Mysore
22
broken clouds

Social Media

ಬುಧವಾರ, 26 ಆಗಸ್ಟ್ 2026
Light
Dark

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು

ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ

ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೋಟ್ಯಂತರ ರೂ. ಅನುದಾನ ಬಿಡುಗಡೆಯಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಆದರೆ ಸರಗೂರು ಪಟ್ಟಣದ ಸಂತೆಮಾಳ ಹಾಗೂ ಅಂಗಡಿ ಬೀದಿ ಸೇರಿದಂತೆ ಮೂರು ಪ್ರಮುಖ ರಸ್ತೆಗಳಲ್ಲಿ ನಡೆಯುತ್ತಿರುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಸುಮಾರು ೭೦ ಲಕ್ಷ ರೂ.ಗಳಿಗೂ ಅಧಿಕ ವೆಚ್ಚದಲ್ಲಿ ನಡೆಯುತ್ತಿರುವ ಈ ರಸ್ತೆ ಕಾಮಗಾರಿಯನ್ನು ನಿರ್ಮಿತಿ ಕೇಂದ್ರದ ಮೂಲಕ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಆರಂಭವಾಗಿ ಸುಮಾರು ಒಂದು ವಾರದಲ್ಲೇ ಸಂತೆಮಾಳದಸಂತೆ ಮಾಸ್ತಮ್ಮ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ರಸ್ತೆಗೆ ಹಾಕಿರುವ ಕಾಂಕ್ರೀಟ್ ಬಿರುಕು ಬಿದ್ದು, ಕೆಲವು ಕಡೆ ಮೇಲ್ಮೈ ಕಿತ್ತುಬರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಯನ್ನು ಸ್ಥಳಕ್ಕೆ ಕರೆಸಿ ಸಮಸ್ಯೆಯನ್ನು ತೋರಿಸಿದ್ದು, ದೋಷ ಕಂಡುಬಂದಿರುವ ಭಾಗದಲ್ಲಿ ಮರುಕಾಮಗಾರಿ ಮಾಡಿಕೊಡುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಕುರಿತು ಕಾಮಗಾರಿಗೆ ಸಂಬಂಧಿಸಿದ ಇಂಜಿನಿಯರ್ ಸುಪ್ರೀತ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಸಾರ್ವಜನಿಕರು ಪ್ರಯತ್ನಿಸಿದ್ದು, ಬಳಿಕ ಮತ್ತೊಬ್ಬ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಮಗಾರಿ ನಡೆದ ಸಂದರ್ಭದಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ಕಾಂಕ್ರೀಟ್ ಮೇಲ್ಮೈ ಹಾನಿಯಾಗಿರಬಹುದು. ಹಾನಿಗೊಳಗಾದ ಭಾಗದಲ್ಲಿ ಪುನಃ ಕಾಮಗಾರಿ ನಡೆಸುವುದಾಗಿ ಅವರು ತಿಳಿಸಿದ್ದಾರೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ಇತ್ತ ಕಾಮಗಾರಿಯ ಗುತ್ತಿಗೆದಾರರು ಯಾರು? ಕಾಮಗಾರಿಯ ಅಂದಾಜು ಮೊತ್ತ ಎಷ್ಟು? ಯಾವ ಸಂಸ್ಥೆ ಕಾಮಗಾರಿ ನಿರ್ವಹಿಸುತ್ತಿದೆ? ಕಾಮಗಾರಿಗೆ ಬಳಸಲಾಗಿರುವ ಕಾಂಕ್ರೀಟ್‌ನ ಗುಣಮಟ್ಟ ಹಾಗೂ ತಾಂತ್ರಿಕ ಮಾನದಂಡಗಳನ್ನು ಪಾಲಿಸಲಾಗಿದೆಯೇ? ಎಂಬ ಪ್ರಶ್ನೆಗಳನ್ನು ಸಾರ್ವಜನಿಕರು ಮುಂದಿಟ್ಟಿದ್ದಾರೆ.

ಶಾಸಕರು ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಸ್ವಾಗತಾರ್ಹ. ಆದರೆ ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರ ಬೇಕು. ಕಾಮಗಾರಿ ಕಳಪೆಯಾಗಿದ್ದರೆ ಅದಕ್ಕೆ ಹೊಣೆಗಾರರು ಯಾರು ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕಾಮಗಾರಿಯ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬಾರದು. ಅಧಿಕಾರಿಗಳು ಸ್ವತಂತ್ರವಾಗಿ ಕಾಮಗಾರಿಯನ್ನು ಪರಿಶೀಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಆರೋಪಗಳ ಕುರಿತು ಶಾಸಕ ಅನಿಲ್ ಚಿಕ್ಕಮಾದು ಅವರನ್ನು ಸಂಪರ್ಕಿಸಿದ್ದು, ಈಗಷ್ಟೇ ಕಾಮಗಾರಿ ಆರಂಭವಾಗುತ್ತಿದೆ. ಈ ಬಗ್ಗೆ ಮಾತನಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

” ರಸ್ತೆ ಕಾಮಗಾರಿಯ ಸ್ಥಳಕ್ಕೆಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಕಾಂಕ್ರೀಟ್‌ನ ಗುಣಮಟ್ಟ, ದಪ್ಪ, ಬಳಸಿರುವ ಸಾಮಗ್ರಿ, ಕ್ಯೂರಿಂಗ್ ಸೇರಿದಂತೆ ತಾಂತ್ರಿಕ ಮಾನದಂಡಗಳನ್ನು ಪರಿಶೀಲಿಸಬೇಕು. ಕಾಮಗಾರಿ ಕಳಪೆಯಾಗಿರುವುದು ಸಾಬೀತಾದರೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ಸಾರ್ವಜನಿಕರ ಹಣ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.”

 

 

Tags:
error: Content is protected !!