Andolana originals

ಕೊಡಗಿನಲ್ಲಿಯೂ ಹೆಚ್ಚಿದ ಬಿಸಿಲಿನ ತಾಪಮಾನ

ಫ್ರೆಬ್ರವರಿಯಲ್ಲಿಯೆ 32 ಡಿಗ್ರಿ ಸೆಲ್ಸಿಯಸ್‌ ದಾಖಲು ; ಅಗತ್ಯ ಮುನ್ನೆಚ್ಚರಿಕೆಗೆ ತಜ್ಞರ ಸಲಹೆ 

ನವೀನ್ ಡಿಸೋಜ

ಮಡಿಕೇರಿ: ಬೇಸಿಗೆ ಆರಂಭಕ್ಕೂ ಮೊದಲೇ ಮಂಜಿನ ನಗರಿ ಮಡಿಕೇರಿಯಲ್ಲಿ ತಾಪಮಾನ ಏರಿಕೆ ಕಂಡಬರುತ್ತಿದೆ. ಫೆಬ್ರವರಿ ತಿಂಗಳ ೩ನೇ ವಾರದಲ್ಲಿಯೇ ಜಿಲ್ಲೆಯಲ್ಲಿ ೩೨ ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳ ಬಗ್ಗೆ ಆತಂಕ ಮೂಡಿಸಿದೆ.

ಮಡಿಕೇರಿ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆ ಸಾಮಾನ್ಯವಾಗಿ ಫೆಬ್ರವರಿ ಅಂತ್ಯದವರೆಗೆ ತಂಪಾದ ವಾತಾವರಣವಿದ್ದು, ಮಾರ್ಚ್ ಬಳಿಕ ಬಿಸಿಲು ಹೆಚ್ಚಾಗುತ್ತಾ ಹೋಗುತ್ತಿತ್ತು. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚಿನ ಧಗೆ ಕಂಡುಬರುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಫೆಬ್ರವರಿ ತಿಂಗಳಿನಿಂದಲೇ ಸುಡುವ ಬಿಸಿಲು ಕಾಣಿಸಿಕೊಳ್ಳುತ್ತಿದ್ದು, ಈ ಬಾರಿ ತಾಪಮಾನ ಈಗಾಗಲೇ ಗರಿಷ್ಠ ೩೨-೩೩ ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ.

ಕಳೆದ ಮುಂಗಾರು ಉತ್ತಮವಾಗಿತ್ತು ಮತ್ತು ದೀರ್ಘ ಕಾಲದ ಮಳೆಯಾಗಿತ್ತು. ಮುಂಗಾರಿನ ಬಳಿಕವೂ ಕೆಲವು ಚಂಡಮಾರುತ, ವಾಯು ಭಾರ ಕುಸಿತಗಳ ಪರಿಣಾಮ ಡಿಸೆಂಬರ್ ತಿಂಗಳವರೆಗೂ ಆಗೊಮ್ಮೆ ಈಗೊಮ್ಮೆ ಮಳೆಯಾಗುತ್ತಲೇ ಇತ್ತು. ಆದರೆ ಡಿಸೆಂಬರ್ ತಿಂಗಳಿನಲ್ಲಿ ಸೆಂಗಾಲ್ ಚಂಡಮಾರುತದ ಬಳಿಕ ಜಿಲ್ಲೆಯಲ್ಲಿ ಮಳೆ ಸುರಿಯಲಿಲ್ಲ. ಹೀಗಾಗಿ ಭೂಮಿಯಲ್ಲಿ ತೇವಾಂಶ ಕಡಿಮೆಯಾಗುತ್ತಿದ್ದು, ಹೆಚ್ಚಿನ ಶಾಖ ಕಂಡುಬರುತ್ತಿದೆ. ಜತೆಗೆ ಹವಾಮಾನ ವೈಪರೀತ್ಯದ ಪರಿಣಾಮದಿಂದಲೂ ಹೆಚ್ಚಿನ ಬಿಸಿಲು ಕಾಣಿಸಿಕೊಳ್ಳುತ್ತಿದ್ದು, ತಾಪಮಾನ ಏರಿಕೆಗೆ ಕಾರಣವಾಗುತ್ತಿದೆ ಎಂಬುದು ಹವಾಮಾನ ಇಲಾಖೆಯ ವಿಜ್ಞಾನಿಗಳ ಅಭಿಪ್ರಾಯವಾಗಿದೆ.

ಈ ಬಾರಿ ಪೂರ್ವ ಮುಂಗಾರು ಬೇಗನೆ ಆರಂಭವಾಗುವ ಸಾಧ್ಯತೆಯಿದ್ದು, ಮಾರ್ಚ್ ತಿಂಗಳಲ್ಲಿ ಒಂದೆರಡು ಮಳೆಯಾದರೆ ತಾಪಮಾನ ಕಡಿಮೆಯಾಗಲು ಸಹಕಾರಿಯಾಗಲಿದೆ. ಸೂಕ್ತ ಸಮಯಕ್ಕೆ ಮಳೆಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಭೂಮಿಯಲ್ಲಿನ ತೇವಾಂಶ ಮತ್ತಷ್ಟು ಕಡಿಮೆಯಾಗುವ ಪರಿಣಾಮ ಹೆಚ್ಚಿನ ತಾಪಮಾನ ಕಂಡುಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಮಡಿಕೇರಿಯ ಮಟ್ಟಿಗೆ ೩೩ ಡಿಗ್ರಿಗಿಂತಲೂ ಹೆಚ್ಚಿನ ತಾಪಮಾನ ಅಪಾಯಕಾರಿಯಾಗಿದ್ದು, ಜನರು ತಮ್ಮ ಮತ್ತು ಬೆಳೆಗಳ ರಕ್ಷಣೆಗೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ.

೨೦೨೪ರ ಏಪ್ರಿಲ್ ೪ರಂದು ಮಡಿಕೇರಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿತ್ತು. ಅಂದು ದಾಖಲಾದ ೩೫. ೨ ಡಿಗ್ರಿ ಸೆಲ್ಸಿಯಸ್ ತಾಪಮಾನ ಮಡಿಕೇರಿಯಲ್ಲಿ ದಾಖಲಾದ ಅತಿ ಹೆಚ್ಚಿನ ತಾಪಮಾನ ಎನಿಸಿಕೊಂಡಿದೆ. ಫೆಬ್ರವರಿ ತಿಂಗಳಲ್ಲಿ ಈ ಬಾರಿ ೩೩. ೪ ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಈ ಹಿಂದೆ ೧೯೮೧ ಮತ್ತು ೨೦೧೦ರಲ್ಲಿ ಫೆಬ್ರವರಿ ತಿಂಗಳಲ್ಲಿ ೩೫ ಡಿಗ್ರಿ ತಾಪಮಾನ ದಾಖಲಾಗಿತ್ತು.

ತಾಪಮಾನ ಹೆಚ್ಚಿರುವ ಸಂದರ್ಭ ಮಕ್ಕಳಲ್ಲಿ ವಾಂತಿ, ಅತಿಸಾರದಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಿರಿಯರಿಗೂ ತಾಪಮಾನ ಹೆಚ್ಚಳದಿಂದ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ ಎಂಬುದು ತಜ್ಞರ ಸಲಹೆಯಾಗಿದೆ.

ಬಿಸಿಲಿಗೆ ಹೀಗೆ ಮಾಡಿ
ಹೆಚ್ಚು ನೀರು ಕುಡಿಯುವುದು, ಒಆರ್‌ಎಸ್, ನಿಂಬೆ ಪಾನೀಯ, ಫ್ರೆಶ್ ಜ್ಯೂಸ್ ಕುಡಿಯುವುದು ಪ್ರಯಾಣದ ವೇಳೆ ನೀರು ಜತೆಗಿರಲಿ. ಹೆಚ್ಚು ಹಣ್ಣಿನ ಸೇವನೆ, ಹೆಚ್ಚಾಗಿ ಮನೆ ಒಳಗೆಯೇ(ಗಾಳಿ ಸಂಚಾರ ಹೆಚ್ಚಿರುವ ಕಡೆ) ಇರುವುದು, ತಿಳಿ ಬಣ್ಣದ, ಹತ್ತಿ ಬಟ್ಟೆಧರಿಸುವುದು, ಬಿಸಿಲಿನಿಂದ ತಲೆ ಭಾಗವನ್ನು ರಕ್ಷಿಸಿ (ಕೊಡೆ, ಟೋಪಿ ಬಳಸಿ) ಕಾಲಿಗೆ ಪಾದರಕ್ಷೆಗಳನ್ನು ಬಳಸಿ.

ಅತಿಯಾದ ಶಾಖದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು
ತಲೆ ಸುತ್ತುವುದು, ಪ್ರಜ್ಞೆ ತಪ್ಪುವುದು, ವಾಕರಿಕೆ ಅಥವಾ ವಾಂತಿಯಾಗುವುದು, ತಲೆ ನೋವು, ಅತಿಯಾದ ಬಾಯಾರಿಕೆ, ಏರುಗತಿಯ ಉಸಿರಾಟ ಮತ್ತು ಹೃದಯ ಬಡಿತ

ಈ ಬಾರಿ ಫೆಬ್ರವರಿ ತಿಂಗಳಿನಲ್ಲಿಯೇ ಹೆಚ್ಚಿನ ಬಿಸಿಲು ಕಾಣಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಒಂದೆರಡು ಬಾರಿ ಮಳೆಯಾಗದ ಹೊರತು ತಾಪಮಾನ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕೊಡಗಿನಲ್ಲಿ ಕಾಫಿ, ಅಡಕೆ, ಬಾಳೆಯಂತಹ ಬೆಳೆಗಳಿಗೆ ತುಂತುರು ನೀರಾವರಿ ಮತ್ತು ಬುಡವನ್ನು ತೇವವಾಗಿರುವಂತೆ ನೋಡಿಕೊಳ್ಳಲು ಕ್ರಮಗಳನ್ನು ಕೈಗೊಳ್ಳುವುದು ಉತ್ತಮ. -ಡಾ. ಸುಮಂತ್ ಕುಮಾರ್ ಜಿ. ವಿ. , ತಾಂತ್ರಿಕ ಅಧಿಕಾರಿ, ಹವಾಮಾನ ವಿಭಾಗ, ನಾಗನಹಳ್ಳಿ.

 

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

1 hour ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

1 hour ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

3 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

4 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

5 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

5 hours ago