BREAKING NEWS

ಷರತ್ತು ಸಹಿತ ಗ್ಯಾರಂಟಿಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಬೆಂಗಳೂರು : ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಷರತ್ತು ಸರಕಾರ ಮತ್ತು ಕಂಡಿಷನ್ಸ್ ಕಾಂಗ್ರೆಸ್ ಎಂದು ಮೂದಲಿಸಿದ್ದಾರೆ.

‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.

ಹಾಲಿ ಮುಖ್ಯಮಂತ್ರಿಗಳು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಅವರು ಎಚ್ಚರಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

11 hours ago