Mysore
23
mist

Social Media

ಶನಿವಾರ, 28 ಫೆಬ್ರವರಿ 2026
Light
Dark

ಮೊದಲ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ ಸಂಕಲ್ಪ: ಸಿದ್ದರಾಮಯ್ಯ

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ  ವಿಷಯದಲ್ಲಿ  ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು  ಪಿ. ಟಿ.ಸಿ.ಎಲ್. ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞ ರೊಂದಿಗೆ ಸಭೆ ನಡೆಸಿ ಚರ್ಚಿಸಿದ ಮುಖ್ಯಮಂತ್ರಿ, ದಲಿತರ ಜಮೀನು ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿ ಟಿ ಸಿ ಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ವಿವರಿಸಿದರು.

ಮತ್ತೆ ಮತ್ತೆ ಯಾವುದೇ ವಿವಾದ ಇರಬಾರದು, ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಕೇಳಿದ್ದೇನೆ. ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ.  ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೆ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.

ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸೇರಿದಂತೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಕೆ. ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ನಾಗೇಂದ್ರ, ಕೆ.ಎನ್. ರಾಜಣ್ಣ, ಆರ್.ಬಿ.ತಿಮ್ಮಾಪುರ ಹಾಗೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹಿರಿಯ ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!