ಆಂದೋಲನ ಪುರವಣಿ

ವನಿತೆ ಮಮತೆ : ಮನೆ, ಮನಗಳ ಬೆಸೆದ ಮಗು

ಎಂಟು ವರ್ಷಗಳ ನಂತರ ತಾಯಿಯಾದವಳ ಅಂತರಂಗ

ರಶ್ಮಿ ಎಂ. ಮಳವಳ್ಳಿ

ಎಂಟು ವರ್ಷಗಳ ಹಿಂದೆ ಮದುವೆಯಾದಾಗ ಖುಷಿಯೊಂದು ಚಿಗುರೊಡೆದು ಕನಸೆಂಬ ಎಲೆಗಳನ್ನು ಮೈ ತುಂಬಾ ತುಂಬಿಕೊಳ್ಳುತ್ತಾ ಬೆಳೆಯುತ್ತಾ ಬಂತು. ವರ್ಷ ತುಂಬುವುದರ ಒಳಗೆ ಆ ಚಿಗುರು ಬಾಡಲು ಶುರುವಿಟ್ಟಿತ್ತು. ಏನ್ ವಿಶೇಷ? ಏನೂ ಸಿಹಿ ಸುದ್ದಿ ಇಲ್ವಾ? ಎನ್ನುವ ಆತ್ಮೀಯರ, ಬಂಧುಗಳ ಮಾತುಗಳು, ಮನೆಯವರ ಮೌನಗಳು ಆವರಿಸಿಕೊಳ್ಳುತ್ತಾ ಆತಂಕ ಹೆಚ್ಚಿಸಿದ್ದವು.

ಹೆಣ್ಣಾದ ನನ್ನ ಮೇಲೆಯೇ ಪ್ರಶ್ನೆಗಳ ದಾಳಿ. ಅತ್ತ ಕಡೆ ಗಂಡಿಗೂ ಇದೇ ಪ್ರಶ್ನೆಗಳ ಶೂಲ ಇರಬಹುದೆನೋ ಅನ್ನಿಸುತ್ತಿತ್ತು ಅಂದಿಗೆ. ಇನ್ನೂ ಮಕ್ಕಳಾಗಿಲ್ಲ. ಮೊದಲು ಹೋಗಿ ಆಸ್ಪತ್ರೆಗೆ, ಆ ದೇವರಿಗೆ ಹೋಗಿ ಹರಕೆ ಕಟ್ಟಿ ಎಂಬಿತ್ಯಾದಿ ಸಾಲು ಸಾಲು ಸಲಹೆಗಳು. ಏನ್ ಫ್ಯಾಮಿಲಿ ಪ್ಲ್ಯಾನಿಂಗಾ? ಯಾಕೆ ಲೇಟು? ಎನ್ನುವ ಗೆಳತಿಯರ ಮಾತು. ಅದೇ ವೇಳೆಗೆ ನನ್ನ ವಾರಿಗೆಯಲ್ಲಿಯೇ ಮದುವೆಯಾದವರು ಮೂರು ತಿಂಗಳಾಯ್ತು, ಆರು ತಿಂಗಳಾಯ್ತು ಎನ್ನುವಾಗ ಒಡಲೊಳಗೆ ಸಂಕಟ.

ಇರಲಿ ಇಂದು ಒಂದು ವರ್ಷದ ಒಳಗಿನ ಮಾತು. ಎಲ್ಲರೂ ಇದು ಸಹಜ. ನಿಧಾನವಾಗಿ ಮಕ್ಕಳಾಗ್ತವೆ, ಸರಿಹೋಗ್ತದೆ ಎಂದು ಧೈರ್ಯ ಹೇಳಲು ಆರಂಭಿಸಿದ್ದರು. ಎರಡನೇ ವರ್ಷಕ್ಕೆ ಕಾಲಿಟ್ಟ ವೇಳೆಗೆ ಗಂಡನ ಮನೆಯವರಿಂದ ಇನ್ನು ಮಕ್ಕಳಾಗುವುದಿಲ್ಲ ಎಂಬ ನೇರವಾದ ಮಾತುಗಳು, ತಾಯಿ ಮನೆಯವರಿಂದ ಆಸ್ಪತ್ರೆ, ದೇವಸ್ಥಾನಗಳ ಸುತ್ತಾಟ. ನಾನೂ ಹರಕೆಗಳನ್ನು ಹೊರುವುದು, ಮನಸ್ಸಿನಲ್ಲಿಯೇ ದೇವರನ್ನು ಬೇಡುವುದು. ಹೀಗೆ ಸಾಗುತ್ತಲೇ ಮೂರು ವರ್ಷ ತುಂಬಿತು ಮದುವೆಯಾಗಿ.

ನಿಧಾನವಾಗಿ ನನಗೆ ಮಕ್ಕಳಾಗುವುದಿಲ್ಲ, ನಮ್ಮ ಹಣೆಯಬರಹ ಇಷ್ಟೆ ಎಂದು ಎಲ್ಲರ ಮನಸ್ಸು ಒಗ್ಗಿಕೊಳ್ಳುತ್ತಿತ್ತು. ಗಂಡನಿಗೆ ಮತ್ತೊಂದು ಮದುವೆ ಮಾಡಬೇಕು ಎನ್ನುವ ಚರ್ಚೆಗಳೂ ಆರಂಭ. ನನ್ನ ಭವಿಷ್ಯ ಎನ್ನುವ ಚಿಂತೆ. ಇದೆಲ್ಲದರ ನಡುವಲ್ಲಿ ಅಲ್ಲೆಲ್ಲೋ ಮದುವೆಯಾಗಿ ಹತ್ತು ವರ್ಷವಾದ ಮೇಲೆ ಮಕ್ಕಳಾದ್ವಂತೆ ಎನ್ನುವ ತಂಗಾಳಿ ತರಹದ ಸುದ್ದಿ. ನನ್ನಲ್ಲೂ ಚಿಗುರೊಂದು ಒಡೆದು, ನಂದನವನವೊಂದು ನಿರ್ಮಾಣವಾಗುತ್ತದೆ ಎನ್ನುವ ಆಶಾಭಾವನೆ.

ವೈದ್ಯರೆಲ್ಲವೂ ಏನೂ ತೊಂದರೆ ಇಲ್ಲ. ಇಂತಿಂಥ ಸಮಯದಲ್ಲಿ ಸೇರಬೇಕು, ಹೀಗಿಗೆ ಮಾಡಬೇಕು. ಈ ಟಾನಿಕ್, ಆ ಪೌಡರ್ ಎಂದೆಲ್ಲಾ ಸಲಹೆ ಕೊಡುತ್ತಾ ಹೋದರು. ಅವರು ಹೇಳಿದ್ದೆಲ್ಲಾ ಮಾಡಿದೆ. ಗಂಡನಿಗೂ ಸಾಕಷ್ಟು ಸಲಹೆಗಳು. ಅವರೂ ಅದನ್ನೆಲ್ಲಾ ಪಾಲಿಸುತ್ತಾ ಬಂದರು. ಈ ಬಾರಿ ಫಲ ನಿಲ್ಲಬಹುದು. ಈ ಬಾರಿ ಎಂದುಕೊಳ್ಳುತ್ತಾ ಐದು ವರ್ಷಗಳು ಕಳೆದು ಬದುಕು ಬರಡು ಎಂದುಕೊಂಡು ತಲೆಮೇಲೆ ಬಂಡೆ ಹೊತ್ತು ನಡೆಯುವ ಹಾಗೆ ಭಾರವಾದ ಹೆಜ್ಜೆಗಳ ಬದುಕನ್ನು ದೂಡುತ್ತಿದ್ದೆ.

ಆ ವೇಳೆಯಲ್ಲಿಯೇ ನನ್ನ ಬದುಕಲ್ಲಿ ಮಳೆಯಾಗಿದ್ದು. ಆಸೆಯನ್ನೇ ಬಿಟ್ಟ ಜೀವಕ್ಕೆ ಸಂತೋಷದ ಮಡುವೊಂದು ಕಾಣಿಸಿಕೊಂಡಿತ್ತು. ನನಗಾಗ ೨ ತಿಂಗಳು. ಇದೇ ಖುಷಿಯಲ್ಲಿ ಮೊದಲು ಹೋಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿ ಹೌದು ನೀವು ಗರ್ಭಿಣಿ ಎನ್ನುವ ಸುಂದರವಾದ ಮಾತುಗಳನ್ನು ಕೇಳಿದ ಮೇಲೆಯೇ ಗಾಳಿ ಸುದ್ದಿಯಂತೆಯೇ ಎಲ್ಲ ಕಡೆ ನಾನು ಗರ್ಭಿಣಿ ಎನ್ನುವ ಸತ್ಯವನ್ನು ನಾನಾಗಿಯೇ ತಿಳಿಸಿದೆ.

ಬಂಜೆ ಎನ್ನುವ ಮಾತುಗಳನ್ನು ಕೇಳಿ ಕೇಳಿ ಸಾಗಾಗಿ ಹುಟ್ಟಲಿರುವ ಮಗುವಿನ ಬಗ್ಗೆ ನೂರಾರು ಕನಸು ಕಟ್ಟಿದ್ದೆ. ಎಂಟು ವರ್ಷಗಳ ನಂತರ ತಾಯಿಯಾಗುವ ಭಾಗ್ಯ ಪಡೆದ ನನಗೋ ಎಲ್ಲಿಲ್ಲದ ಅಕ್ಕರೆ. ಹುಟ್ಟುವ ಮಗು ಯಾವುದಾದರೇನು, ಆರೋಗ್ಯವಾಗಿದ್ದರೆ ಸಾಕು, ಬದುಕಿನ ದೀಪವ ಹಚ್ಚುವ ಮಗುವೊಂದು ಬರಲಿರುವ ದಾರಿಗೆ ಎಲ್ಲರೂ ಕಾಯುತ್ತಾ ಕುಳಿತರು.

ತಿಂಗಳೊಂಭತ್ತು ತುಂಬಿ ಮಗ ಮಡಿಲು ಸೇರಿದ. ಸಂತೋಷ ಹಿಮ್ಮಡಿಯಾಯ್ತು. ಅವನ ಆರೈಕೆಯಲ್ಲಿಯೇ ಜೀವನದ ಸುಖ ಕಂಡವಳು ನಾನು. ಒಂದು ಜೀವ ಎಷ್ಟೆಲ್ಲಾ ಜೀವಗಳನ್ನು ಬೆಸೆಯಲು ಸಾಧ್ಯ ಎನ್ನುವ ಕನಿಷ್ಟ ಜ್ಞಾನವೂ ಇಲ್ಲದ ನನಗೆ ಸಾಕಷ್ಟು ಜೀವನಾನುಭವವಾಯ್ತು. ನನ್ನ ಕುಟುಂಬವೆಲ್ಲಾ ಆ ಕಂದನ ಸುತ್ತಲೇ ತಮ್ಮ ಸಂತೋಷವನ್ನು ಕಾಣುವಾಗ ನನ್ನ ಕಣ್ಣುಗಳಲ್ಲಿ ನೀರು. ದೇವರಿಗೆ ಕೈ ಮುಗಿಯುತ್ತಾ ಇಷ್ಟೊಂದು ಸಂತೋಷದ ಬುತ್ತಿಯನ್ನು ಉಣಿಸಲು ಎಂಟು ವರ್ಷಗಳ ಕಾಲ ಹಸಿವನ್ನು ದಯಪಾಲಿಸಿದ್ದೆಯಾ ಎಂದುಕೊಳ್ಳುತ್ತಲೇ ನಗೆ ಚೆಲ್ಲುತ್ತಿದ್ದ ದಿನಗಳವು.

ಈಗಲೂ ಆ ದಿನಗಳು, ಅದಕ್ಕೂ ಹಿಂದಿನ ದಿನಗಳು, ಮಗ ಬಂದ ಮೇಲಿನ ದಿನಗಳನ್ನು ಮೆಲುಕು ಹಾಕಿದರೆ ಈ ಬದುಕು ಏರಿಳಿತಗಳ ಸಾಲು ಎನ್ನಿಸುತ್ತದೆ..

andolanait

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

11 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

11 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

11 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

12 hours ago