ಬೆಂಗಳೂರು : ಪೊಲೀಸರು ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು,ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜಬೇಕಿಲ್ಲ, ಎದೆಗುಂದಬೇಕಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೊಲೀಸರಿಗೆ ಅವಕಾಶ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾರ್ಯಕರ್ತರಿಗೆ ಅಭಯ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಜಯೇಂದ್ರ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸರು ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಅಂಜಬೇಕಿಲ್ಲ, ಎದೆಗುಂದಬೇಕಿಲ್ಲ. ಸಂವಿಧಾನ ನಮಗೆ ಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ. ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತೆ ಕಂಟ್ರೊಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ.
ಕಾರ್ಯಕರ್ತರ ನೆರವಿಗಾಗಿ ಕಂಟ್ರೊಲ್ ರೂಂ : ಪಕ್ಷದ ಕಾರ್ಯಕರ್ತರಿಗೆ ಯಾವುದೇ ರೀತಿ ಕಿರುಕುಳ ನೀಡುವುದು, ಬೆದರಿಕೆ ಹಾಕಿ ತೊಂದರೆ ನೀಡುವುದು ಮಾಡಿದರೆ ಅಂತಹವರ ವಿರುದ್ಧ ಹೋರಾಡಲು, ಕಾರ್ಯಕರ್ತರನ್ನು ರಕ್ಷಣೆ ಮಾಡಲು ರಾಜ್ಯದ ಎಲ್ಲಾ ಬಿಜೆಪಿ ಕಚೇರಿಗಳಲ್ಲಿ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವಂತೆ ಕಂಟ್ರೊಲ್ ರೂಂ ತರೆಯಲು ಚಿಂತನೆ ನಡೆಸುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.





