ನವೀನ್ ಡಿಸೋಜ
ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
೨೦೨೪-೨೫ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ೪ನೇ ಸ್ಥಾನ ಪಡೆದಿತ್ತು. ಈ ಬಾರಿ ಉತ್ತಮ ಫಲಿತಾಂಶ ಪಡೆಯಲು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಪ್ರಾಧ್ಯಾಪಕರ ಸಹಕಾರದಲ್ಲಿ ಶ್ರಮಿಸಲಾಗುತ್ತಿದೆ. ಪರೀಕ್ಷೆ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿ ನೇತತ್ವದಲ್ಲಿ ಸಭೆ ನಡೆಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದಂತೆ ಪರೀಕ್ಷೆಗಳನ್ನು ನಡೆಸ ಬೇಕು ಎಂದು ಸಂಬಂಧಿಸಿದವರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಒಟ್ಟು ೧೮ ಪರೀಕ್ಷಾ ಕೇಂದ್ರಗಳಿದ್ದು, ಎಲ್ಲ ಕೇಂದ್ರಗಳಲ್ಲೂ ಉತ್ತಮ ಗಾಳಿ,ಬೆಳಕಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರೂ ಸೇರಿದಂತೆ ಎಲ್ಲರಿಗೂ ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ. ನಿಯಂತ್ರಣ ಕೇಂದ್ರಗಳಲ್ಲಿನ ಎಲ್ಲ ಚಟುವಟಿಕೆಗಳು ಸಿಸಿಟಿವಿ ಕ್ಯಾಮೆರಾ ಕಣ್ಗಾವಲಿನಲ್ಲೇ ನಡೆಯಲಿವೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸುಗಮ ವಾಗಿ ಪರೀಕ್ಷೆ ನಡೆಯಲು ಬೇಕಾದ ಎಲ್ಲಾ ಕ್ರಮಗಳ ಜತೆಗೆ ಇಲಾಖೆ ಸನ್ನದ್ಧವಾಗಿದೆ.
ಜಿಲ್ಲೆಯಲ್ಲಿ ಈ ಬಾರಿ ೫,೨೫೫ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯಲಿದ್ದು, ಮೊದಲ ಬಾರಿಗೆ ೪,೮೦೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ೨೫೦ ವಿದ್ಯಾರ್ಥಿಗಳು ಖಾಸಗಿಯಾಗಿ ಹಾಗೂ ೧೯೬ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ ೧,೦೫೪ ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ೨,೬೦೩ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ೧,೫೯೮ ವಿದ್ಯಾರ್ಥಿಗಳೂ ಸೇರಿದಂತೆ ಒಟ್ಟು ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಹಾಗೆಯೇ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವಿಜಯ್ ತಿಳಿಸಿದ್ದಾರೆ.
ಜಿಯಲ್ಲಿ ಪರೀಕ್ಷೆಯನ್ನು ಸುಗಮ ಮತ್ತು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ೭ ಕಡೆಗಳಲ್ಲಿ ಮಾರ್ಗಾಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ೨ ಕಡೆ, ಸೋಮವಾರಪೇಟೆ ತಾಲ್ಲೂಕಿನಲ್ಲಿ ೧, ಕುಶಾಲನಗರ ತಾಲ್ಲೂಕಿನಲ್ಲಿ ೨, ವಿರಾಜಪೇಟೆ ತಾಲ್ಲೂಕಿನಲ್ಲಿ ೧ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ೧ ಮಾರ್ಗಾಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ. ಮಾರ್ಗಾಧಿಕಾರಿಗಳ ತಂಡದಲ್ಲಿ ಕಂದಾಯ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಇರಲಿದ್ದಾರೆ.
” ಜಿಲ್ಲೆಯ ೧೮ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಮಡಿಕೇರಿ ತಾಲ್ಲೂಕಿನ ೫, ಸೋಮವಾರಪೇಟೆ ತಾಲ್ಲೂಕಿನ ೮ ಮತ್ತು ವಿರಾಜಪೇಟೆ ತಾಲ್ಲೂಕಿನ ೫ ಕಡೆಗಳಲ್ಲಿ ಪರೀಕ್ಷೆ ನಡೆಯಲಿದೆ. ಕೊಡಗು ಗುಡ್ಡಗಾಡು ಪ್ರದೇಶವಾಗಿರುವುದರಿಂದ ಪರೀಕ್ಷಾ ಸಮಯದಲ್ಲಿ ಮಕ್ಕಳಿಗೆ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತಿದೆ. ವಿದ್ಯಾರ್ಥಿಗಳಿರುವ ಪ್ರದೇಶದ ೧೦-೧೫ ಕಿ.ಮೀ. ಒಳಗೆ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಕಳೆದ ಬಾರಿ ಶೇ.೮೩.೮೪ ಫಲಿತಾಂಶ ಬಂದಿತ್ತು. ಈ ಬಾರಿ ಅದಕ್ಕಿಂತಲೂ ಉತ್ತಮ ಫಲಿತಾಂಶ ಪಡೆಯಲು ಪ್ರಯತ್ನಿಸಲಾಗುತ್ತಿದೆ.”
-ವಿಜಯ್, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ
” ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಫೆ.೨೮ ರಿಂದ ಮಾ.೧೭ ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪರೀಕ್ಷೆಗೆ ಮೇಲ್ವಿಚಾರಕರ ನಿಯೋಜನೆ, ಪೊಲೀಸರು ಹಾಗೂ ಆರೋಗ್ಯ ಸಿಬ್ಬಂದಿ ನಿಯೋಜನೆ ಸೇರಿದಂತೆ ಪರೀಕ್ಷಾ ಪ್ರಾಧಿಕಾರದ ನಿರ್ದೇಶನವನ್ನು ಪಾಲಿಸುವಂತೆ ತಿಳಿಸಲಾಗಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುಗಮ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಲಾಗಿದೆ.”
-ಎಸ್.ಜೆ.ಸೋಮಶೇಖರ್, ಜಿಲ್ಲಾಧಿಕಾರಿ, ಕೊಡಗು
” ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪದವಿ ಪೂರ್ವ ಶಿಕ್ಷಣ, ಕಂದಾಯ, ಪೊಲೀಸ್, ಖಜಾನೆ, ಸಾರಿಗೆ, ಸೆಸ್ಕ್, ಆರೋಗ್ಯ ಹೀಗೆ ವಿವಿಧ ಇಲಾಖೆಗಳು ತಂಡವಾಗಿ ಕಾರ್ಯನಿರ್ವಹಿಸಲಿವೆ.”
-ಆರ್.ಐಶ್ವರ್ಯ, ಹೆಚ್ಚುವರಿ ಜಿಲ್ಲಾಧಿಕಾರಿ, ಕೊಡಗು
ಅಮರಾವತಿ : ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…