ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
ಇದೊಂದು ರಾಜ್ಯ ಸರ್ಕಾರದ ದಿಟ್ಟ ಹೆಜ್ಜೆ. ಇದರಿಂದಾಗಿ ಸಾವಿರಾರು ಬಡ ವರ್ಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಅನುಕೂಲವಾಗುತ್ತದೆ. ಹಲವಾರು ತಳಸಮುದಾಯಗಳ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಲು ಕನಿಷ್ಠ ಸೌಲಭ್ಯಗಳೂ ಇರುವುದಿಲ್ಲ, ಇಂತಹ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಅನುಕೂಲವಾಗಲಿದೆ.
ಮುಖ್ಯವಾಗಿ ರಾಜ್ಯದ ಸಾರ್ವಜನಿಕರ ಗ್ರಂಥಾಲಯದ ಸೇವೆಯನ್ನು, ಅಗತ್ಯ ಸೇವಾ ವಲಯ ಎಂದು ಪರಿಗಣಿಸ ಬೇಕು. ಏಕೆಂದರೆ ಸಾರ್ವಜನಿಕ ಗ್ರಂಥಾಲಯಗಳು ಪ್ರತಿ ಸೋಮವಾರ, ತಿಂಗಳ ಎರಡನೇ ಮಂಗಳವಾರ, ನಾಲ್ಕನೇ ಶನಿವಾರ ಹಾಗೂ ಸರ್ಕಾರಿ ರಜೆ ದಿನಗಳೂ ಸೇರಿದಂತೆ ವರ್ಷದಲ್ಲಿ ಸುಮಾರು ೧೦೦ ದಿನಗಳ ಕಾಲ ಸಾರ್ವಜನಿಕರಿಗೆ ಲಭ್ಯವಿರುವುದಿಲ್ಲ. ಎಲ್ಲ ಸಾರ್ವಜನಿಕ ಗ್ರಂಥಾಲಯಗಳು ವರ್ಷದ ೩೬೫ ದಿನಗಳೂ ತೆರೆದು ಸಾರ್ವಜನಿಕರ ಸೇವೆಗೆ ಲಭ್ಯವಾಗುವಂತೆ ಸಚಿವರು ಕ್ರಮ ಕೈಗೊಳ್ಳಬೇಕು.
– ಬೂಕನಕೆರೆ ವಿಜೇಂದ್ರ, ಮೈಸೂರು.



