Mysore
17
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ಕಾಂಗ್ರೆಸ್ ಸರ್ಕಾರ ಅಧಿಕಾರದ ದಾಹದಲ್ಲಿ ಪರಸ್ಪರ ಸ್ಪರ್ಧೆಗೆ ಇಳಿದಿದೆ : ಮಾಜಿ ಸ್ಪೀಕರ್ ಕಾಗೇರಿ‌

ಚಿತ್ರದುರ್ಗ : ರಾಜ್ಯ ಸರ್ಕಾರ ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ತಲ್ಲಿನವಾಗಿದೆ. ಜನರ ಕಷ್ಟ ಸುಖಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಧಿಕಾರದ ದಾಹದಲ್ಲಿ ಪರಸ್ಪರ ಸ್ಪರ್ಧೆಗೆ ಇಳಿದಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದ್ದಾರೆ.

ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಕೊಳಾಳ್ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯಿಂದ ಬರ ಅಧ್ಯಯನ ಮಾಡುತ್ತಿದ್ದೇವೆ. ರೈತರ ಜಮೀನುಗಳಿಗೆ ತೆರಳಿ ಬೆಳಹಾನಿ ವೀಕ್ಷಿಸಿದ್ದೇವೆ. ಮಳೆ ಇಲ್ಲದೆ ಮೆಕ್ಕೆಜೋಳ ಒಣಗಿ ಹೋಗಿದೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತ ನಷ್ಠ ಅನುಭವಿಸಿದ್ದಾ‌ನೆ ಎಂದು ಬೇಸರ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ನಮಗೆ ಪರಿಹಾರ ನೀಡಬೇಕು ಎಂದು ರೈತರ ದ್ವನಿ ಇದೆ. ನಮ್ಮ ಪಕ್ಷದಿಂದ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ. ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ನಮ್ಮ ಪ್ರವಾಸದಿಂದ ಸರ್ಕಾರ ಎಚ್ಚೆತ್ತುಕೊಂಡು, ಈಗ ಜಿಲ್ಲೆಗಳಿಗೆ 5-10 ಕೋಟಿ ರೂ.ಹಣವನ್ನು ಬಿಡುಗಡೆ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಿಂದ ರೈತರಿಗೆ ಕಷ್ಟ ಆಗುತ್ತಿದ್ದು, 7 ಗಂಟೆ ವಿದ್ಯುತ್ ನೀಡುವ ಕೆಲಸ ತಕ್ಷಣದಿಂದ ಮಾಡಬೇಕು. ರಾಜ್ಯದ ಜನರ ಹಿತ ಕಾಯುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ಸರ್ಕಾರ ಕೋಮುಭಾವನೆ ಕೆರಳಿಸುವ ಚಟುವಟಿಕೆಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಮ್ಮ ಸರ್ಕಾರದಲ್ಲಿನ ಕಾಮಗಾರಿಗಳನ್ನು ಪೂಜೆ ಮಾಡಿ ಇವರು ಪೋಸ್ ನೀಡುತ್ತಿದ್ದಾರೆ. ಸಿದ್ದರಾಮಯ್ಯ 2 ದಿನ ಸಿಎಂ ಆಗಿ ಅಧಿಕಾರದಲ್ಲಿ ಇರುತ್ತೀನೋ, ಬಿಡುತ್ತೀನೋ ಎನ್ನುವಂತಾಗಿದೆ. ಈ ಮಧ್ಯ ಡಿಸಿಎಂ ಹಾಗೂ ಸಿಎಂ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಸ್ಪರ್ಧೆ ನಡೆಯುತ್ತಿದೆ ಎಂದು ತಿವಿದಿದ್ದಾರೆ.

ರಾಜ್ಯದಲ್ಲಿ ರೈತರ ಸ್ಥಿತಿ ಗಂಭೀರವಾಗಿದೆ. ಮುಂದಿನ ಅಧಿವೇಶನದಲ್ಲಿ ನಾವು ಈ ಎಲ್ಲ ಸಮಸ್ಯೆಗಳನ್ನು ಪ್ರಸ್ತಾಪ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಜನಪರ ಕಾಳಜಿ ಇದೆ. 3 ತಂಡಗಳನ್ನು ರಾಜ್ಯಕ್ಕೆ ಕಳುಹಿಸಿ ವರದಿಯನ್ನು ಕೇಂದ್ರ ಪಡೆಯುತ್ತಿದೆ ಎಂದು ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರಿಗೆ ಕಾಗೇರಿ ತಿರುಗೇಟು ನೀಡಿದ್ದಾರೆ.

ರಾಜ್ಯದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ನೀಡಿದ್ದಾರೆ. ಇವರ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದ್ದಾರೆ. ಮೋದಿ ಸರ್ಕಾರ ಕಾಲಕ್ಕೆ ಹಣ ಬಿಡುಗಡೆ ಮಾಡಿ, ಕರ್ನಾಟಕಕ್ಕೆ ಆರ್ಥಿಕವಾಗಿ ಅನುಕೂಲ ಮಾಡಿದೆ. ಆದರೆ ಈ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕಿದೆ ಎಂದು ಹರಿಹಾಯ್ದಿದ್ದಾರೆ.

ಕೇಂದ್ರಸವರು ಇನ್ನೂ ಕೂಡ ಹಣ ನೀಡುತ್ತಿದ್ದರೂ, ಕಾಂಗ್ರೆಸ್‌ನವರು ಅವರತ್ತಲೇ ಬೊಟ್ಟು ಮಾಡುವುದು ಬೇಜವ್ದಾರಿತನದ ಪರಮಾವಧಿ. ಜನರ ಕಷ್ಟಕ್ಕೆ ಸ್ಪಂಧಿಸುವ ಮಾನವೀಯ ಗುಣ ಇರಬೇಕಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ವಾಗ್ದಾಳಿ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!