Mysore
29
overcast clouds

Social Media

ಬುಧವಾರ, 19 ಆಗಸ್ಟ್ 2026
Light
Dark

ಓದುಗರ ಪತ್ರ: ಬೋಳೇಗೌಡನಹುಂಡಿಗೆ ಮೂಲಸೌಕರ್ಯ ಕಲ್ಪಿಸಿ

ಓದುಗರ ಪತ್ರ

ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು ಕಟ್ಟಿಕೊಂಡಿದ್ದು, ದುರ್ವಾಸನೆ ಬೀರುತ್ತಿವೆ. ಮಳೆಗಾಲದಲ್ಲಿ ಈ ಚರಂಡಿಗಳು ತುಂಬಿಕೊಳ್ಳುತ್ತಿದ್ದು, ಚರಂಡಿ ನೀರೆಲ್ಲ ರಸ್ತೆಯಲ್ಲಿಯೇ ಹರಿಯುತ್ತದೆ.

ಈ ಅನೈರ್ಮಲ್ಯ ವಾತಾವರಣದಿಂದಾಗಿ ಗ್ರಾಮದಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಸಾಂಕ್ರಾಮಿಕಗಳ ರೋಗಗಳ ಭೀತಿ ಎದುರಾಗಿದೆ. ಅಲ್ಲದೆ ಗ್ರಾಮದ ಕೆಲ ವಿದ್ಯುತ್‌ ಕಂಬಗಳಲ್ಲಿ ಬಲ್ಬಗಳೇ ಇಲ್ಲದೆ ಕತ್ತಲಾಗುತ್ತಿದ್ದಂತೆ ಕಗ್ಗತ್ತಲು ಆವರಿಸುತ್ತದೆ. ಇದರಿಂದಾಗಿ ರಾತ್ರಿ ವೇಳೆ ಜನರು ಓಡಾಡಲು ಹರಸಾಹಸ ಪಡುವಂತಾಗಿದೆ.

ಈ ಸಂಬಂಧ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಯವರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಕ್ಷೇತ್ರದ ಶಾಸಕರು ಈ ಗ್ರಾಮದ ಬಗ್ಗೆ ವಿಶೇಷ ಕಾಳಜಿ ತೋರಿ ಗ್ರಾಮವನ್ನು ಅಭಿವೃದ್ಧಿ ಮಾಡಬೇಕಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು.

Tags:
error: Content is protected !!