ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ ಜಿಲ್ಲಾಧಿಕಾರಿಯಾಗಲಿ, ಮಹಾನಗರ ಪಾಲಿಕೆ ಆಯುಕ್ತರಾಗಲಿ, ವಿವಿಧ ಇಲಾಖೆಗಳ ಮುಖ್ಯಸ್ಥರಾಗಲಿ ಅಥವಾ ಕುಂದು ಕೊರತೆ ವಿಭಾಗದ ಮುಖ್ಯಸ್ಥರಾಗಲಿ ಸಾಮಾಜಿಕ ಮಾಧ್ಯಮದಲ್ಲಿ ಕ್ರಿಯಾಶೀಲವಾಗಿಲ್ಲ. ಇದರಿಂದಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಸಾರ್ವಜನಿಕರು ಪತ್ರ ಮುಖೇನ ಸಂಬಂಧಪಟ್ಟ ಇಲಾಖೆಗಳ ಕುಂದುಕೊರತೆ ವಿಭಾಗಗಳಿಗೆ ದೂರು ನೀಡಿದರೆ ಸಮಸ್ಯೆ ಪರಿಹಾರವಾಗಲು ತಿಂಗಳುಗಳೇ ಬೇಕಾಗಬಹುದು. ಉದಾಹರಣೆಗೆ ಕಬಿನಿ ನೀರಿಗಾಗಿ ನ್ಯಾಯಾಂಗ ಬಡಾವಣೆ, ಖಜಾನೆ ಲೇಔಟ್, ಕಾವೇರಿ ಗ್ರಾಮೀಣ ಬ್ಯಾಂಕ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೈಪ್ ಲೈನ್ ಹಾಕಿ ಆರು ತಿಂಗಳುಗಳು ಕಳೆದರೂ ನೀರು ಪೂರೈಕೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಪ್ರಶ್ನಿಸಿದರೆ ಸಂಬಂಧಪಟ್ಟ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗುತ್ತಿಲ್ಲ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಶ್ನಿಸಿದರೆ ಅಧಿಕಾರಿಗಳು ಉತ್ತರಿಸುತ್ತಿಲ್ಲ.
ಈಗಲಾದರೂ ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲರಾಗುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಅಗತ್ಯ.
-ಸುರಭಿ ಭಟ್, ರೂಪ ನಗರ, ಮೈಸೂರು



