ಹಾಡು ಪಾಡು

ಮುಂಗಾರಿಗೆ ಯಾಕೆ ಈ ಭಾರಿ ಇಷ್ಟು ತರಾತುರಿ ?

ಬಿ.ಆರ್.ಜೋಯಪ್ಪ

ಇತ್ತೀಚಿನ ವರ್ಷಗಳಲ್ಲಿ ‘ಸೋಮಾರಿತನ’ ತೋರುತ್ತಿದ್ದ ಮುಂಗಾರು ಈ ಸತಿ ಮಾತ್ರ ಮೇ ತಿಂಗಳಲ್ಲೇ ‘ನಾ ರೆಡಿ’ ಅಂತ ಸುರಿಯಿತು. ಅದೂ ಚಂಡಮಾರುತದೊಡಗೂಡಿ! ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದ ರೈತರು ಕಂಗಾಲಾಗಿದ್ದಾರೆ. ಜನರ ಗಡಿಬಿಡಿ, ಪರದಾಟ, ವೃದ್ಧರ ಪರಪರ, ಪಿರಿಪಿರಿ. . . ಯಾವ ಕೆಲಸ ಮೊದಲು, ಯಾವುದು ನಂತರ, ಹಬ್ಬ, ಜಾತ್ರೆ, ಪೂಜೆ, ಗೃಹಪ್ರವೇಶ, ನಾಮಕರಣ, ಮದುವೆ, ಸಭೆ, ಸುತ್ತಾಟ. . . ಸ್ವಂತ ಕೆಲಸ ಪೂರ ಬಾಕಿ! !

ಕೃತಿಕಾ ನಕ್ಷತ್ರದ ಕಡೇ ಪಾದದಿಂದ ಆರಂಭಗೊಂಡ ಮಳೆ ರೋಹಿಣಿ ನಕ್ಷತ್ರದ ಮಳೆವರೆಗೆ ಎಡೆಬಿಡದೆ ಸುರಿಯಿತು. ಜೂನ್ ಎಂಟರಿಂದ ಮೃಗಶಿರಾ ನಕ್ಷತ್ರದ ಮಳೆ ಆರಂಭಗೊಳ್ಳಲಿದೆ. ಆರ್ದ್ರಾ (ಆರಿದ್ರಾ) ಮಳೆ. ನಮ್ಮ ಹಿರಿಯರು ಆರ್ದ್ರಾ ಮಳೆಯನ್ನು ‘ಭೂಮಿಗೆ ಭಾಷೆ ಕೊಟ್ಟ ಮಳೆ’ ಎನ್ನುತ್ತಾರೆ. ‘ಈ ಮಳೆಗೆ ಹಳ್ಳಕೊಳ್ಳ ತುಂಬುತ್ತದೆ. ಜಲದ ಬುಗ್ಗೆ ಚಿಮ್ಮುತ್ತದೆ’ ಎಂಬುದು ಹಿರಿಯರ ಆಂಬೋಣ.

ಜನರ ಪರದಾಟ
“ನಮ್ಮ ಮನೆಯಲ್ಲಿ ಒಂದು ಕೊಳ್ಳಿ ಸೌದೆ ಇಲ್ಲ. ಒಡೆದು ಹಾಕಿದ ಸೌದೆ ತೋಟದಲ್ಲೇ ಆಯಿತು. ನಿಮ್ಮದು? ನಮ್ಮದು ಕಡಿಲೂ ಇಲ್ಲ” ಎನ್ನುತ್ತಾರೆ. ಇನ್ನು ಕೆಲವರಲ್ಲಿ ಸೌದೆ ಒಟ್ಟಲು ಕೊಟ್ಟಿಗೆಯೇ ಇಲ್ಲವಂತೆ! “ಓಡಾಟ ಕಮ್ಮಿ ಮಾಡಿ, ಮಳೆಗಾಲಕ್ಕೆ ಬೇಕಾದುದನ್ನು ಬೇಗ ಬೇಗ ಮಾಡೀಂತ ಹೇಳಿದ್ರೆ ಕೇಳೋದಿಲ್ಲವಲ್ಲ” ಅಂತ ಹಿರಿಯರು ಬೊಬ್ಬೆ ಹಾಕುತ್ತಿದ್ದಾರೆ. ಕೊಡಗಿನ ಬಹುಪಾಲು ಮನೆಗಳಲ್ಲಿ ಇದೇ ಕಥೆ.

ಮೀನು ಸಿಗಲಿಲ್ಲ
ಪ್ರತಿ ವರ್ಷ ಮಳೆಗಾಲದ ಹೊಸ ನೀರು ತೋಡು, ಹೊಳೆ, ಕೆರೆಯಲ್ಲೆಲ್ಲಾ ತುಂಬಿ ಹರಿವಾಗ ಮೊಟ್ಟೆ ‘ಉರ್ಚಲು’ ಹತ್ತುವ ಮೀನುಗಳದೇ ಸಂಭ್ರಮ. ಈ ಸಾರಿ ಮೀನುಗಳಿಗೂ ಗೊಂದಲ! ದಿಢೀರ್ ತುಂಬಿ ಹರಿದ ನೀರು, ಮೊಟ್ಟೆ ಬಲಿಯದೆ ಉರ್ಚುವುದಾದರೂ ಹೇಗೆ? ಮೀನು ಹತ್ತಿತೋ, ಇಲ್ಲವೋ, ಜನರಂತೂ ಮೀನು ಹಿಡಿಯಲಿರುವ ಪರಿಕರಗಳಾದ ಬಲೆ, ಗೋರಿ, ಕೂಳಿ, ಪೊಡ ಇವು ಯಾವ್ದನ್ನೂ ಜೋಡಿಸಿಕೊಂಡಿರಲಿಲ್ಲ. ಕೆಲವರು ಸೊಳ್ಳೆ ಪರದೆ, ಶೇಡ್ ನೆಟ್ ಇವುಗಳನ್ನು ಮೀನು ಹಿಡಿಯಲು ಬಳಸಿದರಂತೆ!

ಬಿಸಿಲಿಲ್ಲ ಹಪ್ಪಳವಿಲ್ಲ
ಸರಿಯಾಗಿ ಬಿಸಿಲು ಇಲ್ಲದ್ದರಿಂದ ಹಲಸಿನ ಹಪ್ಪಳ ಒಣಗಿಸಲು ಆಗಲಿಲ್ಲ. ಮಾವಿನ ಹಣ್ಣಿನ ಮಾಂಬಳದ ಕತೆಯೂ ಅದೇ. ಕೆಲವರು ‘ಸಾಂತಣಿ’ ಒಣಗಿಸಿದ್ದಾರಂತೆ. ಸಾಂತಣಿ ಎಂದರೆ ಬೇಯಿಸಿ ಒಣಗಿಸಿದ ಹಲಸಿನ ಬೀಜ. ಹಲಸಿನ ಬೀಜವನ್ನು ಕೊಂಚ ಉಪ್ಪು ಹಾಕಿ ಬೇಯಿಸಿ, ಒಣಸುತ್ತಾರೆ ಮಳೆಗಾಲದಲ್ಲಿ ಬಾಯಾಡಿಸಲು! ಹಾಗೆ ಬೇಯಿಸಿ ಒಣಗಿಸಿದ ಹಲಸಿನ ಬೀಜವನ್ನು ಸಾಂತಣಿ ಅನ್ನುತ್ತಾರೆ. ಮತ್ತೆ ಕೆಲವರು ಹಲಸಿನ ಬೀಜವನ್ನು ಮಣ್ಣು ಮೆತ್ತಿ ಒಣಗಿಸಿ, ಮಣ್ಣಿನ ಮಡಕೆಯಲ್ಲಿ ತುಂಬಿಸಿ ಬಾಯಿಕಟ್ಟಿ ಇಡುತ್ತಾರೆ. ಚಳಿ, ಮಳೆಗಾಲದಲ್ಲಿ ಅದನ್ನು ಹುರಿದು ತಿನ್ನುತ್ತಾರೆ. ಸಂಜೆಯ ಕರಿ ಕಾಫಿಗೆ ಹುರಿದ ಹಲಸಿನ ಬೀಜ ಹೇಳಿ ಮಾಡಿಸಿದ ಕೊಡಗಿನ ತಿಂಡಿ! ಈ ಬಾರಿ ಕೆಲವರು ಒಣಗಿಸಿಟ್ಟು ಮಳೆಗಾಲಕ್ಕೆ ತಯಾರಾಗಿದ್ದಾರೆ.

ಮದುವೆ
‘ಮನೆಗೇ ಬಂದು ಮದುವೆಗೆ ಆಮಂತ್ರಿಸಿದ್ದಾರೆ. ಏನು ಮಾಡೋದು? ಮಳೆ ಬೇರೆ ಬಿಡುತ್ತಿಲ್ಲ. ಮದುವೆಗೆ ಹೋಗಲೇಬೇಕು’ ಹೋಗುವವರಿಗೇ ತಲೆಬಿಸಿ. ಇನ್ನು ಮದುವೆ ಮಾಡುವವರ ಗೋಳು? ಎಷ್ಟು ಜನರಿಗೆ ಅಡುಗೆ ಮಾಡಬೇಕು? “ಚಪ್ಪರದ ಮದುವೆಗೆ ಜನ ಹೇಗಾದರೂ ಬಂದಾರು! ! ಆದರೆ ಮರುದಿನದ ಸಮಾರಂಭಕ್ಕೆ ಜನರ ಸಂಖ್ಯೆಯನ್ನು ಅಂದಾಜು ಮಾಡಲಾಗುವುದಿಲ್ಲ. ಮಾಡಿದ ಅಡುಗೆ ವೇಸ್ಟ್ ಆಗಬಾರದಲ್ಲ? ಈ ಮಳೆಗಾಲದಲ್ಲಿ ಮದುವೆ ಮಾಡಬೇಕಿತ್ತಾ. . . ” ಕೆಲವರ ಪರ ನುಡಿ! ಎರಡು ತಿಂಗಳಿಗೆ ಮೊದಲೇ ನಿಶ್ಚಯ ಮಾಡಿದ ಸಮಾರಂಭ. ಆಗ ಗೊತ್ತಿತ್ತಾ ಮಳೆ ವಿಚಾರ? ಅಂತೂ ತಲೆಗೊಂದು ತರ ಮಾತಿಗಿಲ್ಲ ಬರ!

ಸಂತೆ
ಮಳೆಗಾಲದಲ್ಲಿ ಸಂತೆಯೊಂದು ಗೋಳು. ಕೊಡಗಿನಂತಹ ಕಡೆ ದಿನಕ್ಕೊಂದು ಕಡೆ ಸಂತೆ. ಜನರಿಗೆ ಏನೋ ಅನುಕೂಲ ಹೌದು. ಆದರೆ ವ್ಯಾಪಾರಿಗರು ವಾರದ ಏಳು ದಿನವೂ ಊರೂರು ಅಲೆಯಬೇಕು. ವಸ್ತುಗಳನ್ನು ಜೋಡಿಸಿಕೊಂಡು ಬೆಳಗಿನ ಜಾವಕ್ಕೆಲ್ಲಾ ಮಳೆಗಾಲದಲ್ಲಿ ಹೊರಡಬೇಕಲ್ಲಾ. . . ಆನೆ ಹುಲಿಗಳ ಕಾಟ ಬೇರೆ. ಖಾಸಗಿ ವಾಹನಕ್ಕೆ ದುಬಾರಿ ಬೆಲೆ ಕೊಟ್ಟು ಮಾರುಕಟ್ಟೆ ತಲುಪಬೇಕಲ್ಲಾ. . .

ಕೃಷಿಕರ ಪರದಾಟ
ಗದ್ದೆಗೆ ಕೊಟ್ಟಿಗೆ ಗೊಬ್ಬರ ಹಾಕಲಿಕ್ಕಾಗಲಿಲ್ಲ! ಗದ್ದೆಯಲ್ಲಿ ನೀರು ತುಂಬಿದೆ. ಗದ್ದೆಯಲ್ಲಿ ಮಾಡಿದ ಬಹುಪಾಲು ತರಕಾರಿ ಕೊಳೆತುಹೋಯಿತು. ತೋಟದ ಬೇಲಿ ಸವರಲಿಲ್ಲ. ಕಾಫಿ ಗಿಡದ ಕಂಬ ಚಿಗುರು ಮುರಿಯಲಿಲ್ಲ. ಗಿಡದ ಬುಡ ಬುಡಿಸಬೇಕು. ಗೊಬ್ಬರ ಹಾಕಬೇಕು ಎಲ್ಲಾ ತೋಟಗಳಲ್ಲೂ ಒಂದೇ ತರಹದ ಕೆಲಸ ಕಾರ್ಮಿಕರ ಕೊರತೆಯಂತೂ ಹೇಳತೀರದು.

ಅಜ್ಜಿ ಮನೆಯ ಸುಖ
ಒಂದಷ್ಟು ದಿನ ಅಜ್ಜಿ ಮನೆಯಲ್ಲಿ ಮೊಮ್ಮಕ್ಕಳು ಇದ್ದು ಆನಂದಿಸಿದರು. ಮಕ್ಕಳ ಆನಂದಕ್ಕೆ ಮಳೆ ಕಡಿವಾಣ ಹಾಕಿತು. ಹಲಸು, ಮಾವು, ಸೀಬೆ ಹಣ್ಣಿನ ಸುಗ್ಗಿ! ಮಳೆಯಿಂದಾಗಿ ಹೊರಹೋಗಲಿಲ್ಲ. ಕೆಲವೆಡೆಯಂತೂ ಹೊರಗೆ ಕಾಲಿಟ್ಟಲ್ಲೆಲ್ಲ ಜಿಗಣೆಗಳು! ! ಪಿಕ್ನಿಕ್ ಹೋಗಲಾಗಲಿಲ್ಲ. ಬೇಸಿಗೆ ಶಿಬಿರವೂ ಅಪೂರ್ಣವಾದಂತಾಯಿತು.

ಶಾಲೆ ಮಣಭಾರದ ಬ್ಯಾಗು
ಶಾಲೆ ತೆರೆಯುವ ಮುನ್ನ ಮಕ್ಕಳು ಪೂರ್ಣ ತಯಾರಾಗಬೇಕಲ್ಲಾ! ರೈನ್ ಕೋಟ್, ಗಂಬೂಟ್, ಸ್ವೆಟರ್, ಕೊಡೆ, ನೀರು ಮತ್ತು ತಿಂಡಿ ಡಬ್ಬಿಗೊಂದು ಕ್ಯಾರಿಬ್ಯಾಗ್, ಬೆನ್ನಿಗೆ ಮತ್ತೊಂದು ‘ಮಣಭಾರದ ಬ್ಯಾಗು’ – ಅದ್ಯಾವುದೂ ತೆಗೆದಾಗಿಲ್ಲ! ತೀವ್ರ ಮಳೆಯ ಕಾರಣ ಶಾಲೆಗೆ ಎರಡು ದಿನಗಳ ರಜೆ! ಸುದ್ದಿ ಕೇಳಿದ ಮಕ್ಕಳು, ಪೋಷಕರು ‘ಹೋ. . . ಅಂತ’ ಖುಷಿಪಟ್ಟರು. ಶನಿವಾರ ಪೂರ್ಣ ಕ್ಲಾಸ್ ಅಂತ ಹೇಳಿದಾಗ!

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

21 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

21 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

21 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

21 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

21 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

21 hours ago