Andolana originals

ಅಪ್ಪನ ನಾಯಕತ್ವದ ನೊಗ ಡಾ.ಯತೀಂದ್ರ ಹೆಗಲಿಗೆ?

ಕೆ.ಬಿ.ರಮೇಶನಾಯಕ

ಮೈಸೂರು: ಡಿ.ದೇವರಾಜ ಅರಸು ನಂತರ ಹಿಂದುಳಿದ ವರ್ಗಗಳ ಪಾಲಿಗೆ ಅಗ್ರನಾಯಕ ಅನಿಸಿಕೊಂಡಿರುವ ಸಿದ್ದರಾಮಯ್ಯ ಅವರು ಸುದೀರ್ಘ ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿ ಅಧಿಕಾರದ ಗದ್ದಿಗೆಯಿಂದ ಹೊರನಡೆದಿದ್ದು, ಇದೀಗ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅಪ್ಪನ ನಾಯಕತ್ವದ ನೊಗ ಹೊರಲು ಸಜ್ಜಾಗಿದ್ದಾರೆ.

ಹಳೆ ಮೈಸೂರು ಪ್ರಾಂತ್ಯದಲ್ಲಿ ಹಿಂದುಳಿದ ವರ್ಗಗಳು ಹಾಗೂ ತಮ್ಮನ್ನು ನಂಬಿಕೊಂಡು ರಾಜಕಾರಣ ಮಾಡುವ ಅಸಂಖ್ಯಾತ ಬೆಂಬಲಿಗರ ಹಿತ ಕಾಯುವ ಅನಿವಾರ್ಯತೆ ಇರುವ ಕಾರಣದಿಂದಾಗಿ ಸಿದ್ದರಾಮಯ್ಯರ ನಾಯಕತ್ವದ ಜವಾಬ್ದಾರಿ ಯತೀಂದ್ರರ ಹೆಗಲಿಗೇರಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿರುವ ಡಾ.ಯತೀಂದ್ರ ಅವರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಕೊಡಿಸುವ ಮೂಲಕ ಹಲವು ವರ್ಷಗಳಿಂದ ಜಿಲ್ಲೆಯ ರಾಜಕಾರಣದ ಮೇಲೆ ತಮಗಿರುವ ಹಿಡಿತ ಕೈತಪ್ಪದಂತೆ ನೋಡಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

೨೦೧೩ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು ತಾವು ಪ್ರತಿನಿಧಿಸಿದ್ದ ವರುಣ ಕ್ಷೇತ್ರದ ಹೊಣೆಯನ್ನು ತಮ್ಮ ಹಿರಿಯ ಪುತ್ರ ರಾಕೇಶ್ಗೆ ವಹಿಸಿದ್ದರು. ಆದರೆ, ೨೦೧೬ರ ಜುಲೈ ೩೦ರಂದು ವಿದೇಶಕ್ಕೆ ತೆರಳಿದ್ದ ರಾಕೇಶ್ ಅಕಾಲಿಕ ಮರಣಕ್ಕೀಡಾಗಿದ್ದರು. ಹೀಗಾಗಿ, ವೈದ್ಯ ವೃತಿ ಮಾಡಿಕೊಂಡು ರಾಜಕೀಯದಿಂದ ದೂರ ಉಳಿದಿದ್ದ ಡಾ.ಯತೀಂದ್ರ ಅವರು ರಾಜಕೀಯ ಪ್ರವೇಶ ಮಾಡಿ ವರುಣ ಕ್ಷೇತ್ರದ ಜವಾಬ್ದಾರಿಹೊತ್ತರು. ತಂದೆ ಇಡೀ ರಾಜ್ಯದ ಕೆಲಸಗಳನ್ನು ಮಾಡುತ್ತಿದ್ದರೆ, ವರುಣ ಸೇರಿದಂತೆ ಮೈಸೂರು ಜಿಲ್ಲೆಯ ಆಗು-ಹೋಗುಗಳನ್ನು ನೋಡಿಕೊಳ್ಳಲು ಆರಂಭಿಸಿದರು.

ಅಧಿಕೃತವಾಗಿ ಅಧಿಕಾರಿಗಳ ಸಭೆ ನಡೆಸಲು ಸಂವಿಧಾನಬದ್ಧ ಅಧಿಕಾರ ಅವಶ್ಯವಿರುವುದರಿಂದ ಸಿದ್ದರಾಮಯ್ಯ ಅವರು, ಯತೀಂದ್ರರನ್ನು ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ತಮ್ಮ ಉತ್ತರಾಧಿಕಾರಿ ಎನ್ನುವಂತೆ ಮುನ್ನೆಲೆಗೆ ತಂದರು. ಹಾಗಾಗಿಯೇ, ೨೦೧೮ರ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಯತೀಂದ್ರ ಮೊದಲ ಬಾರಿಗೆ ಗೆಲುವು ಸಾಧಿಸಿ, ತಂದೆ ಸಿದ್ದರಾಮಯ್ಯರೊಂದಿಗೆ ವಿಧಾನಸಭೆಯನ್ನು ಪ್ರವೇಶ ಮಾಡಿದ್ದರು. ತಂದೆಗಾಗಿ ಕ್ಷೇತ್ರ ತ್ಯಾಗ: ೨೦೨೩ರ ಚುನಾವಣೆಯಲ್ಲಿ ಯತೀಂದ್ರ ಅವರು ತಂದೆಗಾಗಿ ವರುಣ ಕ್ಷೇತ್ರವನ್ನು ತ್ಯಾಗ ಮಾಡಿದ್ದರಲ್ಲದೆ, ಅವರ ಗೆಲುವಿಗಾಗಿ ಶ್ರಮಿಸಿದ್ದರು.

ಬಳಿಕ ಯತೀಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವ ಮೂಲಕ ಅಽಕಾರಯುತ ಸ್ಥಾನವನ್ನು ಒದಗಿಸಲಾಗಿತ್ತು. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಅವರಿಗೆ ಮಂತ್ರಿ ಸ್ಥಾನ ನೀಡುವ ಮೂಲಕ ಸಿದ್ದರಾಮಯ್ಯ ಅವರನ್ನು ಸಮಾಧಾನಪಡಿಸುವ ಕೆಲಸ ಮಾಡಲಾಗಿದೆ.

ಸಿದ್ದರಾಮಯ್ಯ ಕುಟುಂಬಕ್ಕೆ ಅದೃಷ್ಟದ ಕ್ಷೇತ್ರ ವರುಣ: ೨೦೦೮ರಲ್ಲಿ ಹೊಸದಾಗಿ ರಚನೆಯಾದ ವರುಣ ಕ್ಷೇತ್ರ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಅದೃಷ್ಟದ ಕ್ಷೇತ್ರವಾಗಿದೆ. ೨೦೦೮ರಲ್ಲಿ ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ವರುಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯಅವರು ೨೦೦೯ರಲ್ಲಿ ವಿರೋಧ ಪಕ್ಷದ ನಾಯಕರಾದರೆ, ೨೦೧೩ರಲ್ಲಿ ಮುಖ್ಯಮಂತ್ರಿಯಾದರು. ೨೦೧೮ರಲ್ಲಿ ಸಿದ್ದರಾಮಯ್ಯರು ಬಾದಾಮಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೆ, ವರುಣದಲ್ಲಿ ಪುತ್ರ ಡಾ.ಯತೀಂದ್ರ ಗೆಲುವು ಸಾಧಿಸಿದ್ದರು. ೨೦೨೩ರಲ್ಲಿ ಸಿದ್ದರಾಮಯ್ಯ ಅವರು ಸೂಕ್ತ ಕ್ಷೇತ್ರಕ್ಕಾಗಿ ಹುಡುಕಾಡುತ್ತಿದ್ದಾಗ ಡಾ.ಯತೀಂದ್ರ ತಂದೆಗೆ ವರುಣ ಕ್ಷೇತ್ರ ಬಿಟ್ಟುಕೊಟ್ಟರು. ಹೀಗಾಗಿ ಮರಳಿ ವರುಣದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಬಳಿಕ ಡಿ.ದೇವರಾಜ ಅರಸು ಬಳಿಕ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಬರೆದರು. ಈಗ ವರುಣ ಕ್ಷೇತ್ರದಿಂದಲೇ ರಾಜಕೀಯ ಪ್ರವೇಶ ಮಾಡಿದ್ದ ಯತೀಂದ್ರ ಅವರಿಗೂ ಸಚಿವ ಸ್ಥಾನ ಒಲಿದಿದೆ.

ಜಿಲ್ಲೆಯ ರಾಜಕಾರಣದ ಮೇಲೆ ಹಿಡಿತ: 

ಮೈಸೂರು ಜಿಲ್ಲೆಯ ರಾಜಕಾರಣ ಸಿದ್ದರಾಮಯ್ಯ ಅವರ ಹಿಡಿತದಲ್ಲಿರುತ್ತದೆ. ಸಿದ್ದರಾಮಯ್ಯ ಅವರ ಬದಲಾವಣೆಯಿಂದ ಕೊಂಚ ವಿಚಲಿತರಾಗಿದ್ದ ಅಧಿಕಾರಿ ವರ್ಗ, ಬೆಂಬಲಿಗರು ಈಗ ನಿರುಮ್ಮಳರಾಗಿದ್ದಾರೆ. ಸಿದ್ದರಾಮಯ್ಯ ಅವರು ಮಾಜಿಯಾದರೂ ಪುತ್ರ ಯತೀಂದ್ರ ಅವರು ಸಚಿವರಾಗುವ ಮೂಲಕ ಭರವಸೆ ಮೂಡಿಸಿದ್ದಾರೆ. ಹೀಗಾಗಿ, ಜಿಲ್ಲೆಯ ರಾಜಕಾರಣ ಮತ್ತು ಅಭಿವೃದ್ಧಿ ಸ್ವಲ್ಪವೂ ವ್ಯತ್ಯಾಸವಾಗದಂತೆ ನೋಡಿಕೊಳ್ಳುವುದಕ್ಕೆ ಮಾರ್ಗದರ್ಶನ ಮಾಡಲಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago