ಹೆಚ್ಚಿನ ಸಂಖ್ಯೆಯ ಭಕ್ತರ ಭೇಟಿ ಸಾಧ್ಯತೆ; ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ
ಮಡಿಕೇರಿ: ಈ ಬಾರಿ ಅ.೧೭ರಂದು ತಲಕಾವೇರಿ ಸನ್ನಿಧಿಯಲ್ಲಿ ಪವಿತ್ರ ತೀರ್ಥೋದ್ಭವ ಜರುಗಲಿದ್ದು, ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.೧೭ ರಂದು ನಡೆಯಲಿದೆ. ಮಧ್ಯಾಹ್ನ ೧ ಗಂಟೆ ೪೪ ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾಳೆ.
ಈ ವರ್ಷ ಮಧ್ಯಾಹ್ನದ ಸಮಯದಲ್ಲಿ ತೀರ್ಥೋದ್ಭವ ಜರುಗಲಿರುವುದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿಕಾವೇರಿ ಮಾತೆಯ ದರ್ಶನ ಪಡೆಯಲು ಆಗಮಿಸುವ ನಿರೀಕ್ಷೆ ಇರುವುದರಿಂದ, ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ ಕೈಗೊಳ್ಳಲಾಗುತ್ತಿದೆ.
ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಿಗೆ ವಿದ್ಯುತ್ ದೀಪಾಲಂಕಾರ, ಸುತ್ತಲೂ ಬ್ಯಾರಿಕೇಡ್ ಅಳವಡಿಕೆ, ವೇದಿಕೆ ನಿರ್ಮಾಣ, ಮಳೆಯಿಂದ ರಕ್ಷಣೆಗಾಗಿ ಮೆಟಲ್ ಶೀಟ್, ಪೆಂಡಾಲ್ಗಳು, ಹೂವಿನ ಅಲಂಕಾರ ಮತ್ತಿತರ ಕೆಲಸ ಕಾರ್ಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ತೀರ್ಥೋದ್ಭವದ ವೀಕ್ಷಣೆಯ ವೇಳೆ ನೂಕು ನುಗ್ಗಲು ಉಂಟಾಗದಂತೆ ಎಲ್ ಇಡಿ ಪರದೆಗಳು, ಫೋಟೋಗ್ರಫಿ ಮತ್ತು ಭಕ್ತಾದಿಗಳ ಭದ್ರತೆಯ ದೃಷ್ಟಿಯಿಂದ ಅವಶ್ಯವಿರುವ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ವ್ಯವಸ್ಥೆಗೆ ಸಂಬಂಧಿಸಿದಂತೆ ಈಗಾಗಲೇ ಕೆಟಿಪಿಪಿರಂತೆ ಇ-ಟೆಂಡರ್ ಅನ್ನು ಆಹ್ವಾನಿಸಿ ಸೂಕ್ತ ಗುತ್ತಿಗೆದಾರರನ್ನು ಗುರುತಿಸಿಕೊಂಡು ಕಾರ್ಯಾದೇಶ ನೀಡಲಾಗಿದೆ.
ಇದನ್ನು ಓದಿ : ಆತ ಸಾಯುವಂತೆ ಗುಂಡು ಹೊಡೆಯಬೇಕಿತ್ತು..
ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ಕೆಲವೆಡೆ ಪಾಚಿಕಟ್ಟಿದ್ದು, ದೇವಾಲಯಗಳಗೋಪುರ, ನೆಲಹಾಸು ಅಲಂಕಾರಿಕ ಕಲ್ಲುಗಳ ಶುಚಿತ್ವಕ್ಕೆ ಕ್ರಮ ಕೈಗೊಳ್ಳಲಾಗಿದೆ. ಸುಣ್ಣಬಣ್ಣ ಬಳಿಯುವ ಕಾರ್ಯವೂ ಪ್ರಗತಿಯಲ್ಲಿದ್ದು, ಕಾವೇರಿ ನೀರಾವರಿ ನಿಗಮದ ವತಿಯಿಂದ ತ್ರಿವೇಣಿ ಸಂಗ್ರಮ ಸ್ನಾನ ಘಟ್ಟದಲ್ಲಿ ಹೂಳೆತ್ತುವುದು ಹಾಗೂ ದೇವಾಲಯದ ಆವರಣಗಳು ಮತ್ತು ಭಾಗಮಂಡಲಕ್ಕೆ ಸಂಪರ್ಕಿಸುವ ರಸ್ತೆಗಳ ಇಕ್ಕೆಲಗಳಲ್ಲಿ ಕಾಡು ಕಡಿದು ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಕೆಲಸ ಪ್ರಗತಿಯಲ್ಲಿದೆ. ತಲಕಾವೇರಿ, ಭಾಗಮಂಡಲಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಭಕ್ತರ ಅನುಕೂಲಕ್ಕಾಗಿ ಆಗತ್ಯವಿರುವೆಡೆ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಲಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪಿಂಡ ಪ್ರದಾನ ಕಾರ್ಯಕ್ಕೂ ಅಗತ್ಯ ವ್ಯವಸ್ಥೆ ಮಾಡಲಾಗುತ್ತಿದೆ.
ಸರ್ಕಾರದಿಂದ ಅನುದಾನ ಮಂಜೂರು: ಜಾತ್ರಾ ಮಹೋತ್ಸದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ಹಾಗೂ ಇತರೆ ನಿರ್ವಹಣೆಗಾಗಿ ಕಾವೇರಿ ನೀರಾವರಿ ನಿಗಮದ ವತಿಯಿಂದ ೨ ಕೋಟಿ ರೂ. ಅನುದಾನವನ್ನು ಮಂಜೂರು ಮಾಡಲಾಗಿದೆ. ಜೊತೆಗೆ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರದ ವತಿಯಿಂದ ಮುಜರಾಯಿ ಇಲಾಖೆಯ ಮೂಲಕ ೭೫ ಲಕ್ಷ ರೂ. ಅನುದಾನವನ್ನು ಮಂಜೂರು ಮಾಡಿ ಆದೇಶಿಸಿಸಲಾಗಿದೆ.
” ಇತ್ತೀಚೆಗೆ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವಕ್ಕೆ ಸಂಬಂಧಿಸಿದಂತೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರ ಸೂಚನೆಯಂತೆ ಎಲ್ಲಾ ಅಗತ್ಯ ಸೌಕರ್ಯಗಳನ್ನು ಒದಗಿಸಲು ನಿರ್ದೇಶನ ನೀಡಲಾಗಿದೆ. ಎಲ್ಲಾ ಭಕ್ತಾದಿಗಳು ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರಾ ಮಹೋತ್ಸವಕ್ಕೆ ಆಗಮಿಸಿ ಜಾತ್ರಾ ಮಹೋತ್ಸವನ್ನು ಯಶಸ್ವಿಗೊಳಿಸಬೇಕು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು.”
ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ
” ಅ.೧೭ರಂದು ಕಾವೇರಿ ತೀರ್ಥೋದ್ಭವಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಭಾಗಮಂಡಲದಿಂದ ತಲಕಾವೇರಿಗೆ ೨೫ ಉಚಿತ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು. ಕ್ಷೇತ್ರಕ್ಕೆ ಆಗಮಿಸಲು ಮತ್ತು ವಾಪಸು ತೆರಳಲು ಜಿಲ್ಲೆಯ ವಿವಿಧೆಡೆಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಕಲ್ಪಿಸಲಾಗುವುದು. ಹೆಚ್ಚಿನ ಭಕ್ತಾದಿಗಳು ಕ್ಷೇತ್ರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.”
ಎ.ಎಸ್. ಪೊನ್ನಣ್ಣ, ವಿರಾಜಪೇಟೆ ಕ್ಷೇತ್ರದ ಶಾಸಕರು
–ನವೀನ್ ಡಿಸೋಜ





