Mysore
28
broken clouds

Social Media

ಬುಧವಾರ, 14 ಜನವರಿ 2026
Light
Dark

ಕಾಂಗ್ರೆಸ್‌ ಸರ್ಕಾರ ಕಮಿಷನ್‌ ಹಿಂದೆ ಬಿದ್ದಿಲ್ಲ, ಕಮಿಷನ್‌ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು :ಕಾಂಗ್ರೆಸ್ ನೇತೃತ್ವದ ಸರ್ಕಾರ ಕಮಿಷನ್ ಹಿಂದೆ ಬಿದ್ದಿಲ್ಲ, ಕಮಿಷನ್ ಹಗರಣದ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ. ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಗುತ್ತಿಗೆದಾರರ ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಸಿದಂತೆ ತಮ್ಮ ಸರ್ಕಾರದ ವಿರುದ್ಧದ ಆರೋಪಗಳಿಗೆ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ ಅವರು, ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು.

ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಒಂದು ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ ಶೇ.40 ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದಿದ್ದಾರೆ.

ಬಿಜೆಪಿ ಅವಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ ಎಂದು ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ ಶೇ.15 ಕಮಿಷನ್ ಆರೋಪ ಸತ್ಯಕ್ಕೆ ದೂರವಾಗಿದೆ. ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು ಶೇ.40ರಿಂದ ಶೇ.15ಕ್ಕೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, ಪಿಓಡಬ್ಲ್ಯೂ ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕಾ ಎಂದು ಕಿಡಿಕಾರಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!