ಗಿರೀಶ್ ಹುಣಸೂರು

ಮೈಸೂರು, ಕೊಡಗು ಹಾಗೂ ಕೇರಳದ ವಯನಾಡು ಜಿಲ್ಲೆಗಳೊಂದಿಗೆ ಗಡಿ ಹಂಚಿಕೊಂಡಿರುವ ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿನ ಇರ್ಪು ಜಲಪಾತ ವಾರಾಂತ್ಯದ ಒಂದು ದಿನದ ಪ್ರವಾಸಕ್ಕೆ ಹೇಳಿ ಮಾಡಿಸಿದ ತಾಣವಾಗಿದೆ.

ಕೊಡಗು ಜಿಲ್ಲೆ ಪ್ರವಾಸಿಗರ ಪಾಲಿನ ಸ್ವರ್ಗ. ದಟ್ಟ ಕಾನನ, ಕಾಫಿ ತೋಟಗಳು, ಟೀ ಎಸ್ಟೇಟ್‌ಗಳಿಂದಾಗಿ ಇಲ್ಲಿನ ಹಸಿರ ಸಿರಿ ಎಲ್ಲರನ್ನೂ ತನ್ನತ್ತ ಸೆಳೆಯುತ್ತದೆ. ಕೊಡಗು ಜಿಲ್ಲೆಗೆ ಕಾಲಿಟ್ಟರೆ ಅಲ್ಲಿನ ಅತ್ಯದ್ಬುತ ಪ್ರವಾಸಿ ತಾಣಗಳನ್ನು ಕಂಡು ಮನಸೋಲದವರೇ ಇಲ್ಲ. ಇಲ್ಲಿನ ಸುಂದರ ತಾಣಗಳು ಪ್ರತಿಯೊಬ್ಬರನ್ನೂ ಸೂಜಿಗಲ್ಲಿನಂತೆ ಸೆಳೆಯುತ್ತವೆ. ಪ್ರವಾಸಿ ಪ್ರಿಯ ಯುವ ಜನರಂತೂ ಶನಿವಾರ-ಭಾನುವಾರಗಳಂದು ತಮ್ಮ ಮೋಟಾರು ಬೈಕ್ಗಳಲ್ಲೇ ಕೊಡಗು ಜಿಲ್ಲೆಗೆ ಲಗ್ಗೆ ಇಟ್ಟು, ಹಸಿರ ಸಿರಿಯ ರಮಣೀಯ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.

ಕೊಡಗಿಗೆ ಬರುವ ಪ್ರವಾಸಿಗರನ್ನು ಆಕರ್ಷಿಸುವ ಸುಂದರ ತಾಣಗಳಲ್ಲಿ ದಕ್ಷಿಣ ಕೊಡಗಿನಲ್ಲಿರುವ ಇರ್ಪುಜಲಪಾತ ಕೂಡ ಒಂದು. ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿ ಹುಟ್ಟಿ ಮುಂದೆ ಲಕ್ಷ್ಮಣ ತೀರ್ಥ ನದಿಯಾಗಿ ಹರಿದುಕನ್ನಡಿಗರ ಜೀವನಾಡಿ ಕಾವೇರಿಯನ್ನು ಸೇರುವ ಈ ಕಿರು ಜಲಪಾತದ ಸೊಬಗು ನಯನ ಮನೋಹರ. ಮುಂಗಾರು ಹಂಗಾಮದ ಸಂದರ್ಭದಲ್ಲಿ ಇಲ್ಲಿಗೆ ಭೇಟಿ ನೀಡುವ ಖುಷಿಯೇ ಬೇರೆ. ಹೊಸ ಕಳೆಯೊಂದಿಗೆ ಇರ್ಪು ಜಲಪಾತ ಧುಮ್ಮಿಕ್ಕುವುದನ್ನು ನೋಡುವುದೇ ಚಂದ.

ಹಸಿರು ಹೊದ್ದ ಬೆಟ್ಟಗಳ ಸಾಲಿನಲ್ಲಿ ಬಳಕುತ್ತಾ, ಬಾಗುತ್ತಾ ಸಾಗುವ ಇರ್ಪು ಜಲಪಾತ ಮತ್ತೆ ಮತ್ತೆ ನೋಡುತ್ತಲೇ ಇರಬೇಕು ಎನಿಸುವಷ್ಟು ಆಕರ್ಷಣೀಯ. ಪ್ರವಾಸಿಗರ ದಟ್ಟಣೆ, ವಾಹನ ದಟ್ಟಣೆಯ ಕಿರಿಕಿರಿ ಇಲ್ಲದೇ ಪ್ರಕೃತಿಯ ಸೌಂದರ್ಯವನ್ನು ಸವಿಯಬೇಕೆನ್ನುವವರಿಗೆ ಇಷ್ಟವಾದ ತಾಣವಿದು. ಸುಮಾರು ೬೦ ಮೀಟರ್ ಎತ್ತರದಿಂದ ನೀರಿನ ಕಿರು ಜರಿಗಳು ಹಾಲ್ನೊರೆಯಂತೆ ಧುಮ್ಮಿಕ್ಕುವುದನ್ನು ಇಲ್ಲಿ ಕಾಣಬಹುದು. ಹೀಗಾಗಿ ಇಲ್ಲಿಗೆ ಭೇಟಿ ನೀಡಿದವರಿಗೆ ವಾಪಸ್ಸಾಗಲು ಮನಸ್ಸೇ ಬರುವುದಿಲ್ಲ ಎಂದು ಪ್ರವಾಸಿ ಪ್ರಿಯರು ಹೇಳುತ್ತಾರೆ.

ಕುಟುಂಬ ಸದಸ್ಯರೊಂದಿಗೆ, ಸ್ನೇಹಿತರೊಂದಿಗೆ ಗದ್ದಲವಿಲ್ಲದೆ ಪ್ರಕೃತಿಯ ಸೌಂದರ್ಯವನ್ನು ಆಸ್ವಾದಿಸಬೇಕೆನ್ನುವವರು ಇಲ್ಲಿ ಯಾವುದೇ ಕಿರಿಕಿರಿ ಇಲ್ಲದೇ ದಿನ ಕಳೆಯ ಬಹುದು. ಇರ್ಪು ಜಲಪಾತವಿರುವ ಬ್ರಹ್ಮಗಿರಿ ಬೆಟ್ಟದ ತಪ್ಪಲಿನಲ್ಲಿ ರಾಮೇಶ್ವರ ದೇವಾಲಯ ಕೂಡ ಇದೆ. ಈ ಸ್ಥಳಕ್ಕೆ ಪುರಾಣದ ಹಿನ್ನೆಲೆಯೂ ಇದೆ. ಇರ್ಪು ಜಲಪಾತ ಮತ್ತು ಅದರಿಂದ ಮುಂದೆ ನದಿಯಾಗಿ ಹರಿಯುವ ಕಾವೇರಿಯ ಉಪ ನದಿ ಲಕ್ಷ್ಮಣತೀರ್ಥದ ಜೊತೆಗೆ ರಾಮಾಯಣವೂ ಬೆಸೆದುಕೊಂಡಿದೆ. ವನವಾಸದ ಸಂದರ್ಭದಲ್ಲಿ ಸೀತೆಯನ್ನುಹುಡುಕುತ್ತಾ ರಾಮ-ಲಕ್ಷ್ಮಣರು ಇಲ್ಲಿಗೆ ಬಂದಾಗ ಶ್ರೀರಾಮ ಬಾಯಾರಿಕೆಯಿಂದ ನೀರು ಕೇಳಿದಾಗ ಲಕ್ಷ್ಮಣ ಹೆಬ್ಬಂಡೆಗೆ ಬಾಣ ಪ್ರಯೋಗಿಸಿ ಈ ಜಲಪತವನ್ನು ಸೃಷ್ಟಿಸಿರುವುದಾಗಿ ಜನರು ನಂಬಿದ್ದಾರೆ. ಲಕ್ಷ್ಮಣ ಪ್ರಯೋಗಿಸಿದ ಬಾಣದಲ್ಲಿ ಜಲಪಾತ ಸೃಷ್ಟಿಯಾಯಿತು ಎಂಬುದು ಐತಿಹ್ಯ.

ಹೀಗಾಗಿ ಈ ಜಲಪಾತದಿಂದ ಮುಂದೆ ನದಿಯಾಗಿ ಹರಿಯುವ ಕಾವೇರಿಯ ಈ ಉಪನದಿಗೆ ಲಕ್ಷ್ಮಣತೀರ್ಥ ಎಂದೇ ಕರೆಯಲಾಗುತ್ತದೆ. ಜೊತೆಗೆ ಬ್ರಹ್ಮಗಿರಿ ಬೆಟ್ಟದತಪ್ಪಲಿನಲ್ಲಿರುವ ರಾಮೇಶ್ವರ ದೇವಾಲಯ ದಲ್ಲಿರುವ ಶಿವಲಿಂಗವನ್ನು ಶ್ರೀರಾಮನೇ ಪ್ರತಿಷ್ಠಾಪಿಸಿದ್ದು ಎಂಬ ಪ್ರತೀತಿ ಇದೆ. ಶಿವರಾತ್ರಿ ಸಂದರ್ಭದಲ್ಲಿ ಭಕ್ತರು ಇಲ್ಲಿಗೆ ಭೇಟಿ ನೀಡಿ, ಇರ್ಪು ಜಲಪಾತದಲ್ಲಿ ಮಿಂದು, ರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಹೋಗುತ್ತಾರೆ.

ಇರ್ಪುಗೆ ಹೋಗುವುದು ಹೇಗೆ?:  ಮೈಸೂರು ಕಡೆಯಿಂದ ತೆರಳುವವರು ಹುಣಸೂರಿಗೆ ತೆರಳಿ ಅಲ್ಲಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಸುಮಾರು ೧೨೦ ಕಿ.ಮೀ ಕ್ರಮಿಸಿ ಇರ್ಪು ಜಲಪಾತವನ್ನು ತಲುಪಬಹುದು. ಮಡಿಕೇರಿಯಿಂದಲೂ ಇರ್ಪು ಜಲಪಾತ ೧೨೦ ಕಿ.ಮೀ ದೂರದಲ್ಲಿದೆ. ವಿರಾಜಪೇಟೆಯಿಂದ ನಾಗರಹೊಳೆ ಮಾರ್ಗದಲ್ಲಿ ಸುಮಾರು ೪೮ ಕಿ.ಮೀ ಸಾಗಿದರೆ ಇರ್ಪು ಜಲಪಾತ ಸಿಗುತ್ತದೆ. ಪ್ರತಿದಿನ ಬೆಳಿಗ್ಗೆ ೬ ರಿಂದ ಸಂಜೆ ೫ ಗಂಟೆವರೆಗೆಮಾತ್ರ ಇರ್ಪು ಜಲಪಾತಕ್ಕೆ ಪ್ರವೇಶವಿದೆ. ಇಲ್ಲಿಗೆ ಭೇಟಿ ನೀಡಲು ಒಬ್ಬರಿಗೆ ೫೦ ರೂ. ಪ್ರವೇಶ ಶುಲ್ಕವನ್ನು ನೀಡಿ ಟಿಕೆಟ್ ಖರೀದಿಸಬೇಕಾಗುತ್ತದೆ. ರಾಮೇಶ್ವರ ದೇವಾಲಯದ ಬಳಿ ವಾಹನಗಳ ನಿಲುಗಡೆಗೆ ಅವಕಾಶವಿದೆ.

ಎಚ್ಚರ ತಪ್ಪಿದರೆ ಅಪಾಯ: ಮಳೆಗಾಲದಲ್ಲಿ ಜಲಪಾತದ ನಯನ ಮನೋಹರ ದೃಶ್ಯವನ್ನು ಸವಿಯುವ ಭರದಲ್ಲಿ ಕೊಂಚ ಎಚ್ಚರ ತಪ್ಪಿದರೂ ಅಪಾಯ ಕಟ್ಟಿಟ್ಟಬುತ್ತಿ. ಹೀಗಾಗಿ ಸಾಕಷ್ಟು ಮುನ್ನೆಚ್ಚರಿಕೆಯಿಂದಲೇ ಜಲಪಾತದ ಸೌಂದರ್ಯವನ್ನು ಕಣ್ತುಂಬಿಕೊಳ್ಳುವುದು ಒಳಿತು. ಕಿರಿದಾದ ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತಿ ಇರ್ಪು ಜಲಪಾತವನ್ನು ತಲುಪಬೇಕಿರುವುದರಿಂದಆಯಾಸವಾಗುವುದು ಸಹಜ. ಹೀಗಾಗಿ ಕುಡಿಯುವ ನೀರನ್ನು ಜೊತೆಗೆ ಕೊಂಡೊಯ್ಯಿರಿ. ಆದರೆ, ನೀರಿನ ಖಾಲಿ ಬಾಟಲಿಗಳನ್ನು ಪ್ರಕೃತಿಯ ಮಡಿಲಲ್ಲಿ ಬಿಸಾಡಿ ಬರಬೇಡಿ. ಹುಣಸೂರು ಕಡೆಯಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಇರ್ಪುಗೆ ತೆರಳುವವರು, ವಿರಾಜಪೇಟೆ ಕಡೆಯಿಂದ ಇರ್ಪುಗೆ ಬಂದು ಬಳಿಕ ನಾಗರಹೊಳೆಗೆ ಭೇಟಿ ನೀಡುವವರು ಅರಣ್ಯ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

 

* ಪ್ರತಿ ವಾಹನಗಳವರೂ ತಮಗೆ ಸೂಚಿಸಿದ ರಸ್ತೆಯಲ್ಲಿ ಮಾತ್ರ ಚಲಿಸಬೇಕು

* ವಾಹನ ಚಾಲಕರು ಗಂಟೆಗೆ ೩೦ ಕಿ.ಮೀ ವೇಗದ ಮಿತಿಯನ್ನು ಪಾಲಿಸಬೇಕು

* ವಾಹನದಲ್ಲಿ ಚಲಿಸುವಾಗ ನಿಶ್ಶಬ್ದದಿಂದ ಚಲಿಸಿ, ಕಾಡಿನಲ್ಲಿ ವಾಹನದಿಂದ ಕೆಳಗೆ ಇಳಿಯದಿರಿ

* ವನ್ಯಪ್ರಾಣಿಗಳಿಗೆ ಕೀಟಲೆ ಮಾಡಬೇಡಿ, ಆಹಾರ ನೀಡಬೇಡಿ, ಅರಣ್ಯ ಇಲಾಖೆಯ ಸಲಹೆಗಳನ್ನು ನಿರ್ಲಕ್ಷ್ಯಿಸಬೇಡಿ

* ಕಾಡಿನಲ್ಲಿ ಮಣ್ಣಿನ ರಸ್ತೆಗಳಲ್ಲಿ ಚಲಿಸಬೇಡಿ, ಕಾಡಿನೊಳಗೆ ಚಲಿಸುವಾಗ ಮೊಬೈಲ್ ಬಳಸಬೇಡಿ, ಅತಿಯಾದ ಶಬ್ಧ ಮಾಡಬೇಡಿ.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

3 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

4 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

5 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

6 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

6 hours ago