ಚಿತ್ರ ಮಂಜರಿ

ಬಹುಮುಖ ನಟ ಅನಂತನಾಗ್ ಅವರಿಗೆ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಹಿರಿಯ ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಿರಿಯ ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಶುಕ್ರವಾರ (ಅಕ್ಟೋಬರ್ 7) ಪ್ರದಾನ ಮಾಡಿದರು. ರೇಸ್ ಕೋರ್ಸ್ ರಸ್ತೆಯ ಭಾರತೀಯ ವಿದ್ಯಾಭವನದಲ್ಲಿ ನಡೆದ ಸಮಾರಂಭದಲ್ಲಿ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಮಗಳು ಅದಿತಿ ಅಳಿಯ ವಿವೇಕ್ ಹಾಗೂ ಪತ್ನಿ ಗಾಯತ್ರಿ ಜೊತೆ ಅನಂತನಾಗ್ ಕುಟುಂಬ ಸದಸ್ಯರೆಲ್ಲರೂ ಆಗಮಿಸಿದ್ದರು.

ಇನ್ನು ಡಾಕ್ಟರೇಟ್ ಪ್ರದಾನ ಮಾಡಿ ಮಾತನಾಡಿದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ, ‘ಅನಂತನಾಗ್ ಅವರು ಚಿತ್ರರಂಗಕ್ಕೆ ಬಂದ ಸುವರ್ಣ ಮಹೋತ್ಸವದ ವರ್ಷದಲ್ಲಿ ಗೌರವ ಡಾಕ್ಟರೇಟ್ ನೀಡುವ ಮೂಲಕ ಬೆಂಗಳೂರು ಉತ್ತರ ವಿವಿ ತನ್ನನ್ನು ತಾನೇ ಗೌರವಿಸಿ ಕೊಂಡಿದೆ’ ಎಂದು ಬಣ್ಣಿಸಿದರು. ‘ಅನಂತನಾಗ್ ಮತ್ತು ಶಂಕರನಾಗ್ ಸಹೋದರರು ತಾಯಿ ಭುವನೇಶ್ವರಿಯ ಹೆಮ್ಮೆಯ ಪುತ್ರರಾಗಿದ್ದಾರೆ. ರಾಜ್ಯದಲ್ಲಿ ರಾಮಕೃಷ್ಣ ಹೆಗಡೆಯವರ ಮೂಲಕ ರಾಜಕೀಯ ಬದಲಾವಣೆ ತರುವಲ್ಲಿ ಇವರಿಬ್ಬರೂ ವಹಿಸಿದ ಪಾತ್ರ ಸ್ಮರಣೀಯವಾಗಿದೆ’ ಎಂದರು.

‘ಅಧ್ಯಯನಶೀಲತೆ ಮತ್ತು ಚಿಂತನ ಶೀಲತೆಗಳನ್ಮು ರೂಢಿಸಿಕೊಂಡಿರುವ ಅನಂತನಾಗ್ ಅವರು ಸಾರ್ವಜನಿಕ ಜೀವನದಲ್ಲಿ ಕೂಡ ತಮ್ಮ ಛಾಪು ಮೂಡಿಸಿದ ಮೇರು ವ್ಯಕ್ತಿ ಆಗಿದ್ದಾರೆ. ಅನಂತನಾಗ್ ನೇರ ಮತ್ತು ನಿಷ್ಠುರ ನುಡಿಗೆ ಹೆಸರಾಗಿದ್ದಾರೆ. ನಾಗ್ ಸಹೋದರರು ಕನ್ನಡ ನಾಡಿನ ಅದ್ಬುತ ಜೋಡಿ ಆಗಿದ್ದರು. ಅನಂತ್ ಅವರು ತಮ್ಮ ವಿಶಿಷ್ಟ ವ್ಯಕ್ತಿತ್ವಕ್ಕೆ ಹೆಸರಾಗಿದ್ದಾರೆ’ ಎಂದು ಅವರು ವ್ಯಾಖ್ಯಾನಿಸಿದರು.

ಗೌರವ ಡಾಕ್ಟರೇಟ್ ಸ್ವೀಕರಿಸಿ ಮಾತನಾಡಿದ ನಟ ಅನಂತನಾಗ್ ಅಶ್ವತ್ಥನಾರಾಯಣ ಅವರನ್ನು ಹೊಗಳಿದರು. ‘ಮಲ್ಲೇಶ್ವರಂ ಕ್ಷೇತ್ರದ ಅಭಿವೃದ್ಧಿಗೆ ಅಶ್ವತ್ಥನಾರಾಯಣ ಅವರು ದಣಿವರಿಯದೆ ಕೆಲಸ ಮಾಡುತ್ತಿರುವ ಅಪರೂಪದ ಜನ ಪ್ರತಿನಿಧಿ ಆಗಿದ್ದಾರೆ’ ಎಂದು ಹೇಳಿದರು. ‘ಅದರಲ್ಲೂ ತಮ್ಮ ಕ್ಷೇತ್ರದ ಹಿರಿಯ ನಾಗರಿಕರ ಹಿತಚಿಂತಕರಾಗಿದ್ದಾರೆ. ಇಂಥವರು ಎಷ್ಟು ಸಲ ಶಾಸಕರಾಗಿ ಆಯ್ಕೆಯಾದರೂ ಅದು ಖುಷಿಯ ಸಂಗತಿಯಾಗಿರುತ್ತದೆ’ ಅಶ್ವತ್ಥನಾರಾಯಣ ಅವರನ್ನು ಹಾಡಿಹೊಗಳಿದರು.

ಅಂದಹಾಗೆ ಕಳೆದ ಜುಲೈ 14ರಂದೇ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು. ವಿದೇಶದಲ್ಲಿ ಸಿನಿಮಾ ಶೂಟಿಂಗ್​​ನಲ್ಲಿ ಬ್ಯುಸಿ ಇದ್ದ ಕಾರಣ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಅನಂತ್ ನಾಗ್ ಕನ್ನಡ ಜನಪ್ರಿಯ ನಟ. ಕನ್ನಡ ಮಾತ್ರವಲ್ಲದೇ ಹಿಂದಿ, ಮರಾಠಿ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅನಂತ ನಾಗ್ ನಟಿಸಿದ್ದಾರೆ.

ಸಂಕಲ್ಪ ಸಿನಿಮಾ ಮೂಲಕ 1973ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅನಂತ್ ನಾಗ್ ಈಗಲೂ ಸಿನಿಮಾರಂಗದಲ್ಲಿ ಸಕ್ರೀಯರಾಗಿದ್ದಾರೆ. ಸದ್ಯ ಪೋಷಕನಟರಾಗಿ ಬೆಳ್ಳಿ ಪರದೆ ಮೇಲೆ ಮಿಂಚುತ್ತಿದ್ದಾರೆ. ಅದ್ಭುತ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅನಂತ್ ನಾಗ್ ಕೊನೆಯದಾಗಿ ಗಾಳಿಪಟ-2 ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಸದ್ಯ ಅನಂತ್ ನಾಗ್ ಬಳಿ ತಿಮ್ಮಯ್ಯಾ ಮತ್ತು ತಿಮ್ಮಯ್ಯಾ, ಮೈಸೂರು ಮಸಾಲ ಸೇರಿದಂತೆ ಅನೇಕ ಸಿನಿಮಾಗಳಿವೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

13 hours ago