ಹೇಮಂತ್ಕುಮಾರ್
ಪಶು ವೈದ್ಯ ಎಚ್.ರಮೇಶ್ ಸಾಧನೆಗೆ ಮುಖ್ಯಮಂತ್ರಿ ಪದಕದ ಗೌರವ
ಮಂಡ್ಯ: ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಇಲಾಖೆಯಲ್ಲಿ ವಿವಿಧ ಪ್ರಭೇದದ ಪ್ರಾಣಿಗಳ ಆರೋಗ್ಯ ತಪಾಸಣೆ, ಚಿಕಿತ್ಸೆ, ಪೋಷಣೆ ಮತ್ತು ಪಾಲನೆಯನ್ನು ಯಶಸ್ವಿಯಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಮದ್ದೂರಿನ ಪಶು ವೈದ್ಯ ಡಾ.ಎಚ್.ರಮೇಶ್ ಅವರು ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ. ೭೧ನೇ ವನ್ಯಜೀವಿ ಸಪ್ತಾಹದ ಸಮಾರೋಪದ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಎಚ್.ರಮೇಶ್ ಅವರಿಗೆ ಪದಕ ಪ್ರದಾನ ಮಾಡಿ ಅಭಿನಂದಿಸಿದರು.
ಮೂಲತಃ ಮದ್ದೂರು ತಾಲ್ಲೂಕಿನ ಚಿಕ್ಕಅರಸಿನಕೆರೆ ಹೋಬಳಿ ಛತ್ರದ ಹೊಸಹಳ್ಳಿಯ ಮಲವಮ್ಮ ಮತ್ತು ಹುಚ್ಚಯ್ಯ ದಂಪತಿಯ ಪುತ್ರರಾದ ಡಾ.ರಮೇಶ್ ಅವರು ಅರಣ್ಯ ಇಲಾಖೆಯ ಬಂಡೀಪುರ ಮತ್ತು ಬನ್ನೇರುಘಟ್ಟದಲ್ಲಿ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ರಮೇಶ್ ಸುಮಾರು ೧೦೦ ವಿವಿಧ ಜಾತಿಗಳ ೨ ಸಾವಿರಕ್ಕೂ ಹೆಚ್ಚು ಪ್ರಾಣಿಗಳ ಆರೋಗ್ಯ ನಿರ್ವಹಣೆ ಮತ್ತು ಪಾಲನೆ, ಪೋಷಣೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ಅರಣ್ಯ ಇಲಾಖೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
ಡಾ.ಎಚ್.ರಮೇಶ್ ಅವರು ವಿಶೇಷವಾಗಿ ಆನೆ, ಹುಲಿ, ಸಿಂಹ, ಜೀಬ್ರಾಗಳಂತಹ ಪ್ರಮುಖ ಪ್ರಾಣಿಗಳಿಗೆ ಶಸ್ತ್ರಚಿಕಿತ್ಸೆ, ಲೇಸರ್ ಚಿಕಿತ್ಸೆ ಮತ್ತು ರೇಡಿಯೋ ಕಾಲರಿಂಗ್ ಹಾಗೂ ಹಲವು ಸಂಕೀರ್ಣ ಕಾರ್ಯಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿರುವುದು ಇವರ ಹೆಗ್ಗಳಿಕೆ.
ಪ್ರಮುಖವಾಗಿ ಅಳಿವಿನಂಚಿನಲ್ಲಿರುವ ಕಾಡು ಪ್ರಾಣಿಗಳ ಸಂತಾನೋತ್ಪತ್ತಿ ಯನ್ನು ಯಶಸ್ವಿಯಾಗಿ ನಡೆಸಿರುವುದು ಪ್ರಮುಖ ಸಾಧನೆ. ಹಲವು ಕಾರಣಗಳಿಂದಾಗಿ ಮೃತಪಟ್ಟ ೫೧ ಆನೆಗಳು, ೨೦ ಹುಲಿಗಳು, ೨೦ ಚಿರತೆಗಳು ಹಾಗೂ ವಿವಿಧ ಪ್ರಾಣಿಗಳ ಮರಣೋತ್ತರ ಪರೀಕ್ಷೆ ನಡೆಸಿ ಇಲಾಖೆಗೆ ಈ ಪ್ರಾಣಿಗಳ ಸಾವಿನ ನಿಖರ ಕಾರಣ ತಿಳಿಸುವಲ್ಲಿ ಡಾ.ರಮೇಶ್ ನಿಪುಣರಾಗಿದ್ದಾರೆ. ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿರುವ ಡಾ.ಎಚ್.ರಮೇಶ್ ಅವರಿಗೆ ಪಶ್ಚಿಮ ಘಟ್ಟಗಳ ಅರಣ್ಯ ಸಂರಕ್ಷಣಾ ಕಾರ್ಯಪಡೆ ಸಮಿತಿ ಮಾಜಿ ನಿರ್ದೇಶಕ ಲಿಂಗನದೊಡ್ಡಿ ರಾಮಕೃಷ್ಣ ಅಭಿನಂದಿಸಿದ್ದಾರೆ.
ಮಂಡ್ಯ ಜಿಲ್ಲೆಗೆ ಸಂದ ಗೌರವ….:
ಮಾನವ ವನ್ಯಜೀವಿ ಸಂಘರ್ಷದ ಸಂದರ್ಭದಲ್ಲಿ ಒಟ್ಟು ೭೧ ಕಾಡಾನೆಗಳನ್ನು ಸೆರೆಹಿಡಿದು ಚಿಕಿತ್ಸೆ ನೀಡಿದ್ದಾರೆ. ಅದರಲ್ಲಿ ೩೦ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಜೊತೆಗೆ ೧೪ ಹುಲಿಗಳ ಸೆರೆ ಹಿಡಿದು ಚಿಕಿತ್ಸೆ ನೀಡಿ ರೇಡಿಯೋ ಕಾಲರ್ ಅಳವಡಿಸಿರುವ ಇವರ ವನ್ಯಜೀವಿ ಸಂರಕ್ಷಣೆಯ ಈ ಎಲ್ಲಾ ಕಾರ್ಯ ಸಾಧನೆಗಳನ್ನು ಗುರುತಿಸಿ, ಮೆಚ್ಚುಗೆ ವ್ಯಕ್ತಪಡಿಸಿರುವ ಸರ್ಕಾರ, ಅರಣ್ಯ ಇಲಾಖೆ ಶಿಫಾರಸಿನ ಮೇರೆಗೆ ಮುಖ್ಯಮಂತ್ರಿಗಳ ಪದಕ ನೀಡಿ ಗೌರವಿಸಿರುವುದು ಮಂಡ್ಯ ಜಿಲ್ಲೆಗೆ ಸಂದ ಗೌರವವೂ ಹೌದು.
ಮೈಸೂರು : ನಗರದ ಹೃದಯ ಭಾಗವಾದ ಕೆ.ಆರ್.ವೃತ್ತದಲ್ಲಿ ಗಂಧದಗುಡಿ ಫೌಂಡೇಶನ್ ಮತ್ತು ನಗರ ಸಂಚಾರ ಪೊಲೀಸ್ ಸಂಯುಕ್ತಾಶ್ರಯದಲ್ಲಿ ಸಂಕ್ರಾಂತಿ ಹಬ್ಬದ…
ಬೆಂಗಳೂರು : ಬ್ಯಾನರ್ ಅಳವಡಿಕೆ ಸಂಬಂಧಪಟ್ಟ ಬಳ್ಳಾರಿಯಲ್ಲಿ ನಡೆದ ಗಲಭೆ ಖಂಡಿಸಿ ಪಾದಯಾತ್ರೆ ನಡೆಸುವ ವಿಷಯದಲ್ಲಿ ಬಿಜೆಪಿಯೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.…
ಮೈಸೂರು: ವರ್ಕ್ ಫ್ರಂ ಹೋಂ ಕೆಲಸಕ್ಕೆ ಸೇರಿದ ಮಹಿಳೆ ನಂತರ ನಕಲಿ ಕಂಪೆನಿಯವರ ಮಾತನ್ನು ಕೇಳಿ ಷೇರು ಮಾರುಕಟ್ಟೆಯಲ್ಲಿ ಹಣ…
ಮೈಸೂರು : ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳವಾಡಿ ಹಾಗೂ ಕಡಕೊಳ ಬಳಿ ನಡೆದಿದೆ. ಮೊದಲನೇ…
ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ…
ಹನೂರು : ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನೋರ್ವ ಗಂಭೀರವಾಗಿ ಕೈಗೊಂಡಿರುವ…