Mysore
26
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಕೊಲ್ಲಿ ಯುದ್ಧ: ವಿಶ್ವ ಸಂಸ್ಥೆಯ ಮೌನವೇಕೆ?

ಓದುಗರ ಪತ್ರ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ರಾಷ್ಟ್ರಗಳು ಯುದ್ಧ ನಡೆಸುತ್ತಿದ್ದು, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿ ಅವರನ್ನು ಹತ್ಯೆ ಮಾಡಿವೆ. ಇದರಿಂದ ಕೆರಳಿರುವ ಇರಾನ್ ಗಲ್ ರಾಷ್ಟ್ರಗಳಲ್ಲಿರುವ ಅಮೆರಿಕ ಸೇನಾ ನೆಲೆ ಹಾಗೂ ಆ ರಾಷ್ಟ್ರದ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ ನಡೆಸುತ್ತಿದೆ. ಇದರಿಂದಾಗಿ ಕಚ್ಚಾ ತೈಲ ಪೂರೈಕೆ ಬಹುತೇಕ ಸ್ಥಗಿತವಾಗಿದೆ. ಅಪಾರ ಸಂಖ್ಯೆಯಲ್ಲಿ ಸಾವುನೋವು ಹಾಗೂ ಆಸ್ತಿಪಾಸ್ತಿ ನಷ್ಟ ಉಂಟಾಗುತ್ತಿದೆ. ಈ ಸಂಘರ್ಷ ದೊಡ್ಡ ಯುದ್ಧವಾಗಿ ಮಾರ್ಪಾಡಾಗುವ ಆತಂಕ ಸೃಷ್ಟಿಯಾಗಿದೆ. ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಈಗಾಗಲೇ ಗೃಹೋಪಯೋಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ೬೦ ರೂ. ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯೂ ಹೆಚ್ಚಳವಾಗುವ ಸಾಧ್ಯತೆಯಿದೆ. ಇದರಿಂದಾಗಿ ಸರಕು ಸಾಗಣೆ ವೆಚ್ಚ ಹೆಚ್ಚಳವಾಗಲಿದ್ದು, ಅಗತ್ಯವಸ್ತುಗಳ ಬೆಲೆಯೂ ಏರಿಕೆಯಾದರೆ ಬಡ ಮತ್ತು ಮಧ್ಯಮ ವರ್ಗದ ಜನರು ಜೀವನ ನಡೆಸುವುದೇ ದುಸ್ತರವಾಗುತ್ತದೆ.

ಇಷ್ಟೆಲ್ಲಾ ಉದ್ವಿಗ್ನತೆಯ ನಡುವೆಯೂ ಜಗತ್ತಿನಲ್ಲಿ ಶಾಂತಿ ಕಾಪಾಡಬೇಕಾದ ವಿಶ್ವಸಂಸ್ಥೆ ಮೌನ ವಹಿಸಿರುವುದು ಬೇಸರದ ಸಂಗತಿಯಾಗಿದೆ. ಕೂಡಲೇ ವಿಶ್ವಸಂಸ್ಥೆಯ ಮುಖ್ಯ ಕಾರ್ಯದರ್ಶಿ ಸಭೆ ಕರೆದು ಯುದ್ಧ ನಿಲ್ಲಿಸುವ ಮೂಲಕ ಜಗತ್ತಿನಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಇಲ್ಲವಾದರೆ ನಾವು ಯುದ್ಧವನ್ನು ಕೊನೆಗಾಣಿಸಬೇಕು, ಇಲ್ಲವಾದರೆ ಯುದ್ಧವೇ ನಮ್ಮನ್ನು ಕೊನೆಗಾಣಿಸುತ್ತದೆ ಎಂಬ ಜಾನ್ ಎಫ್ ಕೆನಡಿಯವರ ಮಾತು ದಿಟವಾಗುವುದು ದೂರವಿಲ್ಲ!

 –ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

Tags:
error: Content is protected !!