ಮೊನ್ನೆಯಷ್ಟೇ ( ಡಿಸೆಂಬರ್ 3 ) ಪ್ರಕಟಗೊಂಡ ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 119 ವಿಧಾನಸಭಾ ಕ್ಷೇತ್ರಗಳ ಪೈಕಿ ಒಟ್ಟು 64 ಕ್ಷೇತ್ರಗಳಲ್ಲಿ ಗೆಲ್ಲುವುದರ ಮೂಲಕ ಸ್ಪಷ್ಟ ಬಹುಮತ ಸಾಧಿಸಿತು. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ರೇವಂತ್ ರೆಡ್ಡಿ ಈ ಬಾರಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ಕೆಲಸಗಳನ್ನು ಮುಂದಾಳತ್ವ ವಹಿಸಿಕೊಂಡು ಮಾಡಿದರು.
ಇನ್ನು ಈ ಬಾರಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಈ ಹಿಂದಿನಿಂದಲೂ ಪರೋಕ್ಷವಾಗಿ ಗುರುತಿಸಿಕೊಂಡಿದ್ದ ರೇವಂತ್ ರೆಡ್ಡಿ ಇದೀಗ ಅಧಿಕೃತವಾಗಿ ತೆಲಂಗಾಣದ ಸಿಎಂ ಎಂದು ಆಯ್ಕೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಸಭೆಯ ಬಳಿಕ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ರೇವಂತ್ ರೆಡ್ಡಿ ಡಿಸೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.





