ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು, ಹಾಗೂ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಶೇ.೧೫ ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದೇ ಇರಲು ಹತ್ತಾರು ಕಾರಣಗಳಿವೆ. ಅವುಗಳಲ್ಲಿ ಮುಖ್ಯವಾಗಿ , ಶಿಕ್ಷಕರ ಕೊರತೆ, ಶೌಚಾಲಯ ಮೊದಲಾದ ಮೂಲ ಸೌಕರ್ಯದ ಕೊರತೆ, ಕೆಲವು ಶಾಲೆಗಳಲ್ಲಿ ನುರಿತ ಶಿಕ್ಷಕರ ಕೊರತೆ ಮೊದಲಾದ ಕಾರಣಗಳಿಂದಾಗಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುತ್ತಿಲ್ಲ.
ಶಾಲೆಗಳು ಆರಂಭವಾಗುವ ಮೊದಲೇ ಶಿಕ್ಷಕರ ನೇಮಕಾತಿ ಮತ್ತು ಶಿಥಿಲಗೊಂಡ ಸರ್ಕಾರಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿದರೆ ಹಾಗೂ ಕನಿಷ್ಠ ಮೂಲ ಸೌಕರ್ಯವನ್ನು ಕಲ್ಪಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸಾಧ್ಯ. ಶಿಕ್ಷಣ ಸಚಿವರು ಈ ಬಗ್ಗೆ ಗಮನ ಹರಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು





