ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅನತಿ ದೂರದಲ್ಲಿರುವ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಲರಾ ಪ್ರಕರಣಗಳು ತಗ್ಗಿದ್ದರೂ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ.
ಗ್ರಾಮದ ಇಬ್ಬರಿಗೆ ಕಾಲರಾ ಸೋಂಕು ದೃಢಪಟ್ಟಿದ್ದು ಕೆಆರ್ಎಸ್ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ವೈದ್ಯರು, ಸಿಬ್ಬಂದಿ ಗ್ರಾಮದಲ್ಲಿ ಮೊಕ್ಕಂ ಹೂಡಿ ಪ್ರತಿಯೊಬ್ಬರನ್ನು ತಪಾಸಣೆ ಮಾಡುತ್ತಿದ್ದಾರೆ.
ಸಿದ್ದಲಿಂಗಪುರ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಕಾಣಿಸಿಕೊಂಡು ಕಾಲರಾ ಭೀತಿ ಹರಡುತ್ತಿದ್ದಂತೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ, ಎಲ್ಲರನ್ನೂ ಸಾಮೂಹಿಕ ತಪಾಸಣೆಗೆ ಒಳಪಡಿಸಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಅವರು ಕೂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಾಂತಿ, ಭೇದಿ ಕಾಣಿಸಿಕೊಳ್ಳದೆ ಇದ್ದರೂ ನಿಶ್ಯಕ್ತಿಗೆ ಸಿಲುಕದಂತೆ ಓಆರ್ಎಸ್ ಪ್ಯಾಕೆಟ್ಗಳನ್ನು ಗ್ರಾಮದಲ್ಲಿ ವಿತರಿಸಲಾಗಿದೆ.
ಟ್ಯಾಂಕರ್ ನೀರು ಪೂರೈಕೆ: ಕಲುಷಿತ ನೀರು ಸೇರಿರುವ ಬೋರ್ವೆಲ್ಗಳನ್ನು ಬಂದ್ ಮಾಡಿ ಟ್ಯಾಂಕರ್ ನೀರು ಪೂರೈಸಲಾಗಿದೆ. ಕೆಲವು ಬೋರ್ವೆಲ್ಗಳ ನೀರು ಸರಿಯಾಗಿದ್ದರೆ, ಹಲವು ಸರಿಯಾಗಿಲ್ಲ. ವಾಣಿವಿಲಾಸ ನೀರು ಸರಬರಾಜು ಕೇಂದ್ರದಿಂದ ಕೆಲವು ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ನೀರಿನಲ್ಲಿ ಯಾವುದೇ ಸಮಸ್ಯೆ ಇಲ್ಲ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎ.ಎಸ್. ರಂಜಿತ್ ಕುಮಾರ್ ಭೇಟಿ ನೀಡಿ ನೀರು ಸರಬರಾಜು ಆಗುವ ಪಾಯಿಂಟ್ಗಳನ್ನು ಪರಿಶೀಲಿಸಿದರು. ಗ್ರಾಮದಲ್ಲಿ ಕಾಲರಾ ಪ್ರಕರಣ ಕಾಣಿಸಿಕೊಂಡ ಮೇಲೆ ತಪಾಸಣೆ ಮಾಡುತ್ತಿದ್ದೇವೆ. ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದೇವೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸವರಾಜು ಹೇಳಿದರು.
ಗ್ರಾಮದಲ್ಲಿ ಏನೇನು ಸಮಸ್ಯೆ?:
ಸಿದ್ದಲಿಂಗಪುರ ಪ್ರಮುಖ ಗ್ರಾಮವಾದರೂ ಹಲವಾರು ಸಮಸ್ಯೆಗಳು ಕಾಡುತ್ತಿದೆ. ಮನೆಗಳ ತ್ಯಾಜ್ಯ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಚರಂಡಿ ನೀರು ಸರಾಗವಾಗಿ ಹರಿದು ಹೋಗದ ಕಾರಣ ನಿಂತ ನೀರಿನಿಂದ ಆರೋಗ್ಯ ಸಮಸ್ಯೆ ಬಾಧಿಸುತ್ತಿದೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಓಣಿಯ ತುಂಬೆಲ್ಲ ದುರ್ಗಂಧ ಸೂಸುತ್ತಿರುವುದರಿಂದ ಹಲವು ಬಡಾವಣೆ ನಿವಾಸಿಗಳು ವಾಂತಿ, ಭೇದಿ, ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿದ್ದಾರೆ.
ಗ್ರಾಪಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆಗೆ ಗ್ರಹಣ ಹಿಡಿದಿದೆ. ರಸ್ತೆಯ ಬದಿಯಲ್ಲಿ ಕಸಕಡ್ಡಿಗಳ ರಾಶಿ ರಾರಾಜಿಸುತ್ತಿದ್ದರೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಸ್ವಚ್ಛಗೊಳಿಸುವ ಗೋಜಿಗೆ ಹೋಗುತ್ತಿಲ್ಲವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದಲಿಂಗಪುರ ಗ್ರಾಮದ ಸಮಸ್ಯೆಗೆ ಸಂಬಂಧಪಟ್ಟಂತೆ ಈಗಾಗಲೇ ಇಲಾಖೆ ಸಿಬ್ಬಂದಿ ಜಾಗೃತರಾಗಿದ್ದಾರೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ, ಪ್ರತಿದಿನ ಮನೆ ಮನೆಗೆ ಭೇಟಿ ನೀಡಿ ತಪಾಸಣೆ ಮಾಡುವಂತಹ ಕೆಲಸ ನಡೆಯುತ್ತಿದೆ. ಯಾರಿಗಾದರೂ ರೋಗ ಲಕ್ಷಣಗಳು ಕಂಡುಬಂದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಗೆ ವ್ಯವಸ್ಥೆ ಮಾಡುತ್ತೇವೆ.
-ಡಾ ಪಿ.ಸಿ.ಕುಮಾರಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ.
ಜಿಲ್ಲೆಯ ಕೆಲವೆಡೆ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿದ್ದ ಘಟನೆಗಳು ಜರುಗಿವೆ. ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು. ಇಲ್ಲದಿದ್ದರೆ ಮುಂದಿನ ಅನಾಹುತಕ್ಕೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ.
-ರಾಮಕೃಷ್ಣ, ಸಿದ್ದಲಿಂಗಪುರ ಗ್ರಾಮಸ್ಥ
ಮಳೆಗಾಲ ಶುರುವಾಗಿರುವುದರಿಂದ ಮಳೆ ನೀರಿನೊಂದಿಗೆ ಹೂಳು ಸೇರಿಕೊಂಡು ಚರಂಡಿಗಳಲ್ಲಿ ಹೂಳು ತುಂಬಿದೆ. ಹೀಗಾಗಿ ತ್ಯಾಜ್ಯ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ. ತಕ್ಷಣವೇ ಅಧಿಕಾರಿಗಳು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು.
-ಕೆ.ರಾಮಕೃಷ್ಣ, ಸಿದ್ದಲಿಂಗಪುರ ಗ್ರಾಮಸ್ಥ
ಸಿದ್ದಲಿಂಗಪುರ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದರೊಂದಿಗೆ ಜಾಗೃತಿ ಮೂಡಿಸುವ ಕೆಲಸದೊಂದಿಗೆ ಸ್ವಚ್ಛತಾ ಕಾರ್ಯವನ್ನು ಮಾಡುತ್ತಿದ್ದೇವೆ. ಸಭೆ ಕರೆದು ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳ ಸ್ವಚ್ಛತೆಗೆ ಕ್ರಮ ಜರುಗಿಸಲಾಗುತ್ತದೆ.
-ಬಸವರಾಜು, ಸಿದ್ದಲಿಂಗಪುರ ಗ್ರಾಪಂ ಪಿಡಿಒ
ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್…
ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್ಪ್ರೆಸ್ ರೈಲು ಡಿಬಾಲೊಂಗ್ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…
ಮಂಡ್ಯ: ರಾಜ್ಯದ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಂಬಂಧ ಎ.ಜೆ.ಸದಾಶಿವ ಆಯೋಗದ ವರದಿ ಹಾಗೂ ಜಾತಿ ಜನಗಣತಿ, ಹೆಚ್.ಕಾಂತರಾಜ್ ಆಯೋಗದ…
ಮಂಡ್ಯ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾಯಿತನಾಗಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದು, ಸಾರ್ವಜನಿಕ ಅಭಿಪ್ರಾಯ ಕಲೆ ಹಾಕಲು ತೆರೆದ…
ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಅಧಿಕಾರ ಸ್ವೀಕರ ಕಾರ್ಯಕ್ರಮದಲ್ಲಿ ಸಿಎಂ ಹೇಳಿಕೆ ಸೌಮ್ಯರೆಡ್ಡಿ ರಚನಾತ್ಮಕವಾಗಿ ಪಕ್ಷ ಸಂಘಟಿಸಬಲ್ಲರು: ಸಿ.ಎಂ.ಸಿದ್ದರಾಮಯ್ಯ ಬೆಂಗಳೂರು: 2028…
ಬೆಂಗಳೂರು: ಎನ್ ಡಿಎ ಕೂಟವೇ ನನ್ನ ಕುಟುಂಬ, ಮೈತ್ರಿಕೂಟದಿಂದಲೇ ಒಬ್ಬರು ಅಭ್ಯರ್ಥಿ ಆಗುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ…