಾಟಗಾರರು ತೆರೆದಿದ್ದ ಅಂಗಡಿಗಳನ್ನು ಬಂದ್ ಮಾಡಿಸಿದರು. ಸದಾ ಜನನಿಬಿಡವಾಗಿರುತ್ತಿದ್ದ ದೇವರಾಜ ಅರಸು ರಸ್ತೆ, ದೇವರಾಜ ಮಾರುಕಟ್ಟೆ, ಸಯ್ಯಾಜಿರಾವ್ ರಸ್ತೆ, ಸಂತೇಪೇಟೆ, ಬನ್ನಿಮಂಟಪದ ಆರ್ ಎಂಸಿ ಯಾರ್ಡ್, ವಾಣಿವಿಲಾಸ ಮಾರುಕಟ್ಟೆ ಬಿಕೋ ಎನ್ನುತ್ತಿದ್ದವು. ಮಾಲ್‌ಗಳು ತೆರೆದಿರಲಿಲ್ಲ. ಬಂದ್ ಹಿನ್ನೆಲೆಯಲ್ಲಿ ಕೆಲವು ಶಾಲಾ ಕಾಲೇಜುಗಳಿಗೆ ರಜೆ ನೀಡಿದ್ದರೆ, ಕೆಲವು ಶಾಲೆಗಳಲ್ಲಿ ತರಗತಿಗಳು ಎಂದಿನಂತೆ ನಡೆದವು. ಗ್ರಾಮಾಂತರ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳು ಇಲ್ಲದಿದ್ದರಿಂದ ಬಹುತೇಕ ಸರ್ಕಾರಿ ಕಾಲೇಜುಗಳನ್ನು ಮುಚ್ಚಲಾಗಿತ್ತು. ಮರಿಮಲ್ಲಪ್ಪ ಕಾಲೇಜಿಗೆ ನುಗ್ಗಿದ ಹೋರಾಟಗಾರರು ರಜೆ ನೀಡುವಂತೆ ಒತ್ತಾಯಿಸಿ ಬಂದ್ ಮಾಡಿಸಿದರು. ಮೈಸೂರಿನ ಡಿ. ದೇವರಾಜ ಅರಸು ರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದರಿಂದ ರಸ್ತೆ ಬಿಕೋ ಎನ್ನುತ್ತಿತ್ತು.

ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ
ಮಂಡ್ಯ: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‌ಗೆ ಲೋಕಸಭಾ ಅಽವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಮಾನಿ ಸಿದ್ದು, ಅವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದಲಿತ, ರೈತ, ಅಲ್ಪ ಸಂಖ್ಯಾತ, ಹಿಂದುಳಿದ ವರ್ಗ ಗಳ ಮಹಾ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳು ಮಂಗಳ ವಾರ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಪ್ರಗತಿಪರ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದರೂ ವರ್ತಕರು ಬಂದ್‌ಗೆ ಬೆಂಬಲ ನೀಡದೆ ಎಂದಿನಂತೆ ಅಂಗಡಿಗಳನ್ನು ತೆರೆದು ವ್ಯಾಪಾರದಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಬೈಕ್ ಜಾಥಾ ನಡೆಸಿದ ಪ್ರತಿಭಟನಾಕಾರರು, ಅಂಗಡಿಗಳನ್ನು ಮುಚ್ಚು ವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಲೀಕರ ಜೊತೆ ಮಾತಿನ ಚಕಮಕಿ ನಡೆಸಿ, ವ್ಯಾಪಾರ ವಹಿವಾಟಿಗೆ ಅಡ್ಡಿಪಡಿಸಿದರು. ಇದನ್ನು ಹೊರತುಪಡಿಸಿ ಯಾವುದೇ ಅಹಿತಕರ ಘಟನೆ ಗಳು ನಡೆಯಲಿಲ್ಲ. ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರ ವಹಿವಾಟಿನ ಮೇಲೆ ಬಂದ್ ಪರಿಣಾಮ ಬೀರಿತು.

ಇನ್ನುಳಿದಂತೆ ಜನಜೀವನ, ಸಾರಿಗೆ ವ್ಯವಸ್ಥೆ, ಸರ್ಕಾರಿ ಸೇವೆ, ಶಾಲಾ-ಕಾಲೇಜು, ಬ್ಯಾಂಕ್ ಗಳು ಎಂದಿನಂತೆ ಕಾರ್ಯನಿರ್ವಹಿಸಿದ್ದು ಕಂಡುಬಂದಿತು. ಜನಜೀವನ ಎಂದಿನಂತೆ ಸಹಜ ಸ್ಥಿತಿಯಲ್ಲಿತ್ತು.

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

11 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

15 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago