Mysore
28
clear sky

Social Media

ಸೋಮವಾರ, 16 ಫೆಬ್ರವರಿ 2026
Light
Dark

ವಿಸಿ ನಾಲೆಗೆ ಉರುಳಿದ ಕಾರು : ನಾಲ್ವರ ದುರ್ಮರಣ

ಮಂಡ್ಯ : ವಿಸಿ ನಾಲೆಗೆ ಕಾರು ಬಿದ್ದು ವ್ಯಕ್ತಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಕಾರು ನಾಲೆಗೆ ಬಿದ್ದ ಪರಿಣಾಮ ನಾಲ್ಕು ಮಂದಿ ಮಹಿಳೆಯರು ಮೃತಪಟ್ಟ ಘಟನೆ ದೊಡ್ಡಮುಲಗೂಡು ಮತ್ತು ಗಾಮನಹಳ್ಳಿ ನಡುವೆ ಶನಿವಾರ ರಾತ್ರಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಗ್ರಾಮದ ಹೊರವಲಯದ ತುರುಗನೂರು ಬ್ರಾಂಚ್‌ನ ವಿಶ್ವೇಶ್ವರಯ್ಯ ಉಪ ನಾಲೆಗೆ ಇಂಡಿಕಾ ಕಾರು ಉರುಳಿ ಬಿದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಟಿ.ನರಸೀಪುರ ತಾಲೂಕು ಗೊರವನಹಳ್ಳಿ ಗ್ರಾಮದ ದೊಡ್ಡಯ್ಯ ಎಂಬುವರ ಪತ್ನಿ ಮಹದೇವಮ್ಮ, ಸಂಬಂಧಿಕರಾದ ರೇಖಾ, ಸಂಜನಾ, ಮಹದೇವಿ ಮೃತಪಟ್ಟಿದ್ದಾರೆ.

ನಾಲ್ವರು ಮಹಿಳೆಯರು ನಾಲೆಯ ನೀರಿನಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಕಾರು ಚಾಲಕ ಮನೋಜ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ ನಾಲ್ವರು ಮಹಿಳೆಯರ ಶವವನ್ನು ನೀರಿನಿಂದ ಹೊರ ತೆಗೆದಿದ್ದಾರೆ‌.

ತಡೆಗೋಡೆಗೆ ಡಿಕ್ಕಿ ಹೊಡೆದು ನಾಲೆಗೆ ಕಾರು ಬಿದ್ದಿದೆ. ಚಾಲಕ ವೇಗವಾಗಿ ಕಾರನ್ನು ಚಲಾಯಿಸಿದ್ದರಿಂದ ಈ ದುರ್ಘಟನೆ ಸಂಭವಿಸರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹಗಳ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ್, ಎಸ್.ಪಿ ಯತೀಶ್ ಭೇಟಿ ನೀಡಿದ್ದಾರೆ.

ಆದಿಚುಂಚನಗಿರಿಯಲ್ಲಿ ಮಹದೇವಮ್ಮ ಅವರ ಮನೆಯವರು ಆಯೋಜನೆ ಮಾಡಲಿದ್ದ ದೇವರ ಕಾರ್ಯಕ್ಕೆ ಸಂಬಂಧಿಕರನ್ನು ಆಹ್ವಾನಿಸಲು ಗೊರವನಹಳ್ಳಿಯಿಂದ ದೊಡ್ಡಮಲಗೂಡಿಗೆ ಚಾಲಕ ಸೇರಿ ಐದು ಮಂದಿ ಹೋಗುತ್ತಿದ್ದರು. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!