ಲಕ್ಷಿ ಕಾಂತ್ ಕೊಮಾರಪ್ಪ
ಕೃಷಿಕರಿಂದ ಅಗತ್ಯ ಸಾಮಗ್ರಿಗಳ ಖರೀದಿ; ಶೀಘ್ರದಲ್ಲೇ ಕೆಲಸ ಪೂರ್ಣಗೊಳಿಸಬೇಕಾದ ಅನಿವಾರ್ಯತೆ
ಸೋಮವಾರಪೇಟೆ: ವಾಯುಭಾರ ಕುಸಿತದಿಂದ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಒಂದು ವಾರ ಧಾರಾಕಾರವಾಗಿ ಸುರಿದ ಮಳೆಯು ಬಿಡುವು ನೀಡಿದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ.
ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುರಿದ ಮಳೆಯಿಂದ ಕೃಷಿ ಫಸಲಿಗೆ ಹಾನಿಯಾಗಿತ್ತು. ಹಸಿಮೆಣಸಿನ ಗಿಡಗಳು ಗಾಳಿ ಮಳೆಗೆ ನೆಲಕಚ್ಚಿದ್ದವು. ಬೀನ್ಸ್ ಹಾಗೂ ತರಕಾರಿ ಬೆಳೆಗಳಿಗೂ ಹಾನಿಯಾಗಿತ್ತು. ಕಾಫಿ ತೋಟಗಳಲ್ಲಿ ತೇವಾಂಶ ಹೆಚ್ಚಾಗಿ, ಕಾಫಿ ಗಿಡಗಳ ಎಲೆಗಳು ಉದುರಲು ಪ್ರಾರಂಭಿಸಿದ್ದವು. ಧಾರಾಕಾರ ಮಳೆಯಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿತ್ತು. ಭತ್ತ ಸಸಿ ಮಡಿ ಮಾಡಲು ಸಾಧ್ಯವಾಗಿರಲಿಲ್ಲ. ಕಾಫಿ ತೋಟಗಳಿಗೆ ಶಿಲೀಂಧ್ರ ನಾಶಕ ಸಿಂಪಡಿಸುವುದು, ಮರ ಕಪಾತು, ರಾಸಾಯನಿಕ ಗೊಬ್ಬರವನ್ನು ಹಾಕುವ ಕೆಲಸಗಳಿಗೆ ಹಿನ್ನೆಡೆಯಾಗಿತ್ತು. ಇದೀಗ ಬಿಸಿಲಿನ ವಾತಾವರಣ ಕಾಣಿಸಿಕೊಂಡಂತೆ ಗ್ರಾಮೀಣ ಪ್ರದೇಶದಲ್ಲಿ ರೈತರು ಕೃಷಿ ಚಟುವಟಿಕೆಗೆ ಸಿದ್ಧವಾಗುತ್ತಿದ್ದಾರೆ. ಭೂಮಿಯಲ್ಲಿ ಭತ್ತದ ಸಸಿಮಡಿ ಮಾಡಲು ಗದ್ದೆಯನ್ನು ಉತ್ತು ಮಣ್ಣನ್ನು ಹದಗೊಳಿಸಲು ಕೃಷಿಕರು ಮುಂದಾಗಿದ್ದಾರೆ.
ಸೋಮವಾರಪೇಟೆ ಪಟ್ಟಣಕ್ಕೆ ಆಗಮಿಸುತ್ತಿರುವ ಕೃಷಿಕರು, ಕೃಷಿಗೆ ಅಗತ್ಯ ಪರಿಕರಗಳನ್ನು ಖರೀದಿ ಮಾಡುತ್ತಿದ್ದ ಚಿತ್ರಣಗಳು ಕಂಡುಬರುತ್ತಿದೆ. ಗುದ್ದಲಿಗಳ ಖರೀದಿ, ಗದ್ದೆ ಉಳುಮೆ ಮಾಡುವಾಗ ಮಳೆಯಿಂದ ರಕ್ಷಣೆ ಪಡೆಯಲು ಪ್ಲಾಸ್ಟಿಕ್ ಹೊದಿಕೆಗಳು ಹಾಗೂ ಭತ್ತ ಬಿತ್ತನೆ ಬೀಜಕ್ಕೆ ಸಿಂಪಡಿಸುವ ಕ್ರಿಮಿನಾಶಕಗಳನ್ನು ಕೊಂಡುಕೊಂಡರು. ಕಾಫಿ ತೋಟಗಳಿಗೆ ರಾಸಾಯನಿಕ ಗೊಬ್ಬರ ಹಾಕಲು ವಿಳಂಬವಾದ ಹಿನ್ನೆಲೆಯಲ್ಲಿ, ಬೆಳೆಗಾರರು ಕಾಫಿ ಬುಡವನ್ನು ಸ್ವಚ್ಛಗೊಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇನ್ನೆರಡು ದಿನಗಳ ಕಾಲ ಮಳೆ ಬಿಡುವು ಕೊಟ್ಟರೆ ಕಾಫಿ ತೋಟದ ಕೆಲಸಗಳನ್ನು ಮುಂದುವರಿಸಬಹುದು ಎಂದು ಕಾಫಿ ಬೆಳೆಗಾರ ದಿವಾಕರ್ ಕೂತಿ ಹೇಳಿದರು.
ಕಾಫಿ ಗಿಡದ ಚಿಗುರು ತೆಗೆದು, ರಾಸಾಯನಿಕ ಗೊಬ್ಬರ ಹಾಕಿ ಶಿಲೀಂಧ್ರನಾಶಕ ಸಿಂಪಡಿಸುವುದು ಅನಿವಾರ್ಯವಾಗಿದೆ. ಈಗ ಕಾರ್ಮಿಕರ ಕೊರತೆಯಿಂದ ನಿಗದಿತ ಸಮಯದಲ್ಲಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ ಬೆಳೆಗಾರರು. ತಾಲ್ಲೂಕಿನ ಶಾಂತಳ್ಳಿ ಹೋಬಳಿಯಾದ್ಯಂತ ಕೃಷಿ ಚಟುವಟಿಕೆ ಹೆಚ್ಚು ಬಿರುಸುಗೊಂಡಿದೆ. ಟ್ರಾಕ್ಟರ್, ಎತ್ತುಗಳ ಮೂಲಕ ಉಳುಮೆ ಶುರುವಾಗಿದೆ. ದೀರ್ಘಾವಽ ತಳಿಗಳ ಸಸಿಮಡಿ ಮಾಡುತ್ತಿದ್ದು, ಗದ್ದೆಗಳನ್ನು ಉಳುಮೆ ಕಾರ್ಯಕ್ಕೆ ಸಿದ್ಧಪಡಿಸುವ ಸಂಬಂಧ ಕೆಲವು ರೈತರು ಟಿಲ್ಲರ್, ಟ್ರಾಕ್ಟರ್ ಇನ್ನಿತರೆ ಯಂತ್ರೋಪಕರಣಗಳ ಮೊರೆ ಹೋಗಿದ್ದಾರೆ. ಸೂಕ್ತ ವ್ಯವಸ್ಥೆ ಇಲ್ಲದವವರು ಸಾಂಪ್ರಾದಾಯಕ ಜೋಡೆತ್ತಿಗೆ ನೇಗಿಲು ಕಟ್ಟಿಕೊಂಡು ಉಳುಮೆ ಮಾಡುತ್ತಿದ್ದಾರೆ.
ಮಳೆ ಇದ್ದಾಗಲೇ ಸಸಿಮಡಿ ಮಾಡಿಕೊಂಡು ಗದ್ದೆಯ ಮಣ್ಣನ್ನು ಹದಗೊಳಿಸಬೇಕು, ಗರ್ವಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆ ಸುರಿದಿದೆ. ವ್ಯಾಪ್ತಿಯ ಕುಂಬಾರಗಡಿಗೆ, ಸೂರ್ಲಬ್ಬಿ, ಮಂಕ್ಯಾ, ಗರ್ವಾಲೆ, ಕಿಕ್ಕರಹಳ್ಳಿ ಗ್ರಾಮಗಳಲ್ಲಿ ಕೃಷಿಕರಿಗೆ ಸದ್ಯಕ್ಕೆ ಭತ್ತವೇ ಜೀವನಾಧಾರ ಬೆಳೆಯಾಗಿದೆ. ಈ ಕಾರಣದಿಂದ ಭತ್ತದ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
” ವಾಡಿಕೆಯಂತೆ ಜೂನ್ ಎರಡನೇ ವಾರದಲ್ಲಿ ಮಳೆ ಪ್ರಾರಂಭವಾಗಿದ್ದರೆ, ದೊಡ್ಡಮಟ್ಟದ ಸಮಸ್ಯೆಯಾಗುತ್ತಿರಲಿಲ್ಲ. ಆದರೆ, ಈ ಬಾರಿ ಬೇಗನೆ ಮಳೆ ಸುರಿದಿದ್ದು, ಕೆಲಸಗಳು ವಿಳಂಬವಾಗಿವೆ. ಶೀಘ್ರದಲ್ಲಿ ಕೆಲಸಗಳನ್ನು ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಪ್ರತಿ ವರ್ಷವೂ ಈ ಅಕಾಲಿಕ ಮಳೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಬೇಕಾಗಿದೆ.”
-ಶರಣ್ ಹರಗ, ಕೃಷಿಕರು, ಸೋಮವಾರಪೇಟೆ
” ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಭತ್ತ ಸಸಿ ಮಾಡಲು ರೈತರು ಮುಂದಾಗಿದ್ದಾರೆ. ಹೋಬಳಿಯಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿ ಭತ್ತದ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ದೊರೆಯುತ್ತದೆ. ಇಂಟಾನ್, ತುಂಗ, ಬಿ.ಆರ್.ಅಥಿರಾ, ಐಆರ್೬೪, ಎಂಟಿಯು ೧೦೦೧ ಭತ್ತದ ಬೀಜವನ್ನು ರೈತರಿಗೆ ವಿತರಿಸಲಾಗುವುದು.”
-ಕೆ.ಪಿ.ವೀರಣ್ಣ, ಕೃಷಿ ಸಹಾಯಕ ನಿರ್ದೇಶಕ, ಸೋಮವಾರಪೇಟೆ
ಕಾಫಿ ಬೆಳೆಯೇ ಹೆಚ್ಚು:
ಸೋಮವಾರಪೇಟೆ ತಾಲ್ಲೂಕಿನಲ್ಲಿ ವಾರ್ಷಿಕವಾಗಿ ೯,೪೦೦ ಹೆಕ್ಟೆರ್ ಭತ್ತ, ೩,೮೦೦ ಹೆಕ್ಟೆರ್ನಲ್ಲಿ ಮುಸುಕಿನ ಜೋಳ, ಬಾಳೆ, ಶುಂಠಿ ಬೆಳೆಯಲಾಗುತ್ತದೆ. ಹಿಂಗಾರುವಿನಲ್ಲಿ ೫೦೦ರಿಂದ ೬೦೦ ಹೆಕ್ಟೇರ್ನಲ್ಲಿ ದ್ವಿದಳ ಧಾನ್ಯ, ೩೦ ಹೆಕ್ಟೇರ್ ನಲ್ಲಿ ಹೊಗೆಸೊಪ್ಪು, ೪೦ ಹೆಕ್ಟೇರ್ನಲ್ಲಿ ರಾಗಿ ಬೆಳೆಯಲಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಒಟ್ಟು ೨೮,೫೪೦ ಹೆ.ನಲ್ಲಿ ಕಾಫಿ ಬೆಳೆಯುತ್ತಿದ್ದು, ೨೨,೯೪೦ ಹೆ.ನಲ್ಲಿ ಅರೇಬಿಕಾ, ೫,೬೦೦ ಹೆ.ನಲ್ಲಿ ರೊಬೆಸ್ಟಾ ಬೆಳೆಯಲಾಗುತ್ತಿದೆ. ಸೋಮವಾರಪೇಟೆ ತಾಲ್ಲೂಕಿನ ಅರೇಬಿಕಾ ಕಾಫಿಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಶೇ.೮೦ರಷ್ಟು ಮಂದಿ ಹಿಂಗಾರು ಮತ್ತು ಮುಂಗಾರು ಮಳೆಯನ್ನು ಆಶ್ರಯಿಸಿದ್ದಾರೆ.
ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…
ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…
ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…
ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್ನಲ್ಲಿ ಚಟುವಟಿಕೆಗಳು ಮತ್ತಷ್ಟು…
ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ…