ಮಂಡ್ಯ: ಯುವಕರು ಶಾಂತಿಯುತವಾಗಿ ಗಣಪತಿ ಮೆರವಣಿಗೆ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ಅನ್ಯಕೋಮಿನವರು ಪೂರ್ವನಿಯೋಜಿತವಾಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದರು. ನಾಗಮಂಗಲದಲ್ಲಿ ಕೋಮುಗಲಭೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗಡಿಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ್ದಾರೆ. ಎಲ್ಲೆಡೆಯು ಅಶಾಂತಿ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದರು. ಮಂಡ್ಯ ಜಿಲ್ಲೆಯು ಒಂದು ಕಾಲದಲ್ಲಿ ರೈತರ ಹೋರಾಟಕ್ಕೆ ಹೆಸರಾಗಿತ್ತು. ಆದರೆ, ಈಗ ಕೋಮುಗಲಭೆಗೆ ಹೆಸರಾಗುತ್ತಿರುವುದು
ಬೇಸರದ ಸಂಗತಿಯಾಗಿದೆ. ಇಷ್ಟೆಲ್ಲಾ ಘಟನೆ ಆಗುತ್ತಿದ್ದರೂ ಪೊಲೀಸರು ಮೂಖ ಪ್ರೇಕ್ಷಕರಾಗಿದ್ದಾರೆ. ಕಾಂಗ್ರೆಸ್ ಶಾಸಕರೇ ಮುಂದಿನ ದಿನಗಳಲ್ಲಿ ನಿಮ್ಮ ಮನೆಗಳಿಗೂ ಈ ದೇಶದ್ರೋಹಿಗಳು ನುಗ್ಗುತ್ತಾರೆ ಎಂದು ಎಚ್ಚರಿಸಿದರು. ಮಾಜಿ ಉಪಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಮಾಜಿ ಸಚಿವ ಕೆ. ಸಿ. ನಾರಾಯಣಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಸುರೇಶ್ಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಎನ್. ಎಸ್. ಇಂದ್ರೇಶ್, ಮುಖಂಡರಾದ ಡಾ. ಸಿದ್ದರಾಮಯ್ಯ, ಸಿ. ಟಿ. ಮಂಜುನಾಥ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು
ಕಿಡಿಗೇಡಿಗಳ ಕೃತ್ಯ: ಆರ್ ಅಶೋಕ್
ಮಂಡ್ಯ: ನಾಗಮಂಗಲದ ಘಟನೆಯು ಕಾನೂನನ್ನು ಕೈಗೆತ್ತಿಕೊಂಡ ಕೆಲ ಕಿಡಿಗೇಡಿಗಳ ಕೃತ್ಯ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ನಾಗಮಂಗಲದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯೂ ಗಣಪತಿ ವಿಚಾರಕ್ಕೆ ಇದೇ ಜಾಗದಲ್ಲಿ ಗಲಾಟೆಯಾಗಿರುವ ಕುರಿತು ಅಽಕಾರಿಗಳಿಗೆ, ಪೊಲೀಸರಿಗೆ ಮಾಹಿತಿ ಇರಲಿಲ್ಲವೆ? ಅಧಿಕಾರಿಗಳು ಮತ್ತು ಪೊಲೀಸರು ಕತ್ತೆ ಕಾಯುತ್ತಿದ್ದರೆ ಎಂದು ಪ್ರಶ್ನಿಸಿದರು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಇವೆಲ್ಲಾ ಕಾಂಗ್ರೆಸ್ಸಿನ ಪ್ರಚೋದನೆ ಇಲ್ಲದೇ ನಡೆಯಲು ಸಾಧ್ಯವಿಲ್ಲ ಎಂದರು. ಮಾಜಿ ಡಿಸಿಎಂ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಮಾತನಾಡಿ, ಮತಕ್ಕಾಗಿ ಕಾಂಗ್ರೆಸ್ಸಿಗರು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಗಣೇಶನ ಉತ್ಸವ ನಮ್ಮ ಸಂಸ್ಕೃತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದರು.