BREAKING NEWS

ಮುಸ್ಲಿಮರ ಮೀಸಲಾತಿ ರದ್ದು : ದೋಷಪೂರಿತ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ : ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ, ಅಸ್ಥಿರ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ರಾಜ್ಯ ಸಚಿವ ಸಂಪುಟವು ಮಾರ್ಚ್‌ 27ರಂದು ತೆಗೆದುಕೊಂಡಿರುವ ನಿರ್ಧಾರ ಪ್ರಶ್ನಿಸಿ ಎಲ್‌. ಗುಲಾಮ್ ರಸೂಲ್‌ ಮತ್ತು ಇತರರು ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯ ವೇಳೆ ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಹಾಗೂ ಬಿ.ವಿ.ನಾಗರತ್ನ ಅವರಿದ್ದ ನ್ಯಾಯಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು. ಆಗ ರಾಜ್ಯ ಸರ್ಕಾರದ ಪರವಾಗಿ, ಮಾರ್ಚ್‌ 27ರ ಆದೇಶದ ಆಧಾರದ ಮೇಲೆ ಯಾವುದೇ ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶಾತಿ ನೀಡುವುದಿಲ್ಲ ಮತ್ತು ಯಾವುದೇ ಉದ್ಯೋಗಗಳಿಗೆ ನೇಮಕಾತಿ ಮಾಡುವುದಿಲ್ಲ ಎಂದು ಭರವಸೆ ನೀಡಲಾಯಿತು.

ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ, ‘ಈ ಆದೇಶದ ಆಧಾರದಲ್ಲಿ ಯಾವುದೇ ಪ್ರವೇಶಾತಿ ನೀಡುವುದಿಲ್ಲ ಅಥವಾ ಉದ್ಯೋಗಕ್ಕೆ ನೇಮಕಾತಿ ಮಾಡಿಕೊಳ್ಳುವುದಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌, ದುಷ್ಯಂತ್‌ ದವೆ, ರವಿವರ್ಮ ಕುಮಾರ್ ಹಾಗೂ ಗೋಪಾಲ್‌ ಶಂಕರನಾರಾಯಣನ್‌, ‘ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಧ್ಯಂತರ ವರದಿ ಆಧರಿಸಿ ಈ ನಿರ್ಧಾರ ಕೈಗೊಂಡಿರುವುದರಿಂದ ದೋಷಪೂರಿತವಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂದು ವಾದ ಮಂಡಿಸಿದರು.

ಆಗ ನ್ಯಾಯಪೀಠ, ‘ಸರ್ಕಾರದ ಈ ಒಂದು ನಿರ್ಧಾರದಿಂದ ದೊಡ್ಡ ಪ್ರಮಾಣದ ಜನರು ಮೀಸಲಾತಿಯ ಲಾಭದಿಂದ ವಂಚಿತರಾಗಿದ್ದಾರೆ. ಮೇಲ್ನೋಟಕ್ಕೇ ಈ ಆದೇಶದ ತಳಪಾಯ ಅಸ್ಥಿರವಾಗಿದ್ದು, ಪ್ರಮಾದದಿಂದ ಕೂಡಿದೆ ಎಂಬುದು ಕಂಡು ಬರುತ್ತಿದೆ’ ಎಂದು ಹೇಳಿತು.

ನಂತರ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ನ್ಯಾಯಪೀಠ ಮುಂದಾಗುತ್ತಿದ್ದಂತೆ ರಾಜ್ಯ ಸರ್ಕಾರ ಹಾಗೂ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಮುಕುಲ್ ರೊಹಟಗಿ, ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

‘ಇವೆಲ್ಲ ಸ್ಪರ್ಧಾತ್ಮಕ ಅಂಶಗಳು. ಇದರಲ್ಲಿ ಯಾವುದೇ ತೊಂದರೆ ಆಗದಿದ್ದರೂ ಆದೇಶಕ್ಕೆ ತಡೆಯಾಜ್ಞೆ ನೀಡುವುದು ಅನುಚಿತವಾಗುತ್ತದೆ’ ಎಂದು ರೊಹಟಗಿ ವಾದಿಸಿದರು. ತುಷಾರ್‌ ಮೆಹ್ತಾ, ‘ಒಬಿಸಿ ವರ್ಗಕ್ಕೆ ಸೇರಿರುವ ಮುಸ್ಲಿಮರು ಈಗಾಗಲೇ ಮೀಸಲಾತಿ ಪಡೆಯುತ್ತಿದ್ದಾರೆ. ಮುಸ್ಲಿಮರಿಗೆ ಶೇ 4, ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ ಶೇ 2 ಮೀಸಲಾತಿ ನೀಡುವ ಆದೇಶವನ್ನು ಆಧರಿಸಿ ಬದಲಾಯಿಸಲಾಗದಂತಹ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ’ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದರು.

ಅರ್ಜಿದಾರರು, ‘ಕರ್ನಾಟಕದಲ್ಲಿ 1921ರಿಂದಲೇ ಮುಸ್ಲಿಮ್‌ ಸಮುದಾಯವನ್ನು ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರು ಎಂದು ಪರಿಗಣಿಸಲಾಗುತ್ತಿದೆ. ಅವರು ಈ ವಲಯದಲ್ಲಿ ಮುಂದುವರಿದವರು ಎಂದು ಸಾಬೀತುಪಡಿಸುವ ಯಾವುದೇ ದತ್ತಾಂಶಗಳು ಲಭ್ಯ ಇಲ್ಲ’ ಎಂದರು.

ಪ್ರಕರಣ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ ಸೋಮವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಏಪ್ರಿಲ್‌ 18ಕ್ಕೆ ಮುಂದೂಡಿತು.

ಮುಸ್ಲಿಮರಿಗೆ ಇದ್ದ ಶೇ 4ರಷ್ಟು ಮೀಸಲಾತಿಯನ್ನು ಕಿತ್ತುಕೊಂಡು, ಅದನ್ನು ಲಿಂಗಾಯತರಿಗೆ ಹಾಗೂ ಒಕ್ಕಲಿಗರಿಗೆ ತಲಾ ಶೇ 2ರಷ್ಟು ಹಂಚುವ ನಿರ್ಣಯವನ್ನು ಕರ್ನಾಟಕ ಸರ್ಕಾರ ಸಚಿವ ಸಂಪುಟ ಮಾರ್ಚ್‌ 27ರಂದು ಮಾಡಿತ್ತು. ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯೂಎಸ್‌) ಪಟ್ಟಿಗೆ ಸೇರಿಸುವ ನಿರ್ಧಾರವನ್ನೂ ತೆಗೆದುಕೊಂಡಿತ್ತು.

‘2ಬಿಯಲ್ಲಿ ಮುಸ್ಲಿಮರಿದ್ದರು. ಧಾರ್ಮಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ಅದಕ್ಕಾಗಿ, ಮುಸ್ಲಿಮರನ್ನು ಆರ್ಥಿಕವಾಗಿ ದುರ್ಬಲ ವರ್ಗದ ಪಟ್ಟಿಗೆ ಸೇರಿಸಲಾಗಿದೆ. 2 ಬಿಯಲ್ಲಿ ಶೇ 4ರಷ್ಟಿದ್ದ ಮೀಸಲಾತಿಯನ್ನು ಶೇ 2ರಷ್ಟು ಒಕ್ಕಲಿಗರಿಗೆ, ಶೇ 2ರಷ್ಟನ್ನು ಲಿಂಗಾಯತರಿಗೆ ಹಂಚುವ ತೀರ್ಮಾನ ಮಾಡಲಾಗಿದೆ’ ಎಂದು ರಾಜ್ಯ ಸರ್ಕಾರ ತಿಳಿಸಿತ್ತು

lokesh

Recent Posts

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

39 mins ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

1 hour ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

3 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

3 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

4 hours ago

ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷ: ಇನ್ನೂ ಚೇತರಿಸಿಕೊಳ್ಳದ ಪಾಕ್‌

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ.…

5 hours ago