ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ.ವೈಷ್ಣವಿ ಸೂಚನೆ
ಹನೂರು: ಹನೂರು ತಾಲ್ಲೂಕಿನ ಮೀಣ್ಯಂ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯ ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಕೈಗೊಂಡು ಅನುಪಾಲನ ವರದಿ ನೀಡುವಂತೆ ಮುಖ್ಯ ಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಡಾ.ಕೆ. ವೈಷ್ಣವಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರವರಿಗೆ ಪತ್ರ ಬರೆದಿದ್ದಾರೆ.
ಆಗಸ್ಟ್ ೧೪ರಂದು ‘ಶಾಲೆಯಲ್ಲಿ ಶೌಚಾಲಯವಿಲ್ಲದೆ ವಿದ್ಯಾರ್ಥಿಗಳಿಗೆ ಸಮಸ್ಯೆ’ ಎಂಬ ಶೀರ್ಷಿಕೆಯಡಿ ಮೀಣ್ಯಂ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳದೆ ವಿದ್ಯಾರ್ಥಿಗಳಿಗೆ ಮೂತ್ರ ವಿಸರ್ಜನೆ ಮಾಡಲು ಸಮಸ್ಯೆಯಾಗಿದ್ದು ಸಂಬಂಧಪಟ್ಟವರು ಶೌಚಾಲಯದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಪೋಷಕರು ಆಗ್ರಹಿಸಿರುವ ಬಗ್ಗೆ ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.
ವರದಿಯನ್ನು ಗಮನಿಸಿರುವ ಮುಖ್ಯ ಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಡಾ. ಕೆ.ವೈಷ್ಣವಿ ಆಗಸ್ಟ್ ೧೬ರಂದು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿರವರಿಗೆ ಸದರಿ ವಿಷಯದ ವಾಸ್ತವಾಂಶದ ಬಗ್ಗೆ ಆದ್ಯತೆಯ ಮೇರೆಗೆ ಪರಿಶೀಲಿಸಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ಜಿಪಿಎಸ್ ಛಾಯಾಚಿತ್ರಗಳೊಂದಿಗೆ ಅನುಪಾಲನಾ ವರದಿಯನ್ನು ಅತಿ ಜರೂರಾಗಿ ಕಳುಹಿಸಿ ಕೊಡುವಂತೆ ನಿರ್ದೇಶನ ನೀಡಿದ್ದಾರೆ.





