BREAKING NEWS

ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್‌) ನಿಯಮಿತದ ಟೆಂಡರ್‌ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಸುಮನ್, ‘ಎಫ್ಐಆರ್‌ನಲ‌್ಲಿ ಅರ್ಜಿದಾರರ ವಿರುದ್ಧದ ಆರೋಪ ಸಾಬೀತುಪಡಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಟೆಂಡರ್‌ಗೆ ಲಂಚ ನೀಡುವಂತೆ 30 ರಷ್ಟು ಕಮಿಷನ್ ಬೇಡಿಕೆ ಇಟ್ಟಿರುವ ಬಗ್ಗೆಯಾಗಲೀ, ಅದಕ್ಕಾಗಿ ಪ್ರಯತ್ನ ನಡೆಸಿರುವುದಾಗಲೀ ಅಥವಾ ನಿರ್ದಿಷ್ಟ ದಿನದಂದು ಲಂಚ ಕೊಡುವಂತೆ ಕೇಳಿದ ಬಗ್ಗೆಯಾಗಲೀ ಇನಿತೂ ಸಾಕ್ಷಿ ಇಲ್ಲ. ಅರ್ಜಿದಾರರು ಮತ್ತು ಲಂಚ ಪಡೆದ ಆರೋಪ ಎದುರಿಸುತ್ತಿರುವ ಪುತ್ರ ಪ್ರಶಾಂತ್‌ ಅವರಿಗೂ ಈ ವಿಚಾರದಲ್ಲಿ ಸಂಬಂಧವಿಲ್ಲ. ವಿರೂಪಾಕ್ಷಪ್ಪ ಅವರಿಗೀಗ 75 ವರ್ಷ. ನಾಲ್ಕು ಬಾರಿ ಶಾಸಕರು. ಮೇಲಾಗಿ ಹೃದಯ ಸಂಬಂಧಿತ ಸಮಸ್ಯೆ ಹೊಂದಿದ್ದಾರೆ. ವಿಚಾರಣೆಗೆ ಹಾಜರಾದರೆ ಲೋಕಾಯುಕ್ತ ಪೊಲೀಸರು ಬಂಧಿಸುವ ಭೀತಿ ಇದೆ. ಆದ್ದರಿಂದ, ನಿರೀಕ್ಷಣಾ ಜಾಮೀನು ನೀಡಬೇಕು’ ಎಂದು ಮನವಿ ಮಾಡಿದರು.

ವಿಳಂಬ: ಮಧ್ಯಾಹ್ನದ 12 ಗಂಟೆ ವೇಳೆಗೆ ಪ್ರಕರಣದ ವಿಚಾರಣೆ ಆರಂಭವಾಯಿತು. ಈ ವೇಳೆ ಪ್ರತಿವಾದಿ ಪ್ರಾಸಿಕ್ಯೂಷನ್‌ ಲೋಕಾಯುಕ್ತ ಪರ ಹಾಜರಾಗಬೇಕಿದ್ದ ಬಿ.ಬಿ.ಪಾಟೀಲ ಅವರು ತಡವಾಗಿ ಹಾಜರಾಗಿದ್ದು ವಿಶೇಷವಾಗಿತ್ತು. ನ್ಯಾಯಮೂರ್ತಿಗಳು ಆದೇಶದ ಅಂತಿಮ ಸಾಲುಗಳ ಉಕ್ತಲೇಖನ ನೀಡುವಾಗ ಪಾಟೀಲ ಅವರು ಗಡಿಬಿಡಿಯಲ್ಲಿ ಕೋರ್ಟ್ ಹಾಲ್‌ ಪ್ರವೇಶಿಸಿದರು.

ಇದಕ್ಕೂ ಮೊದಲು, ‘ಅರ್ಜಿದಾರರ ವಾದಕ್ಕೆ ಏನು ಉತ್ತರ ನೀಡುತ್ತೀರಿ’ ಎಂದು ನ್ಯಾಯಪೀಠ ಪ್ರಾಸಿಕ್ಯೂಷನ್‌ ಕಡೆ ತಿರುಗಿ ಪ್ರಶ್ನಿಸಿದಾಗ ಹಾಜರಿದ್ದ ಪಾಟೀಲ ಅವರ ಕಚೇರಿಯ ಕಿರಿಯ ವಕೀಲರು, ‘ನಮಗಿನ್ನೂ ಅರ್ಜಿದಾರರು ಕಾಪಿ ಸರ್ವ್‌ ಮಾಡಿಲ್ಲ. ತನಿಖಾಧಿಕಾರಿಯಿಂದ ಹೆಚ್ಚಿನ ವಿವರಣೆ ಪಡೆಯಬೇಕಿದೆ’ ಎಂದಷ್ಟೇ ಉತ್ತರಿಸಿದ್ದರು.

ಉಭಯತ್ರರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ‘ಪ್ರಕರಣದ ಕುರಿತು ಆಕ್ಷೇಪಣೆ ಸಲ್ಲಿಸಲು ಮತ್ತು ತನಿಖಾಧಿಕಾರಿಯಿಂದ ಅಗತ್ಯ ಸಲಹೆ ಸೂಚನೆ ಪಡೆಯಲು ಕಾಲಾವಕಾಶ ನೀಡುವಂತೆ ಲೋಕಾಯುಕ್ತ ಪರ ವಕೀಲರು ಕೋರಿದ್ದಾರೆ. ಹಾಗಾಗಿ, ಲೋಕಯುಕ್ತ ಪೊಲೀಸರು ದಾಖಲೆ ಸಲ್ಲಿಸುವರೆಗೂ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗುತ್ತಿದೆ’ ಎಂದು ತಿಳಿಸಿತು.

‘ಅರ್ಜಿದಾರ ಆರೋಪಿಯನ್ನು ಬಂಧಿಸಿದರೆ 5 ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ಪಡೆದು ಬಿಡುಗಡೆ ಮಾಡಬೇಕು. ಪ್ರತ್ಯಕ್ಷವಾಗಿಯಾಗಲೀ ಅಥವಾ ಅಪ್ರತ್ಯಕ್ಷ ರೀತಿಯಲ್ಲಾಗಲೀ ಪ್ರಕರಣದ ಸಾಕ್ಷ್ಯ ನಾಶಪಡಿಸಲು ಪ್ರಯತ್ನಿಸಬಾರದು. ಈ ಆದೇಶದ ಪ್ರತಿ ಲಭ್ಯವಾದ 48 ಗಂಟೆಗಳಲ್ಲಿ ತನಿಖಾಧಿಕಾರಿ ಮುಂದೆ ಶರಣಾಗಬೇಕು. ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಬೇಕು. ನ್ಯಾಯಾಲಯದ ಮುಂದಿನ ಆದೇಶದವರೆಗೆ ಕೆಎಸ್‌ಡಿಎಲ್‌ಗೆ ಕಚೇರಿಗೆ ಅರ್ಜಿದಾರರು ಹೋಗಬಾರದು’ ಎಂಬ ಷರತ್ತುಗಳೊಂದಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತು. ಪ್ರತಿವಾದಿ ಲೋಕಾಯುಕ್ತ ಪೊಲೀಸರು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 17 ಕ್ಕೆ ಮುಂದೂಡಿತು.

ಅರ್ಜಿಯಲ್ಲಿ ಏನಿದೆ?: ‘ನನ್ನ ವಿರುದ್ಧ ಕಾನೂನು ಬಾಹಿರವಾಗಿ ಮತ್ತು ಕಿರುಕುಳ ಕೊಡುವ ದುರುದ್ದೇಶದಿಂದ ಎಫ್‌ಐಆರ್ ದಾಖಲು ಮಾಡಲಾಗಿದೆ. ನಾನು ಲಂಚವನ್ನು ಕೇಳಿಯೂ ಇಲ್ಲ ಮತ್ತು ಪಡೆದೂ ಇಲ್ಲ. ಪ್ರಕರಣದಲ್ಲಿ ನನ್ನನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ವಿಚಾರಣೆ ವೇಳೆ ಪೊಲೀಸರು ನನ್ನನ್ನು ಬಂಧಿಸುವ ಭೀತಿ ಇದೆ. ಆದ್ದರಿಂದ, ನನಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣವೇನು?: ‘ವಿರೂಪಾಕ್ಷಪ್ಪ ಅವರ ಪುತ್ರರೂ ಆದ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳು ಟೆಂಡರ್‌ ಪ್ರಕ್ರಿಯೆಯಲ್ಲಿ 40 ಲಕ್ಷ ಲಂಚ ಪಡೆದಿದ್ದಾರೆ’ ಎಂದು ಆರೋಪಿಸಿ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ಇದೇ 2ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಕಲಂ 7 (ಎ) ಮತ್ತು (ಬಿ), 7 ಎ, 8, 9 ಮತ್ತು 10ರ ಅಡಿಯಲ್ಲಿ ದಾಖಲಿಸಿರುವ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಪ್ರಶಾಂತ್ ಮಾಡಾಳು ಎರಡನೇ ಆರೋಪಿ.

ಷರತ್ತುಗಳು

* ಆರೋಪಿ ವೈಯಕ್ತಿಕ  5 ಲಕ್ಷ ಮೊತ್ತದ ಬಾಂಡ್ ಸಲ್ಲಿಸಬೇಕು.

* ಇಬ್ಬರು ಭದ್ರತೆ ಕೊಡಬೇಕು.

* ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದು.

* ತನಿಖೆಗೆ ಸಹಕರಿಸಬೇಕು.

ಮುಂದಿನ ವಿಚಾರಣೆಯನ್ನು ಇದೇ 17ಕ್ಕೆ ನಿಗದಿಡಿಸಲಾಗಿದೆ.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

2 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

15 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

15 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

15 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

15 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

15 hours ago