BREAKING NEWS

ಕೋವಿಡ್‌ ಸಮಯದಲ್ಲಿ ನಡೆದ ಅಕ್ರಮಗಳ ತನಿಖೆಗೆ ಸರ್ಕಾರ ಶಿಫಾರಸ್ಸು ಮಾಡಿದೆ: ದಿನೇಶ್‌ ಗುಂಡೂರಾವ್‌

ಬೆಂಗಳೂರು : ಕೋವಿಡ್ ಕಾಲಮಾನದಲ್ಲಿ ನಡೆದ ಅವ್ಯವಹಾರಗಳು ಹಾಗೂ ಇತರ ಅಕ್ರಮಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನ ಜಯನಗರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿ ಹಾಗೂ ಇತರ ವ್ಯವಹಾರಗಳಲ್ಲಿ ಮಾರುಕಟ್ಟೆ ದರ ಮೀರಿ, ಒಂದಕ್ಕೆ ಹತ್ತು ಪಟ್ಟು ದುಬಾರಿ ಬಿಲ್ ಪಾವತಿ ಮಾಡಲಾಗಿದೆ. ಈ ವಿಚಾರವನ್ನು ತನಿಖೆ ನಡೆಸಬೇಕೆಂದು ಆರಂಭದಿಂದಲೂ ಒತ್ತಡಗಳಿವೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಕೂಡ ವರದಿ ನೀಡಿವೆ ಎಂದರು.

ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪರಿಶೀಲನೆ ನಡೆಸಿ ನ್ಯಾಯಾಂಗ ತನಿಖೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಶಿಫಾರಸ್ಸು ಮಾಡಿದೆ ಎಂದು ಹೇಳಿದರು.

ಅನಾಥ ಶವಗಳು, ರಸ್ತೆಬದಿಗಳಲ್ಲಿ ಮೃತಪಟ್ಟವರ ಪಾರ್ಥೀವ ಶರೀರಗಳನ್ನು ಮಾರಾಟ ಮಾಡಿಕೊಳ್ಳುವಂತಹ ಮೆಡಿಕಲ್ ಮಾಫಿಯಾ ತಲೆ ಎತ್ತುತ್ತಿದೆ ಎಂಬ ಆರೋಪ ಗಂಭೀರವಾದದ್ದು. ಇದನ್ನು ಸರ್ಕಾರ ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಅಗತ್ಯ ಮಾಹಿತಿ ಕಲೆ ಹಾಕಲಾಗುವುದು. ಆರೋಪ ಮಾಡಿದವರಿಂದಲೂ ವಿವರಣೆ ಪಡೆದು ನಂತರ ತನಿಖೆಗೆ ಸಮಿತಿ ರಚಿಸಬೇಕೇ ಎಂಬುದರ ಬಗ್ಗೆ ನಿರ್ಧರಿಸುವುದಾಗಿ ಹೇಳಿದರು.

ತುರ್ತು ಸೇವೆಯಾದ ಆರೋಗ್ಯ ಕವಚ ಯೋಜನೆ ಸುಧಾರಣೆಗೆ ರಚಿಸಲಾಗಿರುವ ಸಮಿತಿ ವಾರದೊಳಗಾಗಿ ವರದಿ ನೀಡಲಿದ್ದು, ಮುಂದಿನ 2-3 ತಿಂಗಳೊಳಗಾಗಿ ಹೊಸ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದರು.

ಇತ್ತೀಚೆಗಷ್ಟೇ 170 ಹೊಸ ಆಂಬುಲೆನ್ಸ್‍ಗಳನ್ನು ಖರೀದಿಸಲಾಗಿದೆ. ಬಹಳ ವರ್ಷಗಳಿಂದಲೂ 108 ಸೇವೆ ಟೆಂಡರ್ ಇಲ್ಲದೆ ಹಳೆಯ ಒಪ್ಪಂದದ ಮೇಲೆಯೇ ಮುಂದುವರೆದುಕೊಂಡು ಬಂದಿವೆ. ಒಂದು ಕಾಲದಲ್ಲಿ ಮುಂಚೂಣಿಯಲ್ಲಿದ್ದ ಸೇವೆ ಈಗ ಹಿಂದುಳಿದಿದೆ. ಆಧುನಿಕ ತಂತ್ರಜ್ಞಾನ ಅಳವಡಿಕೆ, ಕ್ಷಿಪ್ರ ಪ್ರತಿಕ್ರಿಯೆ ಸೇರಿದಂತೆ ಹಲವರು ಲೋಪದೋಷಗಳಿವೆ. ಇವುಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.

ಕಳೆದ ಬಜೆಟ್‍ನಲ್ಲಿ ಘೊಷಿಸಲಾದ ಆಶಾಕಿರಣ ಯೋಜನೆಯನ್ನು ಇದೇ ತಿಂಗಳಿನಲ್ಲಿ ಉದ್ಘಾಟಿಸಲಾಗುವುದು. ಕಾಂಟ್ರಾಕ್ಟ್ ಲೆನ್ಸ್ ಮತ್ತು ಶಸ್ತ್ರಚಿಕಿತ್ಸೆ ಮೂಲಕ ನೆರವಾಗುವ ಮಹತ್ವದ ಯೋಜನೆ ಶೀಘ್ರವೇ ಜಾರಿಯಾಗಲಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ ಸುಮಾರು ವರ್ಷಗಳಿಂದ ನೇಮಕಾತಿಯಾಗಿಲ್ಲ. ಹೀಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸಿ ಮತ್ತು ಡಿ ದರ್ಜೆ ಸಿಬ್ಬಂದಿಗಳ ಕೊರತೆ ಇದೆ. ಇದನ್ನು ಬಗೆಹರಿಸಲು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ವೈದ್ಯರು, ಖಾಸಗಿ ಕ್ಲಿನಿಕ್ ಸೇರಿದಂತೆ ಇತರೆಡೆ ಕೆಲಸ ಮಾಡಲು ಅವಕಾಶ ಇದೆ. ಆದರೆ ಅದರಿಂದ ಸರ್ಕಾರಿ ಆಸ್ಪತ್ರೆಗಳ ಸೇವೆಗೆ ತೊಂದರೆ ಆಗಬಾರದೆಂಬ ಎಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.

ಸರ್ಕಾರಿ ವೈದ್ಯರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದರು.

ಜಯನಗರ ಆಸ್ಪತ್ರೆಯಲ್ಲಿ ರೇಡಿಯೋಲಾಜಿಸ್ಟ್ ಕೊರತೆ ಇದೆ ಎಂದು ಹೇಳಲಾಗಿದೆ. ಒಂದು ವಾರದೊಳಗಾಗಿ ಈ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯಾದ್ಯಂತ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲಾಗುತ್ತಿದೆ ಎಂದರು.

ದಕ್ಷಿಣ ಭಾರತದ ರಾಜ್ಯದಲ್ಲಿ ತಮಿಳುನಾಡು, ಕೇರಳಗಿಂತಲೂ ರಾಜ್ಯದ ಆರೋಗ್ಯ ಸೇವೆ ಹಿಂದುಳಿದಿರುವ ಬಗ್ಗೆ ವರದಿಯಿದೆ. ಇದನ್ನು ಸುಧಾರಿಸಲು ಸಾಕಷ್ಟು ಕ್ರಮ ಕೈಗೊಳ್ಳಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚಿನ ವ್ಯವಸ್ಥೆ ಕಲ್ಪಿಸಿ ಜೀವನಶೈಲಿ ಹಾಗೂ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು. ಏಕ ಬಳಕೆಯ ಡಯಾಲಿಸಿಸ್ ಸೇವೆ, 108 ತುರ್ತು ಸಹಾಯವಾಣಿ ಸುಧಾರಣೆ ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ಶಾಸಕ ಸಿ.ಕೆ.ರಾಮು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸಚಿವರ ಪರಿಶೀಲನೆ ವೇಳೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ವರ್ಗಾವಣೆಗೆ ಪತ್ರ ನೀಡಿದಾಗ ಸಚಿವರು ಸಿಡಿಮಿಡಿಗೊಂಡು ತರಾಟೆಗೆ ತೆಗೆದುಕೊಂಡರು.

andolanait

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

7 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

7 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

8 hours ago