ಮಲೆ ಮಹದೇಶ್ವರ ವನ್ಯಧಾಮದ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅಸಹಜವಾಗಿ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಅಳಿವಿನಂಚಿನಲ್ಲಿರುವ ಪ್ರಾಣಿಗಳ ಸಂರಕ್ಷಣೆಗಾಗಿ ಇಂದಿರಾ ಗಾಂಧಿ ಅವರು ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ನಮ್ಮ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಯಿತು. ರಾಜ್ಯದ ಅಭಯಾರಣ್ಯಗಳಲ್ಲಿ ಒಟ್ಟು ೫೬೩ ಹುಲಿಗಳಿದ್ದು, ಹುಲಿ ಸಂತತಿಯಲ್ಲಿ ಕರ್ನಾಟಕ ದೇಶದಲ್ಲೇ ೨ನೇ ಸ್ಥಾನದಲ್ಲಿದೆ.
ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ ೫ ಹುಲಿಗಳು ವಿಷ ಪ್ರಾಶನಕ್ಕೆ ಬಲಿಯಾಗಿವೆ ಎಂದು ಹೇಳಲಾಗುತ್ತಿದೆ. ಇದು ರಾಜ್ಯದ ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ನಡೆದಿರುವ ಅತಿ ದೊಡ್ಡ ದುರಂತ. ಇದು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಮಲೆ ಮಹದೇಶ್ವರ ವನ್ಯ ಜೀವಿ ಧಾಮ ಹುಲಿ ಸಂತತಿ ಹೆಚ್ಚಳಕ್ಕೆ ಪೂರಕವಾದ ವಾತಾವರಣವನ್ನು ಹೊಂದಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಹುಲಿಗಳ ಸಾವಿಗೆ ಕಾರಣಗಳನ್ನು ಪತ್ತೆಹಚ್ಚಬೇಕು, ಒಂದು ವೇಳೆ ವಿಷಪ್ರಾಶನ ಮಾಡಿದ್ದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.
-ಮಹಾಂತೇಶ್, ಬಳ್ಳೂರುಹುಂಡಿ, ನಂಜನಗೂಡು ತಾಲ್ಲೂಕು





