Andolana originals

ಸುಗ್ಗಿಯ ಸೊಬಗಿನ ಸಂಕ್ರಾಂತಿ

ಸಾಲು ಸಾಲು ಹೊಸ ಹೂಗಳ ಚಲುವಿನ ಪರಿ

ದೇವು ಶಿರಮಳ್ಳಿ
ಎತ್ತೆತ್ತಲು ತೆನೆ ಚೆಲ್ಲಿ ಹಾಲ ಚಿಲಿಪಿಲಿ ಹರಿಸಿತು ಹಕ್ಕಿಯ ಮೇಳ ಕಣಕಣಸಲಿ ಬಂಗಾರ ಜಾಲ ಬೆರಗಾಗಿ ನಿಂತಿತೊ ಚಲಿಸದೆ ಕಾಲ – ಕೆ. ಎಸ್. ನಿಸಾರ್ ಅಹಮದ್

ಇಡೀ ಜಗತ್ತೇ ಇಂದು ಒಂದು ಹಳ್ಳಿಯಾಗಿರಲು ಪ್ರತಿ ಹಳ್ಳಿಯ ಸುಗ್ಗಿಯ ಸೊಬಗಿಂದು ಎಲ್ಲಿದೆ ? ಹಳ್ಳಿಗರ ಸುಗ್ಗಿಯ ಹಬ್ಬ ಮರೆಯಾಗಿ ಇಂದು ನಗರಿಗರ ಸಂಕ್ರಾಂತಿಯೇ ಆಗಿಬಿಟ್ಟಿದೆ. ಸಂಕ್ರಾಂತಿ ಎಂದರೆ ಡಿಜಿಟಲ್ ಶುಭಾಶಯಗಳ ವಿನಿಮಯ, ಬಣ್ಣದ ಬಟ್ಟೆಗಳ ಮೆರವಣಿಗೆ, ಪ್ಲಾಸ್ಟಿಕ್ ಪೊಟ್ಟಣದಲ್ಲಿ ಕಂಡ ಎಳ್ಳು ಬೆಲ್ಲ, ಹಳ್ಳಿಯಂತೆ ತೋರಲೊಂದು ತುಂಡು ಕಬ್ಬು. ಮಧ್ಯಾಹ್ನಕ್ಕೆ ಹಬ್ಬ ಮುಗಿದು ಒಂದು ಗಡದ್ದು ನಿದ್ದೆ.

ಸಂಕ್ರಾಂತಿ ಎಂದರೆ ಹಳ್ಳಿಗರ ಸುಗ್ಗಿ ಹಬ್ಬ, ಬಸವನ ಹಬ್ಬ – ಎತ್ತುಗಳ ಹಬ್ಬ, ಜಾನುವಾರುಗಳ ಹಬ್ಬ . “ನೇಗಿಲ ಹಿಡಿದು ಹೊಲದೊಳು ಹಾಡುತ ಉಳುವ ಯೋಗಿಯ ನೋಡಲ್ಲಿ” ಎಂಬ ಕುವೆಂಪು ಅವರ ಕವಿತೆಯ ಸಾಲೊಂದು ಕಿವಿಯ ತಾಗಲು ರೈತನೊಟ್ಟಿಗೆ ಎತ್ತುಗಳ ಚಿತ್ರವೊಂದು ನಮ್ಮ ಮನದಲಿ ಮೂಡದೆ ಹೋಗಲು ಸಾಧ್ಯವೆ? ಊರಿಗೊಂದು ಮಾರಮ್ಮನ ಗುಡಿಯಿದ್ದಂತೆ ಬಸವನ ಗುಡಿಯು ಎಲ್ಲೆಡೆಯುಂಟು. ಕೆಲವು ಊರುಗಳಲ್ಲಿ ಬಸವ -ಮಾರಮ್ಮ ಅಣ್ಣ – ತಂಗಿ ಎಂಬ ಪ್ರತೀತಿ ಇದೆ. ಬಸವನೆಂದರೆ ಎತ್ತುಗಳು, ರೈತರ ದೇವರು (ಬಸವನ ಗುಡಿ ಬದಲಾದ ಕಾಲದಲ್ಲಿ ಬಸವೇಶ್ವರ ದೇವಾಲಯಗಳು ಆಗಿಬಿಟ್ಟಿವೆ! ) ರೈತರ ಬದುಕಿನಲ್ಲಿ ಹಸು, ಎತ್ತುಗಳೆಂದರೆ ಅತ್ಯಮೂಲ್ಯ ಜೀವಗಳು. ಹಳ್ಳಿಗರ ಬಾಳ ಬಂಡಿ ನಡೆಸುವವರು ಎತ್ತು, ಹಸುಗಳೇ ಅಲ್ಲವೇ. ಹಸುಗಳಿಲ್ಲದೆ ಮಕ್ಕಳಿಗೆ ಹಾಲಿಲ್ಲ, ಎತ್ತುಗಳಿಲ್ಲದೆ ಹೊಲದ ಕಾಳಿಲ್ಲ.

ಸಂಕ್ರಾಂತಿ ಎಂದರೆ ಚಳಿಗಾಲದ ಸೊಬಗು, ಸೂರ್ಯ ಪಥ ಬದಲಿಸುತ್ತ ಬಂದ ಕಾಲದಲ್ಲಿ ಧರೆಯ ತುಂಬಾ ಮಂಜು ಮುಸುಕು. ಅವರೆ, ತೊಗರಿ, ಹುರುಳಿ, ತುಂಬೆ ಸಾಲು ಸಾಲು ಹೊಸ ಹೂಗಳ ಚಲುವಿನ ಪರಿ, ಹಕ್ಕಿ-ಪಿಕ್ಕಿಗಳ ಇಂಚರ. ಭುವಿಯ ಸೊಬಗ ನಾವು ಕಣ್ಣ ತೆರೆದು ನೋಡಿ ಸಂಭ್ರಮಿಸಬೇಕು.

ಭೂಮಿಯು ನಮ್ಮ ತಾಯಿ ತಂದೆಯು ಬಸವಣ್ಣ ಅವರಿತ್ತ ಸಿರಿಯ ನೋಡ ಬನ್ನಿ ಸುಗ್ಗಿ ಬಂದಿದೆ ಬನ್ನಿ ಹಿಗ್ಗ ತಂದಿದೆ ಬನ್ನಿ ಸಗ್ಗವಾಗಿದೆ ಭೂಮಿ ನೋಡ ಬನ್ನಿ ನಮ್ಮ ಜನಪದರು ಭೂಮಿಯು ತಾಯಿ, ತಂದೆ ಬಸವಣ್ಣ. ಇವರಿತ್ತ ಸಿರಿಯೇ ಸುಗ್ಗಿಯಾಗಿದೆ ಎಂದು ಹಾಡುತ್ತಾರೆ. ಸುಗ್ಗಿಯಿಂದ ಭೂಮಿ ಸಗ್ಗವಾಗಿದೆ.

ಕೊಟ್ಟಿಗೆಯ ತುಂಬಾ ಕರುಗಳು ಅಂಬಾ ಎನ್ನಲು ಅದಕೂ ಮಿಗಿಲು ಸಿರಿ ಯಾವುದು? ಹಟ್ಟಿಯ ಬಡತನವ ತೊಡೆದು ಬಿಡುವ ಹಸುಗಳೇ ಹಳ್ಳಿಗರ ಸಂಪತ್ತು. ವರುಷವಿಡೀ ಬೆವರ ಹರಿಸಿ ಗಳಿಸಿದ ಶ್ರಮದ ಫಸಲು ಮನೆಯಲ್ಲಿ ತುಂಬಿರಲು ಮನವು ತುಂಬಿ ಬರದೆ. ಬೆವರ ಹನಿಯೇ ಹಸಿರ ಹಬ್ಬವಾಗಿ ಜನರಿಗೆ ಉಸಿರು ಬಂದಂತಾಗಿದೆ.

ಕನಕಪುರ ಭಾಗದಲ್ಲಿ ಸಂಕ್ರಾಂತಿ ಹಬ್ಬ ಕ್ಯಾಲೆಂಡರ್ ತೋರುವ ಕೆಂಪು ದಿನದಂದು ಅಲ್ಲ. ಈ ದಿನದಂದು ಅವರೆ ಕಾಳು ಒಕ್ಕಣೆ ಮುಗಿಯದು, ಹಬ್ಬವೆಂದರೆ ಎಲ್ಲಾ ಬೆಳೆಗಳ ಒಕ್ಕಣೆ ಮುಗಿದು ದನಕರುಗಳು ಬೆಳೆ ಇಲ್ಲದ ಹೊಲದಲ್ಲಿ ಒಂದಷ್ಟು ದಿನಗಳು ಕಾಲಾಡಿ ಬರಬೇಕು. ಹಾಗಾಗಿ ಎಲ್ಲರೂ ಜನವರಿ ತಿಂಗಳಲ್ಲಿ ಸಂಕ್ರಾಂತಿ ಆಚರಿಸಿದರೆ ಇಲ್ಲಿಯ ಜನ ಫೆಬ್ರವರಿಯಲ್ಲಿ ಸುಗ್ಗಿ ಸಂಕ್ರಾಂತಿ ಆಚರಿಸು ತ್ತಾರೆ. ಫೆಬ್ರವರಿಯಲ್ಲಿ ಕೂಡ ಬುಧವಾರದಂದೇ ಸಂಕ್ರಾಂತಿ ಹಬ್ಬದ ವಿಶೇಷ ಆಚರಣೆ. ಸೋಮವಾರ ರೈತರು ಆರು ಕಟ್ಟುವುದಿಲ್ಲ. ಅಂದು ಬಸವನಿಗೆ ವಿಶ್ರಾಂತಿಯ ದಿನ, ಪೂಜಿಸಲ್ಪಡುವ ದಿನ. ಸೋಮವಾರ ದಂದು ಬಸವನ ಗುಡಿಯಲ್ಲಿ ಊರ ಜನರೆಲ್ಲ ಒಟ್ಟಾಗಿ ಪೂಜೆಯ ಸಲ್ಲಿಸುತ್ತಾರೆ. ಅನಂತರ ಬರುವ ಬುಧವಾರ ದಂದೇ ಸಂಕ್ರಾಂತಿ ಆಚರಿಸುವುದು ವಾಡಿಕೆ. ಸಂಕ್ರಾಂತಿಯನ್ನು ‘ಸಂಕ್ರಣ್ಣ ಬಂದ’ ಎಂದೇ ಕರೆಯುವ ಇಲ್ಲಿಯ ಜನರು ತಮ್ಮ ಮನೆಯ ಹಸು, ಕರು, ಎತ್ತುಗಳನ್ನು ಊರಾಚೆ, ಮಣ್ಣಿನ ಗುಡಿ ಕಟ್ಟಿದ ಬಯಲಲ್ಲಿ ಸಾಲು ಸಾಲು ನಿಲ್ಲಿಸಿ ಪೂಜಿಸುತ್ತಾರೆ. ಸುಣ್ಣ, ಕೆಮ್ಮಣ್ಣು ಮೆತ್ತಿಕೊಂಡು ನಿಂತ ಗುಡಿಗೆ ಚೆಂದದೊಂದು ಮಣ್ಣಿನ ಹಣತೆ ಇರಿಸಿ, ಕಾರೆಮುಳ್ಳು, ಉಗನಿ ಹೂವು, ತುಂಬೆ ಹೂವಿನಿಂದ ಅಲಂಕರಿಸುತ್ತಾರೆ.

ಒಂದೆಡೆ ಕಲೆತ ದನ, ಎತ್ತುಗಳಿಗೆ ಧೂಪ ಹಾಕಿ ಉನ್ನಿ ಸಮೇತ ಬೇಯಿಸಿದ ಅನ್ನದಿಂದ ದೃಷ್ಟಿ ನಿವಾಳಿಸುತ್ತಾರೆ. ಪೂಜಿಸಲು ಬಂದು ಧೂಪ ಹಿಡಿದ ಕೈ ಇಂಡೆಚ್ಚಲೋ (ದನಗಳ ಹಿಂಡು ಹೆಚ್ಚಲಿ) ಎಂದು ಕೂಗಿ ಹರಸುತ್ತದೆ. ಮತ್ತೊಂದು ಕೈ ಪಂಗಳೋ (ಹಾಲ ಕುಂಭಗಳು ಉಕ್ಕಿ ಹರಿಯಲಿ) ಎಂದು ನಮಿಸುತ್ತದೆ. ಊರ ದನಗಳೆಲ್ಲ ಅಂದು ವಂದಿಸಲ್ಪಡುವ ಗಳಿಗೆಯೇ ಸುಗ್ಗಿಯ ಹಬ್ಬವಾಗಿ ಸಂಕ್ರಾಂತಿ ಆಗಿದೆ. ಹೀಗೆ ಪೂಜೆಗೊಂಡ ದನಕರು, ಎತ್ತುಗಳು ಸಂಜೆ ಕಿಚ್ಚಾದು ಮನೆ ಮುಂದಣ ಒನಕೆ, ಕೆಂಪು ನೀರು (ರತ್ನೀರು- ದೃಷ್ಟಿ ನಿವಾಳಿಸುವ ನೀರು, ಕೆಲವು ಮನೆಗಳಲ್ಲಿ ಕೋಳಿಗಳ ರಕ್ತವನ್ನು ಎತ್ತುಗಳ ಕಾಲಿಗೆ ಹಾಕುತ್ತಾರೆ) ದಾಟಿ ಮನೆಯಂಗಳಕ್ಕೆ ಬರುತ್ತವೆ. ಹಾಗಾಗಿ ಸುಗ್ಗಿ ಹಬ್ಬವೆಂದರೆ ಇಲ್ಲಿ ದನಕರು – ಎತ್ತುಗಳ ಹಬ್ಬ. ರೈತರ ಹಬ್ಬ

ಪಕ್ಕದ ತಮಿಳುನಾಡಿನ ಪೊಂಗಲ್ ಪ್ರಭಾವವೋ ಇಲ್ಲ, ಇಲ್ಲಿನ ಜನರ ಪದ್ಧತಿಯೋ ಜಲ್ಲಿಕಟ್ಟು ನೆನಪಿಸುವ ಕ್ರೀಡೆಯೂ ಜರುಗುತ್ತದೆ. ಊರ ಮಧ್ಯೆದಲ್ಲಿ ಹಸು, ಕರುಗಳ ಜೊತೆ ಜನರೂ ಓಡುತ್ತಾ ಸಂಭ್ರಮಿಸುತ್ತಾರೆ. ರಾಜ್ಯದ ಬಹು ಭಾಗಗಳಲ್ಲಿ ಸಾಮಾನ್ಯವಾಗಿ ಹೊಲಗಳಲ್ಲಿ ಭತ್ತ, ರಾಗಿ, ಜೋಳ, ಅವರೆ, ತೊಗರಿ, ಹುರುಳಿ ಫಸಲು ರಾಶಿಗೆ ಪೂಜಿಸಿ, ಹೆಚ್ಚೊಕ್ಕ ಲಾಗಲಿ ಎಂದು ಹರಸಿ, ಹಾಡಿ, ಕುಣಿದ ಹಬ್ಬ ಸುಗ್ಗಿಯಾಗಿದೆ. ವರುಷಕೊಮ್ಮೆ ಬರುವ ಸಂಕ್ರಮಣದ ಹಬ್ಬ ಎಳ್ಳು ಬೆಲ್ಲದಂತಹ ಒಳಿತನ್ನೇ ತಾರಲಿ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago