Andolana originals

ಹಕ್ಕಿ ಜ್ವರದ ಬಗ್ಗೆ ಮುನ್ನೆಚರಿಕೆ ಕ್ರಮ ಅತ್ಯಗತ್ಯ

ರೋಗದ ಲಕ್ಷಣ ಕಂಡು ಬಂದಲ್ಲಿ ಮಾಹಿತಿ ನೀಡಲು ಆರೋಗ್ಯ ಇಲಾಖೆ ಮನವಿ 

ನವೀನ್ ಡಿಸೋಜ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಕ್ಕಿ ಜ್ವರ ಅಥವಾ ಕೋಳಿ ಜ್ವರ ಪ್ರಕರಣ ಪತ್ತೆಯಾಗಿಲ್ಲ. ಆದರೂ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯವಶ್ಯಕವಾಗಿದ್ದು, ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಆಸ್ಪತ್ರೆಯಲ್ಲಿ ಪರೀಕ್ಷಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ರಾಜ್ಯದಲ್ಲಿ ಕಾಣಿಸಿಕೊಂಡಿರುವ ಹಕ್ಕಿ ಜ್ವರದ ಭೀತಿ ಕೊಡಗಿನಲ್ಲೂ ಹೆಚ್ಚಾಗಿದ್ದು, ಕುಕ್ಕು ಟೋದ್ಯಮದ ಮೇಲೆ ಪರಿಣಾಮ ಬೀರುತ್ತಿದೆ. ಆತಂಕಕ್ಕೆ ಒಳಗಾಗಿರುವ ಜನ ಕೋಳಿ ಮಾಂಸಾಹಾರ ಸೇವನೆಗೆ ಹಿಂದೇಟು ಹಾಕುತ್ತಿ ದ್ದಾರೆ. ಇದರಿಂದ ಬಿರಿಯಾನಿ ಸೇರಿದಂತೆ ಮಾಂಸಾಹಾರ ಹೋಟೆಲ್‌ಗಳು ಗ್ರಾಹಕರಿಲ್ಲದೇ ಬಿಕೋ ಎನ್ನುತ್ತಿವೆ. ಈ ಬೆನ್ನಲ್ಲೇ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ಹಕ್ಕಿಜ್ವರದ ಬಗ್ಗೆ ಸ್ಪಷ್ಟನೆ ನೀಡಿದ್ದು, ಜನ ಆತಂಕ ಪಡುವ ಅವಶ್ಯವಿಲ್ಲ ಎಂದು ಅಭಯ ನೀಡಿದೆ.

ಹಕ್ಕಿ ಜ್ವರ ಅಥವಾ ಕೋಳಿ ಜ್ವರ ಹೆಚ್೫ಎನ್೧ ವೈರಸ್‌ನಿಂದ ಹರಡುವ ರೋಗ. ಇದು ಟರ್ಕಿ ಕೋಳಿ, ಗಿನಿ ಕೋಳಿ, ಗೀಜಗ ಮುಂತಾದ ಹಕ್ಕಿಗಳಲ್ಲಿ ಕಾಣಿಸಿಕೊಳ್ಳುವ ಕಾಯಿಲೆ. ಇದೊಂದು ಸಾಂಕ್ರಾಮಿಕ ಕಾಯಿಲೆ ಯಾಗಿದ್ದು, ಸಾಮಾನ್ಯವಾಗಿ ಹಕ್ಕಿಗಳಿಂದ ಹಕ್ಕಿಗಳಿಗೆ ಹರಡುತ್ತದೆ. ಕೆಲವೊಂದು ರೋಗ ಪೀಡಿತ ಹಕ್ಕಿಗಳ ಸಂಪರ್ಕದಿಂದ ಮನುಷ್ಯರಲ್ಲೂ ಈ ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ.

ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳ ಮಾಂಸವನ್ನು ಸರಿಯಾಗಿ ಬೇಯಿಸದೇ ತಿನ್ನುವುದರಿಂದ, ಸೋಂಕಿರುವ ಹಸಿ ಮೊಟ್ಟೆ ಯನ್ನು ಸೇವಿಸುವುದರಿಂದ ಹಾಗೂ ಕೋಳಿಗಳ ಹಿಕ್ಕೆಗಳು, ಮನುಷ್ಯರು ಕುಡಿಯುವ ನೀರಿ ನೊಂದಿಗೆ ಬೆರೆತು ಕಲುಷಿತಗೊಂಡಾಗ ಈ ಕಾಯಿಲೆ ಹರಡುತ್ತದೆ ಮತ್ತು ಕೆಲವು ಸಂದರ್ಭಗಳಲ್ಲಿ ಗಾಳಿಯ ಮೂಲಕವೂ ಹರಡುತ್ತದೆ.

ಹಕ್ಕಿ ಜ್ವರದ ಲಕ್ಷಣಗಳು ಸಾಮಾನ್ಯವಾಗಿ ಹೆಚ್೫ಎನ್೧ ಜ್ವರದ ಲಕ್ಷಣಗಳಂತೆಯೇ ಇರು ತ್ತದೆ. ಜ್ವರ ಮತ್ತು ಕೆಮ್ಮು, ಶೀತ, ತಲೆನೋವು, ಗಂಟಲು ಕೆರೆತ, ನೆಗಡಿ, ಸ್ನಾಯುಗಳಲ್ಲಿ ನೋವು, ಆಯಾಸ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಭೇದಿಯೂ ಆಗಬಹುದು. ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು.

ಹಕ್ಕಿ ಜ್ವರ ಪೀಡಿತ ಪ್ರದೇಶಗಳಲ್ಲಿ ನಾಗರಿಕರು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಹಕ್ಕಿ ಜ್ವರದ ಸೋಂಕು ಹರಡದಂತೆ ತಡೆಯಬಹುದು. ಶಂಕಿತ ಹಕ್ಕಿ ಜ್ವರ ಪೀಡಿತ ಕೋಳಿಗಳು, ಹಕ್ಕಿಗಳು ಹಾಗೂ ಬಾತು ಕೋಳಿಗಳ ಸಂಪರ್ಕಕ್ಕೆ ಬರದಂತೆ ಎಚ್ಚರ ವಹಿಸುವುದು. ಬೇರೆಯವರ ಮನೆಗೆ ಭೇಟಿ ನೀಡಿದಾಗ ಅಲ್ಲಿರುವ ರೋಗ ಪೀಡಿತ ಕೋಳಿ ಅಥವಾ ಹಕ್ಕಿಗಳನ್ನು ಸ್ಪರ್ಶಿಸಬಾರದು.

ಹಕ್ಕಿ ಜ್ವರ ಶಂಕಿತ ಅಥವಾ ಪೀಡಿತ ಫಾರಂ ಗಳಿಗೆ ಭೇಟಿ ನೀಡಬಾರದು. ಹಕ್ಕಿ ಜ್ವರ ಹರ ಡಿರುವ ಫಾರಂನ ವಾತಾವರಣದ ಸಂಪರ್ಕಕ್ಕೆ ಬಂದಲ್ಲಿ ತಕ್ಷಣ ತಮ್ಮ ಕೈಕಾಲು ಮತ್ತು ಮುಖವನ್ನು ತೊಳೆದುಕೊಂಡು ಬಟ್ಟೆಯನ್ನು ಬದಲಾಯಿಸಿಕೊಳ್ಳುವುದು ಮತ್ತು ಮುಂದಿನ ನಾಲ್ಕು ದಿನಗಳವರೆಗೆ ತಮ್ಮ ದೇಹದ ಉಷ್ಣಾಂಶದಲ್ಲಾಗುವ ಬದಲಾವಣೆ ಗಳನ್ನು ಗಮನಿಸಬೇಕು.

ಒಂದು ವೇಳೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಸೋಂಕಿರುವ ಪ್ರದೇಶಗಳಲ್ಲಿ ಯಾವುದೇ ವಸ್ತುವನ್ನು ಮುಟ್ಟಿದಾಗಲೂ ಕೈಗಳನ್ನು ಸೋಪಿನಿಂದ ತೊಳೆಯಬೇಕು.

ಕೋಳಿ ಮಾಂಸ ಸೇವನೆಯಿಂದ ಹಕ್ಕಿ ಜ್ವರ ಬರುವುದಿಲ್ಲ
ಮಡಿಕೇರಿ : ಕೋಳಿ ಮಾಂಸ ಅಥವಾ ಕೋಳಿ ಮೊಟ್ಟೆ ಸೇವಿಸುವುದರಿಂದ ಈ ಕಾಯಿಲೆ ಮನುಷ್ಯರಲ್ಲಿ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ ಮಾಂಸವನ್ನು ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆಯ ಸೇವನೆಯಿಂದ ರೋಗ ತಗಲುವ ಸಾಧ್ಯತೆ ಇದೆ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ೭೦ ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರವೇ ಸೇವಿಸಬೇಕು. ಅಡುಗೆಗಾಗಿ ಕೋಳಿ ಮಾಂಸ ಸಿದ್ಧಪಡಿಸಿದ ನಂತರ ಕೈಗಳನ್ನು ನಂಜು ನಾಶಕದಿಂದ ಸ್ವಚ್ಛವಾಗಿ ತೊಳೆದುಕೊಳ್ಳಬೇಕು. ಸೋಂಕಿತ ಹಸಿ ಮೊಟ್ಟೆ ಸೇವಿಸಬಾರದು.

ಹಕ್ಕಿ ಜ್ವರ ಸಾಂಕ್ರಾಮಿಕ ರೋಗವಾಗಿದ್ದು, ಮುನ್ನೆಚ್ಚರಿಕೆಯಿಂದ ತಡೆಯಬಹುದಾಗಿದೆ. ಆದ್ದರಿಂದ ಕಾಯಿಲೆಯ ಲಕ್ಷಣಗಳು ಕೋಳಿಗಳಲ್ಲಿ ಕಾಣಿಸಿಕೊಂಡ ಕೂಡಲೇ ಹತ್ತಿರದ ಮಾಹಿತಿ ಕೇಂದ್ರ ಅಥವಾ ಪಶು ವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕು. ಹಕ್ಕಿ ಜ್ವರದ ಲಕ್ಷಣಗಳು ಮನುಷ್ಯನಲ್ಲಿ ಕಾಣಿಸಿ ಕೊಂಡರೆ ತಡಮಾಡದೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕು. -ಡಾ. ಸತೀಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

1 hour ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

1 hour ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

1 hour ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

1 hour ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

1 hour ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

1 hour ago