Mysore
20
overcast clouds

Social Media

ಬುಧವಾರ, 24 ಜೂನ್ 2026
Light
Dark

ಕಾಂಗ್ರೆಸ್ ಮ್ಯಾನಿಫೆಸ್ಟೋ ಮುಸ್ಲಿಂ ಲೀಗ್ ಪ್ರಣಾಳಿಕೆಯಂತಿದೆ : ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಹುಬ್ಬಳ್ಳಿ : ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದೆ. ಅದರಲ್ಲಿ ಆಕಾಶ ಮತ್ತು ಪಾತಾಳವನ್ನು ಒಂದು ಮಾಡಿ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ನೋಡಿದರೆ ಇವರು 40 ವರ್ಷ ಅಧಿಕಾರ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಭಿವೃದ್ಧಿ ಆಗಿಲ್ಲ ಎನ್ನುವುದು ಅರಿವಾಗುತ್ತದೆ. ದುರಾಡಳಿತ ಮಾಡಿ ಚುನಾವಣೆ ಹತ್ತಿರ ಬಂದಾಗ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ರೈತರು, ದಲಿತರ ಹೆಸರಿನಲ್ಲಿ ಪುಂಖಾನುಪುಂಖವಾಗಿ ಸುಳ್ಳು ಹೇಳುತ್ತಿದೆ ಎಂದು ಹರಿಹಾಯ್ದರು.

ಈ ಹಿಂದೆ ಉತ್ತರಾಖಂಡದಲ್ಲಿ ಸಹ ಇದೇ ತರಹ ಕಾಂಗ್ರೆಸ್ ಸುಳ್ಳು ಭರವಸೆ ನೀಡಿತ್ತು. ಅದರೆ ಅಲ್ಲಿನ ಜನರು ಸೊಪ್ಪು ಹಾಕದೇ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕೂಡಾ ಜನರು ಕಾಂಗ್ರೆಸ್‌ನ ಸುಳ್ಳು ಭರವಸೆಯನ್ನು ನಂಬಲ್ಲ ಎಂದು ಲೇವಡಿ ಮಾಡಿದರು.
ಇದೀಗ ಮುಸ್ಲಿಂ ಮೀಸಲಾತಿ ವಾಪಸ್‌ ತರುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. ಮುಸ್ಲಿಂ ಮೀಸಲಾತಿ ಜಾರಿಗೆ ತರುವುದು ಸಂವಿಧಾನ ವಿರೋಧಿಯಾಗಿದೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಸ್ಪಷ್ಟವಾಗಿ ತಿಳಿಸಿದೆ. ಆದಾಗ್ಯೂ ಕೂಡಾ ಕಾಂಗ್ರೆಸ್ ಮತ ಬ್ಯಾಂಕ್‌ಗಾಗಿ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಒಂದು ವೇಳೆ ಬಂದಲ್ಲಿ ಮುಸ್ಲಿಂ ಮೀಸಲಾತಿ ಜಾರಿಗೆ ನಾವು ತೀವ್ರವಾಗಿ ವಿರೋಧ ಮಾಡುತ್ತೇವೆ ಎಂದರು.
ಮುಸ್ಲಿಂ ಮೀಸಲಾತಿ ಜಾರಿ ಮಾಡೋದು ಹಿಂದೂಗಳಿಗೆ ಅಪಮಾನ ಮಾಡಿದಂತೆ. ಇದೀಗ ಕಾಂಗ್ರೆಸ್ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿದೆ.

ಈ ಹಿಂದೆ ನಾವು ಪಿಎಫ್ಐ ಅನ್ನು ಬ್ಯಾನ್‌ ಮಾಡಿದಕ್ಕಾಗಿ ಇದೀಗ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಭಾಗವಾಗಿ ಆರ್.ಎಸ್.ಎಸ್, ಬಜರಂಗದಳವನ್ನು ನಿಷೇಧ ಮಾಡುವುದಾಗಿ ಘೋಷಣೆ ಮಾಡಿದೆ. ದೇಶವನ್ನು ಏನು ಮಾಡಲು ಹೊರಟಿದ್ದೀರಿ ಎಂದು ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಕೇಳಲು ಇಚ್ಛೆ ಪಡುತ್ತೇನೆ ಎಂದರು.
ಇದು ತುಷ್ಟೀಕರಣದ ಪರಾಕಾಷ್ಠೆ, ಕಾಂಗ್ರೆಸ್ ಪಕ್ಷದ ಧೋರಣೆ ನೋಡಿದರೆ ಅವರ ಪಕ್ಷ ಭಯೋತ್ಪಾದನೆ ಪರವಾಗಿ ಇದೆ ಎನ್ನುವುದು ಸಾಬೀತಾಗಿದೆ. ಸದ್ಯ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್ ಮ್ಯಾನಿಫೆಸ್ಟೋ ಇರಬಹುದು ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಈ ಹಿಂದೆ ಲೋಕಾಯುಕ್ತವನ್ನು ನಿಶಕ್ತಿ ಮಾಡಿದ್ದ ಕಾಂಗ್ರೆಸ್ ಇದೀಗ ಲೋಕಾಯುಕ್ತವನ್ನು ಬಲಿಷ್ಠಗೊಳಿಸಲು ತಿಳಿಸಿದೆ. ಕಾಂಗ್ರೆಸ್ ಪಕ್ಷದ ನಾಯಕರೇ ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಕಾಂಗ್ರೆಸ್ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಅವರು ಅಧಿಕಾರಕ್ಕೆ ಬರುವುದು ತಿರುಕನ ಕನಸು ಎಂದು ಹೇಳಿದರು.

ಇನ್ನು ರಾಜಕೀಯದಲ್ಲಿ ಒಳಹೊಡೆತ, ಹೊರ ಒಡೆತ ಇದೆ ಎಂಬ ಜಗದೀಶ್‌ ಶೆಟ್ಟರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್‌ ಜೋಶಿ, ಮೇ.13 ರಂದು ಒಳಹೊಡೆತ, ಹೊರ ಹೊಡೆತ ಗೊತ್ತಾಗುತ್ತದೆ. ಈ ಬಾರಿ ಸೆಂಟ್ರಲ್ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆದು ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಜಗದೀಶ್‌ ಶೆಟ್ಟರ್‌ಗೆ ಪ್ರಲ್ಹಾದ ಜೋಶಿಯವರು ತಿರುಗೇಟು ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!