ದೇಶದಲ್ಲಿ ಕಳೆದ 15 ತಿಂಗಳ ಅವಧಿಯಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಆತಂಕಕಾರಿ, ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರಗಳಾಗಲಿ ಇದನ್ನು ಗಂಭೀರವಾಗಿ ಪರಿಗಣಿಸದೆ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಧನ ನೀಡಿ ನಮ್ಮ ಕೆಲಸ ಮುಗಿಯಿತು ಎಂದು ಸುಮ್ಮನಾಗುತ್ತಿವೆಯೇ ವಿನಃ ರೈತರ ಆತ್ಮಹತ್ಯೆಗೆ ಕಾರಣಗಳನ್ನು ತಿಳಿದು ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಯಾವುದೇ ಯೋಜನೆಗಳನ್ನು ರೂಪಿಸುತ್ತಿಲ್ಲ.
ರೈತರು ತಾವು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯೂಸಿಗದಿದ್ದಾಗ, ಅತಿವೃಷ್ಟಿ ಹಾಗೂ ಅನಾವೃಷ್ಟಿಯ ಸಂದರ್ಭಗಳಲ್ಲಿ ಬೆಳೆ ಕೈಗೆ ಸಿಗದಿದ್ದಾಗ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆಯ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಸರ್ಕಾರ ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಜತೆಗೆ ನಷ್ಟ ಹೊಂದಿದಾಗ ಸೂಕ್ತ ಪರಿಹಾರ ಧನ ನೀಡುವ ಮೂಲಕ ಪ್ರೋತ್ಸಾಹಿಸಿ ಅವರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಬೇಕು.
ರಾಜ್ಯದ ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲಿಯೇ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದ್ದು, ರಾಜ್ಯ ಸರ್ಕಾರ ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಬಗೆಹರಿಸಲು ವಿಶೇಷ ಯೋಜನೆಗಳನ್ನು ರೂಪಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.





