ರಾಜ್ಯ ಸರ್ಕಾರದ ವತಿಯಿಂದ ಕೆಎಸ್ಆರ್ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. ಈ ಯೋಜನೆಯಡಿ ಸಾರಿಗೆ ನೌಕರರು ಹಾಗೂ ಅವರ ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲಾಗಿದ್ದು, ಇದರಿಂದ ಸಾರಿಗೆ ನೌಕರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಎಲ್ಲ ಸರ್ಕಾರಿ ಆಸ್ಪತ್ರೆಗಳು ಹಾಗೂ ೨೫೦ ಖಾಸಗಿ ಆಸ್ಪತ್ರೆಗಳೊಂದಿಗೆ ಸರ್ಕಾರ ಒಡಬಂಡಿಕೆ ಮಾಡಿ ಕೊಂಡಿದೆ. ಈ ಸೌಲಭ್ಯವನ್ನು ಸರ್ಕಾರ ಎಲ್ಲ ಇಲಾಖೆಗಳ ನೌಕರರಿಗೂ ವಿಸ್ತರಿಸಬೇಕು ಎಂಬುದು ಸರ್ಕಾರಿ ನೌಕರರ ಬೇಡಿಕೆಯಾಗಿದೆ. ಆದ್ದರಿಂದ ಈ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಯೋಜನೆಯನ್ನು ರಾಜ್ಯ ಸರ್ಕಾರ ಎಲ್ಲ ನೌಕರರಿಗೂ ವಿಸ್ತರಿಸಿದರೆ ಅನುಕೂಲವಾಗಲಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.