Andolana originals

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ 

ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಸಹಾಯವಾಣಿಗೆ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದ್ದು, ಮಕ್ಕಳ ಅಸುರಕ್ಷತೆ ಹೆಚ್ಚುತ್ತಿರುವ ಆತಂಕಕಾರಿ ಚಿತ್ರಣ ಹೊರಬಿದ್ದಿದೆ. ಸಹಾಯವಾಣಿ ಘಟಕವು ಸಾಕಷ್ಟು ಪ್ರಕರಣಗಳನ್ನು ವಿಲೇವಾರಿ ಮಾಡಿರುವುದು ಸ್ವಲ್ಪ ಸಮಾಧಾನಕರ ಸಂಗತಿ.

ಕೇಂದ್ರ ಸರ್ಕಾರದ ಶೇ.೧೦೦ರಷ್ಟು ಆರ್ಥಿಕ ನೆರವಿ ನೊಂದಿಗೆ ರಾಜ್ಯ ಸರ್ಕಾರವು ೨೦೨೩ರ ಸೆಪ್ಟೆಂಬರ್‌ನಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲೂ ಮಕ್ಕಳ ಸಹಾಯವಾಣಿ ಘಟಕ ಆರಂಭಿಸಿತು. ಮೈಸೂರು ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಘಟಕಕ್ಕೆ ಆರಂಭಿಕ ವರ್ಷದಲ್ಲಿ ಕಡಿಮೆ ಪ್ರಮಾಣದಲ್ಲಿ ಕರೆಗಳು ಬಂದಿದ್ದರೂ, ಬಳಿಕ ದೂರುಗಳ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿವೆ. ಕಳೆದ ಮೂರು ವರ್ಷಗಳಲ್ಲಿ ಸಹಾಯವಾಣಿಗೆ ಒಟ್ಟು ೨,೪೭೧ ಕರೆಗಳು ಬಂದಿದ್ದು, ಈ ಪೈಕಿ ೨,೩೨೧ ಕರೆಗಳಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಸಮಸ್ಯೆಗಳನ್ನು ಪರಿಹರಿಸಿದ್ದಾರೆ.

ಬಾಲ್ಯವಿವಾಹಗಳೇ ಹೆಚ್ಚು: ಸಹಾಯವಾಣಿಗೆ ಬಂದಿರುವ ಕರೆಗಳಲ್ಲಿ ಬಾಲ್ಯವಿವಾಹಕ್ಕೆ ಸಂಬಂಧಪಟ್ಟಿದ್ದವೇ ಹೆಚ್ಚು ಎನ್ನುವುದು ಕಳವಳಕ್ಕೆ ಕಾರಣವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ೬೯೧ ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಶೇ.೯೮ರಷ್ಟು ಪ್ರಕರಣಗಳಲ್ಲಿ ಬಾಲಕಿಯರೇ ಅಪ್ರಾಪ್ತ ವಯಸ್ಸಿನಲ್ಲಿ ವಿವಾಹದ ಬಂಧನಕ್ಕೆ ಒಳಗಾಗಿರುವುದು ಆತಂಕ ಮೂಡಿಸಿದೆ.

ಹೆಣ್ಣುಮಕ್ಕಳಿಗೆ ೧೮ ವರ್ಷ ಹಾಗೂ ಗಂಡುಮಕ್ಕಳಿಗೆ ೨೧ ವರ್ಷ ಪೂರ್ಣಗೊಳ್ಳುವ ಮೊದಲು ವಿವಾಹವಾಡುವುದು ಕಾನೂನುಬಾಹಿರವಾಗಿದ್ದರೂ, ಗ್ರಾಮೀಣ ಭಾಗಗಳಲ್ಲಿ ಈ ಪದ್ಧತಿ ಸಂಪೂರ್ಣವಾಗಿ ನಿಂತಿಲ್ಲ.

ಭಿಕ್ಷಾಟನೆ, ನಾಪತ್ತೆ ಪ್ರಕರಣಗಳಲ್ಲೂ ಹೆಚ್ಚಳ: ಮಕ್ಕಳ ಸಹಾಯವಾಣಿಯ ಮೂಲಕ ಕಳೆದ ಮೂರು ವರ್ಷಗಳಲ್ಲಿ ಭಿಕ್ಷಾಟನೆ ಮಾಡುತ್ತಿದ್ದ ೧೬೮ ಮಕ್ಕಳನ್ನು ರಕ್ಷಿಸಲಾಗಿದೆ. ಇದೇ ಅವಽಯಲ್ಲಿ ನಾಪತ್ತೆಯಾಗಿದ್ದ ೧೧೪ ಮಕ್ಕಳನ್ನು ಪತ್ತೆ ಮಾಡಿ ಪಾಲಕರ ವಶಕ್ಕೆ ಒಪ್ಪಿಸಲಾಗಿದೆ. ೨೦೨೫-೨೬ನೇ ಸಾಲಿನಲ್ಲಿ ಮಾತ್ರ ೧೧೮ ಭಿಕ್ಷಾಟನೆ ಪ್ರಕರಣಗಳು ಹಾಗೂ ೬೮ ಮಕ್ಕಳ ಪತ್ತೆ ಪ್ರಕರಣಗಳು ದಾಖಲಾಗಿವೆ.

ಕರೆ ಬಂದ ತಕ್ಷಣ ರಕ್ಷಣಾ ಕಾರ್ಯ: ಸಂಕಷ್ಟ ಪರಿಸ್ಥಿತಿಯಲ್ಲಿರುವ ಮಕ್ಕಳು ೧೦೯೮ ಸಹಾಯವಾಣಿಗೆ ಕರೆ ಮಾಡಬಹುದು. ಇದು ದಿನದ ೨೪ ಗಂಟೆಗಳೂ ಕಾರ್ಯನಿರ್ವಹಿಸುತ್ತದೆ. ಮಾಹಿತಿ ಬಂದ ತಕ್ಷಣ ಜಿಲ್ಲಾ ಮಕ್ಕಳ ಸಹಾಯವಾಣಿ ಘಟಕ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪಂಚಾಯಿತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಾರೆ. ರಕ್ಷಿಸಲ್ಪಟ್ಟ ಮಕ್ಕಳಿಗೆ ಆಶ್ರಯ, ಪುನರ್ವಸತಿ ಹಾಗೂ ಅಗತ್ಯ ಸಲಹಾ ಸೇವೆಗಳನ್ನೂ ಒದಗಿಸಲಾಗುತ್ತಿದೆ. ಪಾಲನೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳಿಗಾಗಿ ವಸತಿ ಸೌಲಭ್ಯಗಳನ್ನೂ ಕಲ್ಪಿಸಲಾಗುತ್ತಿದೆ.

” ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಯ ಕುರಿತು ಜಾಗೃತಿ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಹೀಗಾಗಿ ಮಕ್ಕಳ ಸಹಾಯವಾಣಿಗೆ ಹೆಚ್ಚಿನ ಕರೆಗಳು ಬರುತ್ತಿವೆ. ಸರ್ಕಾರ ಸುತ್ತೋಲೆಯ ಪ್ರಕಾರ ಸರ್ಕಾರಿ ಸಂಸ್ಥೆಗಳು, ಶಾಲಾ ಕಾಲೇಜು, ಕಟ್ಟಡಗಳಲ್ಲಿ ಮಕ್ಕಳ ಸಹಾಯವಾಣಿಯ ಸಂಖ್ಯೆ ಹಾಕಲಾಗಿದೆ. ಇದು ಮಕ್ಕಳಿಗೆ ತಲುಪಿದೆ. ಇದರಿಂದ ಹೆಚ್ಚಿನ ಕರೆಗಳು ಬರುತ್ತಿದ್ದು, ೨೪ ಗಂಟೆಯೊಳಗೆ ಕರೆಗಳಿಗೆ ಸ್ಪಂದಿಸುವ ಕೆಲಸವಾಗುತ್ತಿದೆ.”

– ಎನ್.ಟಿ.ಯೋಗೇಶ್, ಮಕ್ಕಳ ರಕ್ಷಣಾಧಿಕಾರಿ, ಮೈಸೂರು ಜಿಲ್ಲೆ 

” ರಜೆ ಅವಧಿಯಲ್ಲಿ ಬಾಲಕಾರ್ಮಿಕತೆ ಸವಾಲು ಪರೀಕ್ಷೆಗಳು ಮುಗಿದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಪ್ರಾಪ್ತರನ್ನು ಕೆಲಸಕ್ಕೆ ಬಳಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಬಡ ಕುಟುಂಬಗಳ ಮಕ್ಕಳು ಹೆತ್ತವರಿಗೆ ನೆರವಾಗಲು ಕೆಲಸ ಮಾಡುತ್ತಿರುವುದೂ ಉಂಟು. ೧೪ ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯೋಗದಲ್ಲಿ ತೊಡಗಿಸುವುದು ಹಾಗೂ ೧೪ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಉದ್ಯಮಗಳಲ್ಲಿ ದುಡಿಸಿಕೊಳ್ಳುವುದು ಕಾನೂನುಬಾಹಿರ. ಆದರೂ, ಪಾಲಕರ ಅರಿವಿನ ಕೊರತೆ ಮತ್ತು ಬಡತನದ ಕಾರಣದಿಂದ ಬಾಲಕಾರ್ಮಿಕ ವಿರೋಧಿ ಕಾನೂನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವುದು ಕಷ್ಟಸಾಧ್ಯವಾಗಿದೆ”

ಮಕ್ಕಳ ರಕ್ಷಣೆಗೆ ವಿವಿಧ ಕ್ರಮ: ಮೈಸೂರು ಜಿಲ್ಲೆಯಲ್ಲಿ ಮಕ್ಕಳ ಸುರಕ್ಷತೆಗಾಗಿ ಶಿಕ್ಷಣ, ಪೊಲೀಸ್, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ನಿರ್ದೇಶನಾಲಯ ಸೇರಿದಂತೆ ಹಲವು ಇಲಾಖೆಗಳ ಸಮನ್ವಯದಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಅನುಷ್ಠಾನಗೊಳಿಸಲಾಗಿದೆ. ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್‌ಗಳು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಕಡ್ಡಾಯಗೊಳಿಸಲಾಗಿದೆ. ದಾಖಲಾಗುವ ದೂರುಗಳನ್ನು ಮಕ್ಕಳ ಸುರಕ್ಷತಾ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದೆ. ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕ ಮಾಡುವಾಗ ಪೊಲೀಸ್ ಪರಿಶೀಲನಾ ವರದಿ ಕಡ್ಡಾಯಗೊಳಿಸಲಾಗಿದೆ.

 

 

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

14 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

17 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

18 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

19 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

20 hours ago