Mysore
21
overcast clouds

Social Media

ಮಂಗಳವಾರ, 15 ಸೆಪ್ಟೆಂಬರ್ 2026
Light
Dark

ವಿರಾಜಪೇಟೆ ತಾಲ್ಲೂಕು ಆಸ್ಪತ್ರೆ ಶೀಘ್ರ ಮೇಲ್ದರ್ಜೆಗೆ

ನವೀನ್ ಡಿಸೋಜ

ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ಸಾಧ್ಯತೆ

ಮಡಿಕೇರಿ: ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ದಕ್ಷಿಣ ಕೊಡಗಿನ ಜನಸಾಮಾನ್ಯರಿಗೆ ಅನುಕೂಲವಾಗಲಿದೆ.

ವಿರಾಜಪೇಟೆ ಆಸ್ಪತ್ರೆಗೆ ನಿತ್ಯ ೫೦೦ರಿಂದ ೬೦೦ ಮಂದಿ ಹೊರ ರೋಗಿಗಳು ಭೇಟಿ ನೀಡುತ್ತಿದ್ದು, ಈ ಸಂಖ್ಯೆಗೆ ಈಗಿರುವ ಆಸ್ಪತ್ರೆಯಲ್ಲಿನ ಸೌಲಭ್ಯಗಳು ಸಾಲುತ್ತಿರಲಿಲ್ಲ. ಹೀಗಾಗಿ ಇಲ್ಲಿನ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂಬ ಬೇಡಿಕೆ ಹಿಂದಿನಿಂದಲೂ ಇತ್ತು. ಈ ಬಾರಿ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ಪ್ರಯತ್ನದಿಂದ ಅದು ಸಾಕಾರ ಗೊಂಡಿದೆ.

ಆಸ್ಪತ್ರೆಯ ಸಾಮರ್ಥ್ಯವನ್ನು ೪೦೦ ಬೆಡ್ಗಳಿಗೆ ಹೆಚ್ಚಿಸುವುದರೊಂದಿಗೆ ಹೆಚ್ಚಿನ ವೈದ್ಯಕೀಯ ಸೌಲಭ್ಯಗಳನ್ನು ನೀಡಲು ಸರ್ಕಾರ ಸಮ್ಮತಿಸಿ ಈ ಹಿಂದಿನ ಬಜೆಟ್‌ನಲ್ಲಿ ಘೋಷಿಸಿತ್ತು. ಇದೀಗ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿ ಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.ದಕ್ಷಿಣ ಕೊಡಗಿನ ವಿರಾಜಪೇಟೆ, ಪೊನ್ನಂಪೇಟೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಾಡಿಗಳಿವೆ.

ಗಿರಿಜನರು, ಬುಡಕಟ್ಟು ಸಮುದಾಯಗಳ ಸಾವಿರಾರು ಮಂದಿ ಈ ವ್ಯಾಪ್ತಿಯ ಸಣ್ಣಸಣ್ಣ ಮನೆ, ಗುಡಿಸಲು ಗಳಲ್ಲಿ ವಾಸವಿದ್ದಾರೆ. ಜೊತೆಗೆ ಕಾಫಿ ತೋಟದ ಕಾರ್ಮಿಕರ ಸಂಖ್ಯೆಯೂ ಈ ಭಾಗದಲ್ಲಿ ಹೆಚ್ಚಾಗಿದೆ. ಬಹುತೇಕ ಜನರು ಆರೋಗ್ಯ ಸೇವೆಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ಅವಲಂಬಿಸಿದ್ದಾರೆ. ಈಗ ಸರ್ಕಾರ ವಿರಾಜಪೇಟೆ ಆಸ್ಪತ್ರೆ ಯನ್ನು ಮೇಲ್ದರ್ಜೆಗೇರಿಸುವುದರಿಂದ ಮತ್ತಷ್ಟು ಅನುಕೂಲವಾಗಲಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಸಿಗುವ ಬಹುತೇಕ ಆರೋಗ್ಯಸೇವೆ ವಿರಾಜಪೇಟೆಯಲ್ಲಿಯೇ ಲಭ್ಯವಾಗಲಿದ್ದು, ಸಾವಿರಾರು ಮಂದಿ ಇದರ ಅನುಕೂಲ ಪಡೆಯಲಿದ್ದಾರೆ.ಸ್ಕ್ಯಾನಿಂಗ್ ಸೇವೆ, ಹೃದ್ರೋಗ ಘಟಕ, ರಕ್ತನಿಧಿ ಕೇಂದ್ರ, ಐಸಿಯು ಘಟಕ ಹಾಗೂ ಡಯಾಲಿಸಿಸ್ ಘಟಕವನ್ನೂ ಮೇಲ್ದರ್ಜೆಗೆ ಏರಿಸಬೇಕಾಗಿದ್ದು, ಒಟ್ಟಿನಲ್ಲಿ ೪೦೦ ಬೆಡ್‌ಗಳ ಸಾಮರ್ಥ್ಯದ ಆಸ್ಪತ್ರೆ ಕಾರ್ಯಾರಂಭ ಮಾಡಿದಲ್ಲಿ ಈ ವ್ಯಾಪ್ತಿಯ ಜನರಿಗೆ ಅನುಕೂಲವಾಗಲಿದೆ.

” ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ೪೦೦ ಹಾಸಿಗೆಗಳುಳ್ಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸರ್ಕಾರದ ಅನುಮೋದನೆ ದೊರೆತಿದೆ. ಆಸ್ಪತ್ರೆಯ ಮೊದಲ ಹಂತದ ಕಾಮಗಾರಿಗೆ ೯೫.೦೬ ಕೋಟಿ ರೂ. ಅನುದಾನ ಬಿಡುಗಡೆಯಾಗಲಿದ್ದು, ಮೊದಲ ಹಂತದಲ್ಲಿ ೨೫೦ ಹಾಸಿಗೆಗಳುಳ್ಳ ಆಸ್ಪತ್ರೆಯ ಕಾಮಗಾರಿ ಶೀಘ್ರ ಆರಂಭವಾಗಲಿದೆ. ನವೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗುವುದು.”

-ಎ.ಎಸ್.ಪೊನ್ನಣ್ಣ, ವಿರಾಜಪೇಟೆ ಶಾಸಕ

Tags:
error: Content is protected !!