BREAKING NEWS

ಭ್ರಷ್ಟಾಚಾರ ನಿರ್ಮೂಲನೆ, ಹಸಿವು ಮುಕ್ತ ಕರ್ನಾಟಕ ಸರ್ಕಾರದ ಆದ್ಯತೆ: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿಧಾನ ಮಂಡಲ ಜಂಟಿ ಅಧಿವೇಶನ ಇಂದು (ಜುಲೈ 3) ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದ್ದಾರೆ.

ಜುಲೈ 7ಕ್ಕೆ 14ನೇ ಬಾರಿ ಸಿಎಂ ಸಿದ್ದರಾಮಯ್ಯ ಬಜೆಟ್​ ಮಂಡಿಸಲಿದ್ದಾರೆ. ಒಟ್ಟು 10 ದಿನಗಳ ಕಾಲ ವಿಧಾನಮಂಡಲ ಜಂಟಿ ಬಜೆಟ್ ಅಧಿವೇಶನ ನಡೆಯಲಿದೆ. 16ನೇ ವಿಧಾನಸಭೆಯ ಮೊದಲ ಅಧಿವೇಶನದಲ್ಲಿ ಹಲವು ವಿಷಯ ಪ್ರಸ್ತಾಪವಾಗಲಿದೆ.

ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು. ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲಾ ಸಮುದಾಯಗಳ ಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಕುವೆಂಪು ಅವರ ಸರ್ವಜನಾಂಗದ ಶಾಂತಿ ತೋಟ ತತ್ವದಡಿ ಕೆಲಸ ಮಾಡುತ್ತಿದ್ದೇವೆ. ಬಸವಣ್ಣ, ಸರ್ವಜ್ಞ ಸೇರಿ ಅನೇಕ ಸಂತರು ಶಾಂತಿ ತತ್ವ ಪಾಲನೆ ಮಾಡಲಾಗುತ್ತಿದೆ ಎಂದರು.

ಭ್ರಷ್ಟಾಚಾರವೆಂಬ ಪಿಡುಗು ಬಹುತೇಕ ಸಾಂಸ್ಥಿಕೀಕರಣಗೊಂಡಿದೆ. ಭ್ರಷ್ಟಾಚಾರದ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ನಿರ್ಮೂಲನೆ ಮಾಡಲು ರಾಜ್ಯ ಸರ್ಕಾರ ಆಡಳಿತಾತ್ಮಕ ಮತ್ತು ಶಾಸಕಾಂಗ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ರಾಜ್ಯ ಸರ್ಕಾರವು ಜನಕೇಂದ್ರಿತ ಆರ್ಥಿಕತೆಗೆ ಒತ್ತು ನೀಡಲಿದೆ ಎಂದು ಹೇಳಿದರು.

ಆರ್ಥಿಕ ಸಂಕಷ್ಟದಿಂದ ಹೊರಬರುವುದು ಸರ್ಕಾರದ ಆದ್ಯತೆ: ದೇಶದ ಅಭಿವೃದ್ಧಿಯಲ್ಲಿ ಸಾಕಷ್ಟು ಕೊಡುಗೆ ನೀಡಿರುವ ಕರ್ನಾಟಕ ರಾಜ್ಯ ಇಂದು ಆರ್ಥಿಕ ಮುಗ್ಗಟ್ಟಿನ ಸ್ಥಿತಿಗೆ ತಲುಪಿದೆ. ಕರ್ನಾಟಕ ರಾಜ್ಯವನ್ನು ಆರ್ಥಿಕ ಸಂಕಷ್ಟದಿಂದ ಹೊರತರುವುದು ನೂತನ ಕಾಂಗ್ರೆಸ್ ಸರ್ಕಾರದ ಆದ್ಯತೆಯಾಗಿದೆ ಎಂದು ಗೆಹ್ಲೋಟ್ ಹೇಳಿದರು.

ಸಂಕುಚಿತ ಮನಸ್ಸುಗಳು ವಿವಿಧ ಸಮುದಾಯಗಳ ನಡುವೆ ಒಡಕು ಮತ್ತು ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುತ್ತವೆ. ಅಂತಹ ಮನಃಸ್ಥಿತಿಯ ಜನರು ಸಮಾಜದ ವಿವಿಧ ಹಂತಗಳಲ್ಲಿ ಇನ್ನೂ ಉಳಿದಿದ್ದಾರೆ ಎಂದು ಭಾಷಣದಲ್ಲಿ ಹೇಳಿದ ರಾಜ್ಯಪಾಲರು, ಶಾಂತಿಯುತ ಮತ್ತು ಪರಸ್ಪರ ಪ್ರೀತಿಸುವ ಸಮಾಜವನ್ನು ನಿರ್ಮಿಸಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಬೇರೂರಿ ಹೋಗಿದೆ ಎಂದರೆ ಹಲವು ಕಾರಣಗಳಿಂದ ಅದು ಬಹುತೇಕ ಸಾಂಸ್ಥೀಕರಣಗೊಂಡಿದೆ. ಇದನ್ನು ನಿರ್ಮೂಲನೆ ಮಾಡುವುದು ದೊಡ್ಡ ಸವಾಲಾಗಿದೆ. ಈ ಸವಾಲನ್ನು ಎದುರಿಸಲು ಮತ್ತು ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತೊಗೆಯಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಉಭಯ ಸದನಗಳ ಸದಸ್ಯರನ್ನು ಮನವಿ ಮಾಡಿಕೊಂಡರು.

ಈ ನಿಟ್ಟಿನಲ್ಲಿ ಸರ್ಕಾರವು ಅಗತ್ಯವಿರುವ ಎಲ್ಲಾ ಆಡಳಿತಾತ್ಮಕ ಮತ್ತು ಶಾಸಕಾಂಗ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

‘ಅನ್ನ ಭಾಗ್ಯ’ ಯೋಜನೆಯಡಿ ರಾಜ್ಯ ಸರ್ಕಾರದ ಹೆಚ್ಚುವರಿ ಐದು ಕೆಜಿ ಅಕ್ಕಿ ಹಂಚಿಕೆಯನ್ನು ನೇರ ಲಾಭದ ರೂಪದಲ್ಲಿ ಪ್ರತಿ ವ್ಯಕ್ತಿಗೆ ಕೆಜಿಗೆ 34 ರೂಪಾಯಿಗಳಂತೆ ನೇರವಾಗಿ ಬಿಪಿಎಲ್ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ಪ್ರತಿ ತಿಂಗಳು ಹಣ ವರ್ಗಾವಣೆ ಮಾಡಲಾಗುವುದು ಎಂದು ರಾಜ್ಯಪಾಲರು ಹೇಳಿದರು.

ಎಲ್ಲಾ ಬಡ ಕುಟುಂಬಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡುವವರೆಗೆ ಪರ್ಯಾಯವಾಗಿ ಹಣವನ್ನು ಖಾತೆಗೆ ಹಾಕುವ ವ್ಯವಸ್ಥೆ ಮುಂದುವರಿಯುತ್ತದೆ, ‘ಅನ್ನ ಭಾಗ್ಯ’ ಯೋಜನೆ ಮತ್ತು ‘ಇಂದಿರಾ ಕ್ಯಾಂಟೀನ್’ ಮೂಲಕ ರಾಜ್ಯದ ಜನರನ್ನು ಸರ್ಕಾರ ಹಸಿವು ಮುಕ್ತಗೊಳಿಸಲಿದೆ ಎಂದು ಹೇಳಿದರು.

ಹಸಿವು ಮುಕ್ತ ಕರ್ನಾಟಕ: ಇಂದಿರಾ ಕ್ಯಾಂಟೀನ್ ಮೂಲಕ ಸರ್ಕಾರ ಹಸಿವು ಮುಕ್ತ ಕರ್ನಾಟಕ ರಾಜ್ಯ ಸ್ಥಾಪನೆಗೆ ಮಾಡಲಿದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು ಮುಂತಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲು ಮುಂದಾಗಿದೆ.

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್​ವರೆಗೆ ಉಚಿತ ವಿದ್ಯುತ್​ ಕೊಡಲಾಗುತ್ತದೆ. ಈ ಯೋಜನೆಯಿಂದ ಸುಮಾರು 2.14 ಕೋಟಿ ಕುಟುಂಬಕ್ಕೆ ಅನುಕೂಲ ಆಗಲಿದೆ. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಹಾಕಲಾಗುತ್ತದೆ. ನನ್ನ ಸರ್ಕಾರ ಆಡಳಿತವನ್ನು ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತದೆ. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ ಎಂದರು.

ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ: ಇಂದಿನಿಂದ 10 ದಿನ ವಿಧಾನಮಂಡಲ​​​ ಅಧಿವೇಶನ ಹಿನ್ನೆಲೆ ವಿಧಾನಸೌಧ ಸುತ್ತ 2 ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ. 2 ಕಿ.ಮೀ. ವ್ಯಾಪ್ತಿಯಲ್ಲಿ ಪ್ರತಿಭಟನೆ, ಧರಣಿ ನಡೆಸುವಂತಿಲ್ಲ. ವಿಧಾನಸೌಧದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ‌ ಶ್ರೀನಿವಾಸಗೌಡ ನೇತೃತ್ವದಲ್ಲಿ ಮೂವರು ಡಿಸಿಪಿ, 15 ಎಸಿಪಿ, 80 ಇನ್ಸ್​ಪೆಕ್ಟರ್​ಗಳು ಸೇರಿದಂತೆ ವಿಧಾನಸೌಧ ಸುತ್ತಮುತ್ತ 1500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ವಿರೋಧ ಪಕ್ಷದ ನಾಯಕರ ಅನುಪಸ್ಥಿತಿ: ಕರ್ನಾಟಕ ವಿಧಾನ ಮಂಡಲ ಅಧಿವೇಶನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನ ಸಭೆ ಪ್ರತಿಪಕ್ಷ ನಾಯಕನಿಲ್ಲದೆ ಕಲಾಪ ನಡೆಯುತ್ತಿದೆ. ಪ್ರಮುಖ ವಿರೋಧ ಪಕ್ಷ ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆಯಲ್ಲಿ ಹೈಕಮಾಂಡ್ ಮತ್ತು ರಾಜ್ಯ ಬಿಜೆಪಿ ಇನ್ನೂ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನ ಆಯ್ಕೆಗೆ ದೆಹಲಿ ಬಿಜೆಪಿಯಿಂದ ವೀಕ್ಷಕನ್ನು ಬೆಂಗಳೂರಿಗೆ ಕಳುಹಿಸಲಾಗಿದೆ.

andolanait

Recent Posts

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

32 mins ago

ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಯುವಕನ ಭೀಕರ ಕೊಲೆ

ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆ ನಡೆದಿದ್ದು, ಯುವಕನೊಬ್ಬನನ್ನು ದುಷ್ಕರ್ಮಿಗಳು ಅತ್ಯಂತ ಬರ್ಬರವಾಗಿ…

1 hour ago

ಮಲ್ಲಯ್ಯನಪುರ ಗುಡ್ಡದಲ್ಲಿ ಥೋರಿಯಂ ಖನಿಜ ನಿಕ್ಷೇಪ ಪತ್ತೆ

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…

6 hours ago

ಓದುಗರ ಪತ್ರ: ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಸ್ಥಳಾಂತರಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…

7 hours ago

ಓದುಗರ ಪತ್ರ: ಕಾಣಿಕೆ ದುರುಪಯೋಗ ತಡೆಗೆ ಸರ್ಕಾರ ಮುಂದಾಗಲಿ

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…

7 hours ago

ಓದುಗರ ಪತ್ರ: ಮರದ ಕೆಳಗಿರುವ ವಿದ್ಯುತ್ ಕೇಬಲ್ ತೆರವುಗೊಳಿಸಿ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…

7 hours ago