Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ಸಂಪುಟ ಸಭೆ| ಪಂಚ ಗ್ಯಾರಂಟಿಗಳ ಪೈಕಿ ಯಾವುದೆಲ್ಲಾ ಘೋಷಣೆ: ಸಿದ್ದು ಸರ್ಕಾರದತ್ತ ಎಲ್ಲರ ಚಿತ್ತ

ಬೆಂಗಳೂರು: ಕಾಂಗ್ರೆಸ್ ಐದು ಘೋಷಣೆಗಳ ಪೈಕಿ ಯಾವುದನ್ನೆಲ್ಲಾ ಅಧಿಕೃತವಾಗಿ ಜಾರಿಗೆ ತರಲಾಗುತ್ತದೆ ಎಂಬ ಕುತೂಹಲ ಸದ್ಯಕ್ಕೆ ತೀವ್ರಗೊಂಡಿದೆ. ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಶುಕ್ರವಾರ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಐದು ಗ್ಯಾರಂಟಿಗಳ ಕುರಿತಾದ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಐದೂ ಗ್ಯಾರಂಟಿಗಳು ಏಕಕಾಲಕ್ಕೆ ಜಾರಿಗೆ ಬರುತ್ತಾ?
ಪಂಚ ಗ್ಯಾರಂಟಿಗಳ ಪೈಕಿ ಎಲ್ಲವನ್ನೂ ಒಂದೇ ಬಾರಿಗೆ ಜಾರಿಗೆ ತರಲಾಗುತ್ತದಾ ಎಂಬ ಪ್ರಶ್ನೆ ಸಹಜವಾಗಿ ಉದ್ಭವವಾಗುತ್ತಿದೆ. ಆದರೆ ಕೆಲವು ಮೂಲಗಳ ಪ್ರಕಾರ ಮೊದಲ ಹಂತದಲ್ಲಿ ಮೂರು ಯೋಜನೆಗಳನ್ನು ಜಾರಿಗೆ ತರುವ ಸಾಧ್ಯತೆ ದಟ್ಟವಾಗಿದೆ.

ಉಳಿದ ಎರಡು ಯೋಜನೆಗಳನ್ನು ಮತ್ತಷ್ಟು ಅಧ್ಯಯನ ನಡೆಸಿ ಜಾರಿಗೆ ತರುವ ಸಾಧ್ಯತೆ ಇದೆ. ಐದು ಗ್ಯಾರಂಟಿಗಳ ಪೈಕಿ 200 ಯೂನಿಟ್ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಅನ್ನಭಾಗ್ಯ ಯೋಜನೆಗಳನ್ನು ಮೊದಲ ಹಂತದಲ್ಲಿ ಜಾರಿಗೊಳಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ತಿಳಿದುಬಂದಿದೆ.

ಷರತ್ತುಗಳು ಅನ್ವಯ?
ಐದು ಗ್ಯಾರಂಟಿಗಳಿಗೆ ಷರತ್ತುಗಳನ್ನು ಅನ್ವಯ ಮಾಡುವ ಸಾಧ್ಯತೆಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಈಗಾಗಲೇ ಹಣಕಾಸು ಇಲಾಖೆ ಸೇರಿದಂತೆ ವಿವಿಧ ಇಲಾಖಾ ಸಚಿವರುಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಿದ್ದಾರೆ.

ಬುಧವಾರ ಸಚಿವರ ಜೊತೆಗಿನ ಸಭೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೂಡಾ ರಾಜ್ಯದ ಹಣಕಾಸು ಸ್ಥಿತಿಗತಿಯ ಬಗ್ಗೆ ಪೂರ್ಣ ವಿವರ ನೀಡಿದ್ದಾರೆ. ಇನ್ನು ಐದು ಗ್ಯಾರಂಟಿಗಳ ಪೈಕಿ 200 ಯೂನಿಟ್ ಪ್ರತಿ ಮನೆಗೆ ವಿದ್ಯುತ್ ಕೊಡಲು 12,000 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಬೀಳಲಿದೆ ಎಂದು ಅಂದಾಜಿಸಲಾಗಿದೆ.

ಅದೇ ರೀತಿಯಲ್ಲಿ ಅನ್ನಭಾಗ್ಯ ಯೋಜನೆಗೆ 7500 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಬೀಳುವ ಸಾಧ್ಯತೆ ಇದೆ. ಜೊತೆಗೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ 3000 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಬೀಳಲಿದೆ ಎಂದು ಅಂದಾಜು ಮಾಡಲಾಗಿದೆ.

ಸದ್ಯಕ್ಕೆ ಮೂರು ಯೋಜನೆಗಳನ್ನು ಜಾರಿಗೆ ತಂದಲ್ಲಿ ಒಟ್ಟಾರೆ 22 ಸಾವಿರ ಕೋಟಿಯಿಂದ 25,000 ಕೋಟಿ ಆರ್ಥಿಕ ಹೊರೆ ಸರ್ಕಾರದ ಮೇಲೆ ಆಗಬಹುದು ಎಂದು ಆರ್ಥಿಕ ಇಲಾಖೆ ಅಂದಾಜು ಮಾಡಿದೆ.

ಈ ನಿಟ್ಟಿನಲ್ಲಿ ಕೆಲವೊಂದು ಷರತ್ತುಗಳನ್ನು ಅನ್ವಯ ಮಾಡಿದ್ದಲ್ಲಿ ಆರ್ಥಿಕ ಹೊರೆ ಕಡಿತವಾಗಬಹುದು. ಈ ಎಲ್ಲಾ ನಿಟ್ಟಿನಲ್ಲಿ ಸರ್ಕಾರ ಆಲೋಚನೆ ಮಾಡುತ್ತಿದೆ. ಅಂತಿಮವಾಗಿ ಶುಕ್ರವಾರ 11 ಗಂಟೆಗೆ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತಾಗಿ ಚರ್ಚೆ ನಡೆಸಿ ಅಂತಿಮ ಘೋಷಣೆಯನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!