Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

ಮೂರು ದಿನವಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು.

ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪವನ್ನು ಬಿಜೆಪಿ ಹಿರಿಯ ಸದಸ್ಯ ಆರ್.ಅಶೋಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬ ಬಿಜೆಪಿ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಲು ಮುಂದಾದಾಗ ಮಧ್ಯಪ್ರವೇಶಿಸಿದ ಸಿಎಂ, ಮೂರು ದಿನವಾದರೂ ನಿಮಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಬುರುಡೆ ಹೊಡೆಯುತ್ತಿದ್ದೀರಿ. ಪದೇ ಪದೇ ಎದ್ದು ನಿಂತು ಮಾತನಾಡಿದರೆ, ರಭಸವಾಗಿ ಮಾತನಾಡಿದರೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆಯೇ ಎಂದು ಯತ್ನಾಳ್ ಅವರನ್ನು ಪ್ರಶ್ನಿಸಿದರು.

ತಾಳ್ಮೆ ಇರಲಿ ಸಭಾಧ್ಯಕ್ಷರು ಅವಕಾಶ ಕೊಟ್ಟಿಲ್ಲ. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪಕ್ಕೆ ಮಾತ್ರ ಅವಕಾಶ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಹೆಣ್ಣುಮಕ್ಕಳಿಗೆ ಅವಕಾಶ ಮಾಡಿಕೊಟ್ಟಿರುವುದನ್ನು ಬಿಜೆಪಿಯವರು ವಿರೋಧ ಮಾಡಿದಂತಿದೆ. ಉತ್ತರ ಕೊಡದೆ ಓಡಿಹೋದವರು, ಜನರು ಚುನಾವಣೆಯಲ್ಲಿ ನಿಮಗೆ ತಕ್ಕ ಪಾಠ ಕಲಿಸಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಎಲ್ಲರೂ ಎದ್ದುನಿಂತು ಮಾತನಾಡಿದರೂ ನಾವು ಹೆದರುವುದಿಲ್ಲ. ಜನ ಈ ರೀತಿಯ ತೀರ್ಪು ಕೊಟ್ಟರೂ ನಿಮಗೆ ಬುದ್ದಿ ಬಂದಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

ಹೆಣ್ಣುಮಕ್ಕಳ ಉಚಿತ ಪ್ರಯಾಣದ ಪರವೋ ವಿರುದ್ಧವೋ ಎಂಬುದನ್ನು ಬಿಜೆಪಿಯವರು ಹೇಳಲಿ ನಾವು ಚರ್ಚೆಗೆ ಉತ್ತರ ಕೊಡಲು ತಯಾರಿದ್ದೇವೆ. 2018ರಲ್ಲಿ ಆಶ್ವಾಸನೆ ಕೊಟ್ಟು ಓಡಿಹೋದವರು ನಿಮ್ಮ ಪ್ರಣಾಳಿಕೆಯಲ್ಲಿ ನಿಮ್ಮ ಮುಖವನ್ನು ನೋಡಿಕೊಳ್ಳಿ ಎಂದು ಟೀಕಾಪ್ರಹಾರ ನಡೆಸಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಭರವಸೆಗಳನ್ನು ನೀಡಿತ್ತು. ಅದರಲ್ಲಿ ನಮ್ಮ ಸರ್ಕಾರ ಮೂರು ಗ್ಯಾರಂಟಿಗಳನ್ನು ಈಡೇರಿಸಿದೆ. ನಾಲ್ಕನೇ ಗ್ಯಾರಂಟಿ ಈಡೇರಿಸುವ ಸಿದ್ದತೆಯಲ್ಲಿದ್ದೇವೆ. 6 ತಿಂಗಳ ಬಳಿಕ 5ನೇ ಗ್ಯಾರಂಟಿಯು ಅನುಷ್ಠಾನವಾಗಲಿದೆ. ಯಾರು ಏನೇ ಹೇಳಿದರೂ ಶೇ.100ಕ್ಕೆ ನೂರರಷ್ಟು 5 ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ ಎಂದು ಸದನಕ್ಕೆ ಭರವಸೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!