ಚಿಕ್ಕಬಳ್ಳಾಪುರ : ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಮತ್ತು ಮಗ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ದುರ್ದೈವಿಗಳು.
ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳು. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ವ್ಯಾಪಾರಕ್ಕಾಗಿ ಬುಧವಾರ ಸಂಜೆ ಭೂಚನಹಳ್ಳಿ ಬಳಿಯ ಕೆರೆಗೆ ತಾವರೆ ಹೂ ಕೀಳಲು ಹೋಗಿದ್ದರು.
ಕೆರೆಯ ದಡದಲ್ಲಿ ಮೊಬೈಲ್, ಚಪ್ಪಲಿ ಬಿಟ್ಟು ತಾವರೆ ಹೂ ಕೀಳಲು ತಂದೆ, ಮಗ ಮುಂದಾದಾಗ ಅವಘಡ ಸಂಭವಿಸಿದೆ. ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ಇಬ್ಬರು ಕೆರೆಯಲ್ಲಿ ಮುಳುಗಿರುವುದು ತಿಳಿದುಬಂದಿದೆ.
ಇದೀಗ ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.